ದಾವಣಗೆರೆ: ದಾವಣಗೆರೆ ತಾಲ್ಲೂಕಿನ ಅನೌಪಚಾರಿಕ ಪಡಿತರ ಪ್ರದೇಶದಲ್ಲಿ ವಿವಿಧೆಡೆ ಅಕ್ರಮವಾಗಿ ಸಂಗ್ರಹಿಸಿಟ್ಟುಕೊಳ್ಳಲಾಗಿದ್ದ ಪಡಿತರ ಅಕ್ಕಿಯನ್ನು ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ಮತ್ತು ಪೊಲೀಸ್ ಇಲಾಖೆ ಸಹಯೋಗದಲ್ಲಿ ಪತ್ತೆ ಮಾಡಿ, ಜಪ್ತಿ ಮಾಡಿಕೊಳ್ಳಲಾದ ಧಾನ್ಯವನ್ನು ನ.24 ರಂದು ದಾವಣಗೆರೆಯ ಸಹಾಯಕ ನಿರ್ದೇಶಕರ ಸಮಕ್ಷಮದಲ್ಲಿ ಬಹಿರಂಗ ಹರಾಜು ಮಾಡಲಾಗುವುದು, ಆಸಕ್ತರು ಹರಾಜು ಪ್ರಕ್ರಿಯೆಯಲ್ಲಿ ಭಾಗವಹಿಸುವಂತೆ ಸೂಚನೆ ನೀಡಲಾಗಿದೆ.
ದಾವಣಗೆರೆ ಅನೌಪಚಾರಿಕ ಪಡಿತರ ಪ್ರದೇಶದ ಬೇತೂರು ರಸ್ತೆಯಿಂದ ರಿಂಗ್ ರಸ್ತೆ ಮುಖಾಂತರವಾಗಿ ಒಂದು ಬೊಲೋರೋ ವಾಹನದಲ್ಲಿ ಸಾಗಿಸುತ್ತಿದ್ದ 68.68 ಕ್ವಿಂಟಾಲ್ ಅಕ್ಕಿಯನ್ನು ಅಕ್ಕಿಯನ್ನು ಆಗಸ್ಟ್-16 ರಂದು ಆಹಾರ ನಿರೀಕ್ಷಕರು ಭಾಗ-1 ಮತ್ತು ಪೊಲೀಸ್ ಉಪನಿರೀಕ್ಷಕರು ಪತ್ತೆ ಮಾಡಿ, ಜಪ್ತಿ ಮಾಡಿಕೊಂಡಿದ್ದರು.
ಜಪ್ತಿ ಮಾಡಿಕೊಳ್ಳಲಾಗಿರುವ ಅಕ್ಕಿಯನ್ನು ಜಿಲ್ಲಾಧಿಕಾರಿಗಳ ಸೂಚನೆಯಂತೆ, ನ.24 ರಂದು ಬೆಳಿಗ್ಗೆ 10.30ಕ್ಕೆ ಆಯಾ ಪ್ರಮಾಣಕ್ಕೆ ಅನುಗುಣವಾಗಿ ವಿವಿಧ ಸಮಯದಲ್ಲಿ ಕೆ.ಎಫ್.ಸಿ.ಎಸ್.ಸಿ ಸಗಟು ಮಳಿಗೆ 1, ಎ.ಪಿ.ಎಂ.ಸಿ ಆವರಣ, ದಾವಣಗೆರೆ ಇಲ್ಲಿ ಸಹಾಯಕ ನಿರ್ದೇಶಕರ ಸಮಕ್ಷಮದಲ್ಲಿ ಬಹಿರಂಗ ಹರಾಜು ಮಾಡಲಾಗುವುದು.
ಹರಾಜಿನಲ್ಲಿ ಭಾಗವಹಿಸುವ ಬಿಡ್ಡುದಾರರು ಎಪಿಎಂಸಿ ಟ್ರೇಡ್ ಲೈಸೆನ್ಸ್ನೊಂದಿಗೆ ಹಾಜರಾಗಬೇಕು. ಬಿಡ್ಡುದಾರರು ಹರಾಜು ದಿನ ಒಂದು ಗಂಟೆ ಮುಂಚೆ ಬಂದು ಶೇ. 10 ರಷ್ಟು ಮೊಬಲಗನ್ನು ಮುಂಗಡ ಠೇವಣಿಯಾಗಿ ಇಡಬೇಕು. ತಪ್ಪಿದಲ್ಲಿ ಅಂತಹವರಿಗೆ ಹರಾಜಿನಲ್ಲಿ ಭಾಗವಹಿಸಲು ಅವಕಾಶವಿಲ್ಲ. ಹೆಚ್ಚಿನ ಮಾಹಿತಿಯನ್ನು ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಿಂದ ಪಡೆಯಬಹುದು ಎಂದು ಪ್ರಕಟಣೆ ತಿಳಿಸಿದೆ.



