ದಾವಣಗೆರೆ: ದಾವಣಗೆರೆ ಜಿಲ್ಲಾ ವ್ಯಾಪ್ತಿಯಲ್ಲಿ ಬಕ್ರೀದ್ ಹಬ್ಬದಂದು ಅನಧಿಕೃತ ಗೋವು, ಒಂಟೆ ಹತ್ಯೆ ತಡೆಯುವ ಸಲುವಾಗಿ ಜಿಲ್ಲಾ ಮಟ್ಟದ ಅನಧಿಕೃತ ಪ್ರಾಣಿಹತ್ಯೆ ತಡೆ ಸಮಿತಿಯ ಸಭೆಯು ಅಪರ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜರುಗಿತು. ಸಭೆಯಲ್ಲಿ ಜಿಲ್ಲೆಯ ನಗರ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ಅಕ್ರಮ ಜಾನುವಾರು ಸಾಗಾಣಿಕೆ ತಡೆಯಲು ಪೋಲಿಸ್ ಹಾಗೂ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು, ಸಕ್ಷಮ ಪ್ರಾಧಿಕಾರಿಗಳಾದ ತಹಶೀಲ್ದಾರರು ಹಾಗೂ ಪಶು ವೈದ್ಯಾಧಿಕಾರಿಗಳು ಅನಧಿಕೃತ ಹತ್ಯೆ ನಡೆಯದಂತೆ ಅಗತ್ಯ ಕ್ರಮವಹಿಸಲು ಸಮಿತಿಯ ಅಧ್ಯಕ್ಷ ಅಪರ ಜಿಲ್ಲಾಧಿಕಾರಿ ಸೂಚಿಸಿದ್ದಾರೆ.
ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ 2020 ರಂತೆ ಕ್ರಮವಹಿಸಲು ಹಾಗೂ ಪೂರಕವಾಗಿ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಆರೋಗ್ಯ ನಿರೀಕ್ಷಕರುಗಳ ತಂಡವನ್ನು ನಿಯೋಜಿಸುವಂತೆ ಆಯುಕ್ತರು, ಮುಖ್ಯಾಧಿಕಾರಿಗಳು ಹಾಗೂ ತಾಲ್ಲೂಕು ಪಂಚಾಯ್ತಿ ಕಾರ್ಯ ನಿರ್ವಹಣಾ ಅಧಿಕಾರಿಗಳಿಗೆ ಹಾಗೂ ಜಿಲ್ಲೆಯ ಎಲ್ಲಾ ಇಲಾಖೆ ಅಧಿಕಾರಿಗಳಿಗೆ ಯಾವುದೇ ಅಕ್ರಮ ಗೋವುಹತ್ಯೆ ನಡೆಯದಂತೆ ಅಗತ್ಯ ಕ್ರಮ ಜರುಗಿಸಲು ಸೂಚನೆ ನೀಡಿದ್ದಾರೆ.



