ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆಗೆ 15ನೇ ಹಣಕಾಸು ಯೋಜನೆಯಡಿ ಬಂದಿರುವ 29 ಕೋಟಿ ರೂಪಾಯಿಯನ್ನು ತಾರತಮ್ಯ ಮಾಡದೆ ಎಲ್ಲ ವಾರ್ಡ್ ಗೂ ಹಂಚಿಕೆ ಮಾಡುವಂತೆ ಪಾಲಿಕೆ ವಿಪಕ್ಷ ನಾಯಕ ಗಡಿಗುಡಾಳ್ ಮಂಜುನಾಥ್ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಅವರಿಗೆ ಮನವಿ ಸಲ್ಲಿಸಿದರು.
ಸರ್ಕಾರದಿಂದ ಅನುದಾನ ಬಂದಿದ್ದರೂ ಇದುವರೆಗೆ ಬಿಡುಗಡೆಗೆ ಮಾಡಿಲ್ಲ. ಜಯಮ್ಮ ಗೋಪಿನಾಯ್ಕ್ ಮೇಯರ್ ಆಗಿ ಎಂಟು ತಿಂಗಳಾಗಿದ್ದರೂ, 15ನೇ ಹಣಕಾಸು ಯೋಜನೆಯ ಹಣ ಹಂಚಿಕೆ ಮಾಡಿಲ್ಲ. ಹಣ ಹಂಚಿಕೆಯಲ್ಲಿ ತಾರತಮ್ಯ ಮಾಡಲಾಗಿದೆ ಆರೋಪಿಸಿದರು. ಜಿಲ್ಲಾಧಿಕಾರಿಗಳು ಮಧ್ಯ ಪ್ರವೇಶ ಮಾಡಿ, ಸರಿಯಾಗಿ ಅನುದಾನ ಹಂಚಿಕೆ ಮಾಡಬೇಕು ಎಂದರು.
ಸಾಮಾನ್ಯ ಸಭೆಯಲ್ಲಿ ಯಾವುದೇ ಪಕ್ಷಪಾತ ಇಲ್ಲದೆ ಅನುದಾನ ಹಂಚಿಕೆ ಮಾಡುವುದಾಗಿ ಮೇಯರ್ ಭರವಸೆ ನೀಡಿದ್ದರು. ಸಭೆಯಲ್ಲಿ ಎಲ್ಲಾ ವಾರ್ಡ್ಗಳಿಗೂ ತಲಾ 25 ಲಕ್ಷ ರೂಪಾಯಿ ಅನುದಾನ ನೀಡುವುದಾಗಿ ಹೇಳಿದ್ದರು.ಆದರೆ, ಭರವಸೆ ಈಡೇರಿಲ್ಲ. ಅದರಲ್ಲೂ ಕಾಂಗ್ರೆಸ್ ಸದಸ್ಯರ ವಾರ್ಡ್ಗಳಿಗೆ ಸರಿಯಾಗಿ ಅನುದಾನ ನೀಡಿಲ್ಲ. ಹೀಗಾಗಿ ಅಭಿವೃದ್ಧಿ ಕಾರ್ಯಗಳು ಆಗುತ್ತಿಲ್ಲ ಎಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.



