ದಾವಣಗೆರೆ: ಭದ್ರಾ ಜಲಾಶಯನ ಪ್ರದೇಶದಲ್ಲಿ ಸತತವಾಗಿ ಮಳೆ ಬೀಳುತ್ತಿದ್ದು, ಜಲಾಶಯಕ್ಕೆ ಬರುತ್ತಿರುವ ಒಳಹರಿವಿನ ಪ್ರಮಾಣ ಕ್ರಮೇಣ ಹೆಚ್ಚಾಗುತ್ತಿದೆ. ಜು.12 ರಂದು ಜಲಾಶಯದ ನೀರಿನ ಮಟ್ಟ 178 ಡಿಗ್ರಿ 10” ಅಡಿಗಿಂತ ಹೆಚ್ಚಾಗಿರುತ್ತದೆ.
ಪ್ರಸ್ತುತ ಹರಿದು ಬರುತ್ತಿರುವ ಒಳಹರಿವಿನ ಪ್ರಮಾಣ 30200 ಕ್ಯೂಸೆಕ್ ಆಗಿದೆ ಮುಂದಿನ ದಿನಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದ್ದು, ಇದೇ ರೀತಿ ಮುಂದುವರೆದಲ್ಲಿ ಭದ್ರಾ ಜಲಾಶಯವು ಗರಿಷ್ಠ ನೀರಿನ ಮಟ್ಟ 186 ಅಡಿಗಳಿಗೆ ಅತೀ ಶೀಘ್ರವಾಗಿ ಭರ್ತಿಯಾಗುವ ಸಂಭವಿರುತ್ತದೆ. ಅಣೆಕಟ್ಟು ಸುರಕ್ಷತೆಯ ಹಿತದೃಷ್ಠಿಯಿಂದ ಹಾಗೂ ಪ್ರವಾಹ ಪರಿಸ್ಥಿತಿಯ ನಿಯಂತ್ರಣಕ್ಕಾಗಿ ಮುಂಜಾಗೃತಾ ಕ್ರಮವಾಗಿ ಹೆಚ್ಚುವರಿ ನೀರನ್ನು ಯಾವ ಸಮಯದಲ್ಲಾದರೂ ಒಳಹರಿವಿನ ಪ್ರಮಾಣಕ್ಕೆ ಅನುಗುಣವಾಗಿ ಕ್ರೆಸ್ಟ್ ಗೇಟ್ ಮುಖಾಂತರ ನದಿಗೆ ಬಿಡಲಾಗುವುದು.
ಆದುದರಿಂದ ಭದ್ರಾ ನದಿಯ ಎಡ ಮತ್ತು ಬಲದಂಡೆಯ ಉದ್ದಕ್ಕೂ ತಗ್ಗು ಪ್ರದೇಶದಲ್ಲಿ ವಾಸಿಸುವ ಜನರು ಮುಂಜಾಗ್ರತೆಯಾಗಿ ಸುರಕ್ಷಿತ ಸ್ಥಳಗಳಿಗೆ ಹೋಗಬೇಕೆಂದು ತಿಳಿಸಿದೆ. ಹಾಗೂ ನದಿಪಾತ್ರದಲ್ಲಿ ಸಾರ್ವಜನಿಕರು ತಿರುಗಾಡುವುದು, ಜಾನುವಾರುಗಳನ್ನು ನದಿಪಾತ್ರದಲ್ಲಿ ಮೇಯಿಸುವುದನ್ನು ನಿಷೇಧಿಸಲಾಗಿದೆ ಎಂದು ಕ.ನೀನಿ.ನಿ ಭದ್ರಾ ಯೋಜನೆಯ ಅಧೀಕ್ಷಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



