ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆ ಇತಿಹಾಸದಲ್ಲೇ ಈ ರೀತಿಯ ಕೆಟ್ಟ ಆಡಳಿತ ನೋಡಿಲ್ಲ. ಮೇಯರ್ ಜಯಮ್ಮ ಗೋಪಿನಾಯ್ಕ್ ಅಧಿಕಾರ ವಹಿಸಿಕೊಂಡು ಎಂಟು ತಿಂಗಳಾದರೂ ಒಂದೇ ಒಂದು ಟೆಂಡರ್ ಕರೆದಿಲ್ಲ. ಪಾಲಿಕೆ ಅಧಿಕಾರಿಗಳು ಬೇಜವಾಬ್ದಾರಿತನದಿಂದಆಡಳಿತ ಯಂತ್ರ ಸಂಪೂರ್ಣವಾಗಿ ಕುಸಿದಿದೆ ಎಂದು ಪಾಲಿಕೆ ವಿರೋಧ ಪಕ್ಷದ ನಾಯಕ ಗಡಿಗುಡಾಳ್ ಮಂಜುನಾಥ್ ಕಿಡಿಕಾರಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯುಜಿಡಿ ವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟು ಹೋಗಿದೆ. ಜೋರು ಮಳೆಯಿಂದ ನೀರು ರಸ್ತೆ ಮೇಲೆ ನಿಂತಿರುತ್ತಿದೆ. ಇದರಿಂದ ಜನರ ಓಡಾಟಕ್ಕೆ ತೊಂದರೆ ಆಗಿದೆ. ಅಧಿಕಾರಿಗಳು ಹಾಗೂ ಮೇಯರ್ ಗಮನಕ್ಕೆ ತಂದಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಪಾಲಿಕೆ ಆಡಳಿತ ವರ್ಗ ಈ ಬಗ್ಗೆ ತಲೆಕೆಡಿಸಿಕೊಳ್ಳುತ್ತಿಲ್ಲ. ರಸ್ತೆಯನ್ನು ಎಲ್ಲೆಂದರಲ್ಲಿ ಗ ಅಗೆಯಲಾಗಿದೆ. ಕಾಮಗಾರಿ ಸರಿಯಾಗಿ ನಡೆಯುತ್ತಿಲ್ಲ. ಚಿಗಟೇರಿ ಆಸ್ಪತ್ರೆಗೆ ಹೋಗುವ ದಾರಿಯಲ್ಲಿ ಗುಂಡಿ ಅಗೆದಿದ್ದು, ಕಾಮಗಾರಿ ವೇಗವಾಗಿ ಸಾಗುತ್ತಿಲ್ಲ ಎಂದು ಆರೋಪಿಸಿದರು.
ಒಳಚರಂಡಿ ಅವ್ಯವಸ್ಥೆಯಿಂದ ಆಗಿರುವ ಸಮಸ್ಯೆಗಳು ಒಂದೆರಡಲ್ಲ. ಅಧಿಕಾರಿಗಳಿಗೆ ಕರೆ ಮಾಡಿದರೆ ಸ್ವೀಕರಿಸುವುದಿಲ್ಲ. ಮೇಯರ್ ಗಮನಕ್ಕೆ ತಂದರೂ ಉಡಾಫೆ ಮಾತನಾಡುತ್ತಾರೆ. ಇವರಿಗೆ ಜನರ ಕಷ್ಟ ಕೇಳುವ ಸಮಾಧಾನ ಇಲ್ಲ. ಸಾಮಾನ್ಯ ಸಭೆ ನಡೆಸಿ ನಾಲ್ಕೈದು ತಿಂಗಳಾಗಿದ್ದರೂ ಯಾವ ಕೆಲಸ ಆಗುತ್ತಿಲ್ಲ. ಆಡಳಿತ ಸಂಪೂರ್ಣ ನಿಷ್ಕ್ರಿಯಗೊಂಡಿದೆ. ಸಮಸ್ಯೆ, ಸಂಕಷ್ಟಗಳಿಗೆ ಸ್ಪಂದಿಸಿ ಅಭಿವೃದ್ಧಿ ಕೆಲಸ ಮಾಡಲಿ. ಇಲ್ಲದಿದ್ದರೆ ಅಧಿಕಾರ ಬಿಟ್ಟು ತೊಲಗಲಿ ಎಂದರು.
ರಾಜ್ಯ ಸರ್ಕಾರದಿಂದ ಹಣ ತರುವಲ್ಲಿ ಪಾಲಿಕೆ ಆಡಳಿತ ವಿಫಲವಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರ ಬಳಿ ಅನುದಾನ ಕೇಳಲು ನಿಯೋಗ ಹೋಗುತ್ತೇವೆ ಎಂದಿದ್ದ ಬಿಜೆಪಿ ಸದಸ್ಯರು ಯಾಕೆ ಇದುವರೆಗೆ ಹೋಗಿಲ್ಲ ಎಂದರು. ಈ ಸಂದರ್ಭದಲ್ಲಿ ಪಾಲಿಕೆ ಸದಸ್ಯರಾದ ಚಮನ್ ಸಬಾ್,ಅಬ್ದುಲ್ ಲತೀಫ್,ವಿನಾಯಕ ಪೈಲ್ವಾನ್,ಮಂಜುನಾಥ್ ಇಟ್ಟಿಗುಡಿ,ಗಣೇಶ್ ಹುಲ್ಲುಮನಿ,ಜಗದೀಶ್ ,ಉಮೇಶ್ ಇದ್ದರು.



