ದಾವಣಗೆರೆ: ಭೂಮಿ ಕಳೆದುಕೊಳ್ಳುವ ಭಯದಲ್ಲಿ ರೈತರು ಕೈಗಾರಿಕೆ ಕಾರಿಡಾರ್ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಮೆಳ್ಳೆಕಟ್ಟೆ ಸುತ್ತಮುತ್ತಲಿನ ರೈತರು ವಿರೋಧ ಮಾಡುತ್ತಿರುವುದು ಗಮನಕ್ಕೆ ಬಂದಿದೆ. ರೈತರ ಜೊತೆ ಮುಂದಿನ ತಿಂಗಳು ಸಭೆ ನಡೆಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜ ಹೇಳುತ್ತಿದ್ದಾರೆ.
ಜಿಲ್ಲಾ ಕ್ರೀಡಾಂಗಣದಲ್ಲಿ ಮಾತನಾಡಿದ ಅವರು, ಕೈಗಾರಿಕಾ ಕಾರಿಡಾರ್ ಮಾಡುವುದು ಸೂಕ್ತ ಎಂಬುದು ನನ್ನ ಭಾವನೆ. ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸಬೇಕಾದರೆ ಹಲವಾರು ಕೈಗಾರಿಕೆಗಳು ಬಂದರೆ ಒಳ್ಳೆಯದು. ನೀರಾವರಿ ಪ್ರದೇಶ ಸ್ವಾಧೀನ ಪಡಿಸಿಕೊಳ್ಳುವ ಚಿಂತನೆ ಇಲ್ಲ. ಸೂಕ್ತ ಸ್ಥಳದ ಬಗ್ಗೆಯೂ ಸಮಾಲೋಚನೆ ನಡೆಸಲಾಗುವುದು ಎಂದರು.
ಕೈಗಾರಿಕಾ ಕಾರಿಡಾರ್ಗಾಗಿ ರೈತರಿಂದ ಬಲವಂತವಾಗಿ ಭೂಮಿ ವಶಪಡಿಸಿಕೊಳ್ಳುವುದಿಲ್ಲ. ಈ ಬಗ್ಗೆ ಸಮಾಲೋಚನೆ ನಡೆಸಲಾಗುವುದು. ದಾವಣಗೆರೆಯಲ್ಲಿ ವಿಮಾನ ನಿಲ್ದಾಣ ಸ್ಥಾಪನೆ ಕುರಿತಂತೆ ಕೇಂದ್ರದ ಸಂಬಂಧಪಟ್ಟ ಇಲಾಖೆಗೆ ವರದಿ ಸಲ್ಲಿಸಲಾಗಿದ್ದು, ಅಲ್ಲಿಂದ ಬರುವ ಉತ್ತರಕ್ಕೆ ಕಾಯುತ್ತಿದ್ದೇವೆ ಎಂದು ತಿಳಿಸಿದರು.
ಮಳೆಯಿಂದ ಬೆಳೆ ಹಾಗೂ ಮನೆ ಹಾನಿಗೀಡಾದವರಿಗೆ ಪರಿಹಾರ ನೀಡುವ ವಿಚಾರದಲ್ಲಿ ಜಿಲ್ಲಾಡಳಿತ ನ್ಯಾಯ ಒದಗಿಸುವ ಕೆಲಸವನ್ನು ಮಾಡುತ್ತದೆ. 4,200ಕ್ಕೂ ಹೆಚ್ಚು ಹೆಕ್ಟೇರ್ ಪ್ರದೇಶದಲ್ಲಿ ಹಾನಿ ಆಗಿದ್ದು, ಪರಿಹಾರ ನೀಡುವ ಕೆಲಸ ಪ್ರಗತಿಯಲ್ಲಿದೆ. ಸೂಕ್ತ ದಾಖಲಾತಿಗಳಿದ್ದರೆ ಜಿಲ್ಲಾಧಿಕಾರಿ ಹಾಗೂ ಸಿಇಒ ಅವರ ಗಮನಕ್ಕೆ ತನ್ನಿ. ಪರಿಹಾರ ದೊರಕಿಸಿಕೊಡಲು ಅವರು ಕ್ರಮ ಕೈಗೊಳ್ಳುತ್ತಾರೆ. ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ಸುರಿದ ಭಾರಿ ಮಳೆಯಿಂದಾಗಿ ಹಾನಿಯಾಗಿರುವ ಬಗ್ಗೆ ಸರ್ವೇ ನಡೆಸಲಾಗುತ್ತಿದೆ. ಸಂತ್ರಸ್ತರ ಮನೆ ಬಾಗಿಲಿಗೆ ಪರಿಹಾರ ದೊರಕಿಸಿಕೊಡಲು ಕ್ರಮ ವಹಿಸಲಾಗುವುದು ಎಂದರು.



