ದಾವಣಗೆರೆ: ಮಾಜಿ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಅವರ 55 ನೇ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಲು ಅಭಿಮಾನಿಗಳು ನಿರ್ಧರಿಸಿದ್ದಾರೆ. ಈ ಕಾರ್ಯಕ್ರಮದಲ್ಲಿ ನಟ ದರ್ಶನ್ ಭಾಗಿಯಾಗಲಿದ್ದಾರೆ. ಸೆ. 22ರಂದು ನಗರದ ಎಂಬಿಎ ಕಾಲೇಜು ಆವರಣದಲ್ಲಿ ಬರ್ತ್ ಡೇ ಆಚರಿಸಲು ಅಭಿಮಾನಿಗಳು ನಿರ್ಧರಿಸಿದ್ದಾರೆ. ಇಂದು ವೇದಿಕೆ ನಿರ್ಮಾಣದ ಗುದ್ದಲಿ ಪೂಜೆ ಹಾಗೂ ಪೋಸ್ಟರ್ ಬಿಡುಗಡೆ ಮಾಡಲಾಯಿತು.
ಈ ವೇಳೆ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್. ಬಿ. ಮಂಜಪ್ಪ, ಮಲ್ಲಿಕಾರ್ಜುನ್ ಅವರ 55 ನೇ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಬೇಕೆಂಬುದು ಅಭಿಮಾನಿಗಳ ನಿರ್ಧರಿಸಿದ್ದಾರೆ. 50 ರಿಂದ 60 ಸಾವಿರ ಜನರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ. ಪ್ರತಿ ತಾಲೂಕಿನಿಂದಲೂ ಕನಿಷ್ಠ 4ರಿಂದ 5 ಸಾವಿರ ಜನರು ಆಗಮಿಸುವ ನಿರೀಕ್ಷೆ ಇದೆ. ಅಂದು ಮಧ್ಯಾಹ್ನ 1 ಗಂಟೆಗೆ ಕಾರ್ಯಕ್ರಮ ಆರಂಭವಾಗಲಿದೆ. ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪರ ನೇತೃತ್ವದಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್, ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ, ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಎಂ. ಬಿ. ಪಾಟೀಲ್, ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್, ನಟಿ ಉಮಾಶ್ರೀ, ಮಾಜಿ ಸಚಿವರಾದ ಹೆಚ್. ಆಂಜನೇಯ, ಪಿ. ಟಿ. ಪರಮೇಶ್ವರ್ ನಾಯ್ಕ್, ಬಿ. ಎಲ್. ಶಂಕರ್, ಹಾಲಿ ಶಾಸಕ ರಾಮಪ್ಪ, ಜಿಲ್ಲೆಯ ಮಾಜಿ ಸಚಿವರು, ವಿಧಾನಪರಿಷತ್ ಸದಸ್ಯರು, ಪಕ್ಷದ ಮುಖಂಡರು ಸೇರಿದಂತೆ ಹಲವರು ಪಾಲ್ಗೊಳ್ಳಲಿದ್ದಾರೆ ಎಂದರು.
ಸಿದ್ದರಾಮಯ್ಯ ಅವರ 75 ನೇ ಹುಟ್ಟುಹಬ್ಬದ ಅಮೃತ ಮಹೋತ್ಸವ ಯಶಸ್ವಿಯಾಗಿ ನಡೆದಿದೆ. ಅದೇ ರೀತಿಯಲ್ಲಿ ಮಲ್ಲಿಕಾರ್ಜುನ್ ಅವರ ಸಮಾರಂಭ ನಡೆಯಬೇಕು. ಹೀಗಾಗಿ 55 ನೇ ವರ್ಷದ ಬರ್ತ್ ಡೇ ಅನ್ನು ಅದ್ಧೂರಿಯಾಗಿ ಆಚರಿಸಲಿದ್ದೇವೆ ಎಂದರು.
ಸೆ. 22ರಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಮಲ್ಲಿಕಾರ್ಜುನ್ ರ ಹುಟ್ಟುಹಬ್ಬದಲ್ಲಿ ಪಾಲ್ಗೊಳ್ಳಲಿದ್ದಾರೆ. ಸಂಜೆ ದರ್ಶನ್ ಆಗಮಿಸಲಿದ್ದು, ಸಂಗೀತ ನಿರ್ದೇಶಕ ವಿ. ಹರಿಕೃಷ್ಣ ಮ್ಯೂಸಿಕಲ್ ನೈಟ್ ಇರಲಿದೆ. ಈ ಮನರಂಜನಾ ಕಾರ್ಯಕ್ರಮ ಎಲ್ಲಿ ನಡೆಸಬೇಕು ಎಂಬುದು ಇನ್ನು ನಿರ್ಧಾರವಾಗಿಲ್ಲ. ಕಾರ್ಯಕ್ರಮ ನಡೆಯುವ ವಾರದ ಮುಂಚೆ ಮಾಹಿತಿ ನೀಡುತ್ತೇವೆ ಎಂದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ. ಶೆಟ್ಟಿ, ಕೆಪಿಸಿಸಿ ವಕ್ತಾರ ಡಿ. ಬಸವರಾಜ್, ದಾವಣಗೆರೆ ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕ ಗಡಿಗುಡಾಳ್ ಮಂಜುನಾಥ್, ಸದಸ್ಯ ಎ. ನಾಗರಾಜ್, ಕಾಂಗ್ರೆಸ್ ಮುಖಂಡರಾದ ಮುದ್ದೇಗೌಡ್ರು ಗಿರೀಶ್, ಬಸವಂತಪ್ಪ, ಕೆ. ಜಿ. ಶಿವಕುಮಾರ್, ಅಯೂಬ್ ಪೈಲ್ವಾನ್. ಮೊಹಮದ್ ಜಿಕ್ರಿಯಾ ಮತ್ತಿತರರು ಇದ್ದರು.



