ಬೆಂಗಳೂರು: ರಾಜ್ಯದಲ್ಲಿ ಕೆಲವು ದಿನಗಳಿಂದ ತಗ್ಗಿದ್ದ ಮುಂಗಾರು ಮಳೆಯ ಅಬ್ಬರ ಆ.23ರಿಂದ ಮತ್ತೆ ಚುರುಕಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಮಲೆನಾಡು ಹಾಗೂ ರಾಜ್ಯದ ಒಳನಾಡಿನಲ್ಲಿ ಆಗಸ್ಟ್ ಮೊದಲ ವಾರದಲ್ಲಿ ಎಡೆಬಿಡದೆ ಮಳೆ ಸುರಿದು ಜನಜೀವನ ಅಸ್ತವ್ಯಸ್ಥಗೊಂಡಿತ್ತು.ಹಲವೆಡೆ ಭೂಕುಸಿತ, ಸಂಚಾರ ಕಡಿತ, ಮನೆ ಕುಸಿತ, ಜೀವಹಾನಿ, ಬೆಳೆ ನಷ್ಟ ಸಂಭವಿಸಿತ್ತು.
ಆ.23ರಿಂದ ರಾಜ್ಯದಲ್ಲಿ ಒಂದು ವಾರ ಕಾಲ ಉತ್ತಮ ಮಳೆಯಾಗುವ ಲಕ್ಷಣಗಳು ಕಂಡುಬರುತ್ತಿವೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಸಂಸ್ಥಾಪಕ ಹಾಗೂ ನಿವೃತ್ತ ವಿಶೇಷ ನಿರ್ದೇಶಕ ವಿ.ಎಸ್.ಪ್ರಕಾಶ್ ತಿಳಿಸಿದ್ದಾರೆ. ಕಳೆದ ಒಂದು ವಾರದಿಂದ ಬಿಡುವು ನೀಡಿರುವ ಮಳೆ ಇನ್ನು ಒಂದು ವಾರ ಮುಂದುವರೆಯಲಿದ್ದು, ಒಣ ಹವೆ ಇರಲಿದೆ. ಮತ್ತೆ ಮಳೆ ಬರುವುದರಿಂದ ಕೃಷಿಗೆ ಅನುಕೂಲಕರವಾಗಲಿದೆ ಎಂದು ತಿಳಿಸಿದರು.



