ಹೈದರಾಬಾದ್: ರಾಷ್ಟ್ರೀಯ ಪೌರತ್ವ ನೋಂದಣಿ (ಎನ್ಆರ್ಸಿ) ಜಾರಿ ವಿರುದ್ಧ ದೇಶಾದ್ಯಂತ ಭಾರೀ ಪ್ರತಿಭಟನೆ ವ್ಯಕ್ತವಾಗುತ್ತಿದೆ. ಇದರ ಬೆನ್ನಲ್ಲಿಯೇ ಎನ್ಆರ್ ಸಿ ಜಾರಿ ಮಾಡುವುದಿಲ್ಲ ಎಂದು ಆಂಧ್ರಪ್ರದೇಶ ಸಿಎಂ ಜಗನ್ ಮೋಹನ್ ರೆಡ್ಡಿ ಘೋಷಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಜಗನ್, ಎನ್ಆರ್ಸಿ ಜಾರಿ ಮಾಡುವ ಕುರಿತು ಸಂಸದರು, ಶಾಸಕರಿಗೆ ಅಭಿಪ್ರಾಯ ತಿಳಿಸುವಂತೆ ಹೇಳಿದ್ದೆ. ಎನ್ಆರ್ ಸಿ ಜಾರಿ ಕುರಿತು ಸಂಸದರು ಅಸಮ್ಮತಿ ಸೂಚಿಸಿದ್ದಾರೆ. ಹಿನ್ನೆಲೆಯಲ್ಲಿ ಸದ್ಯ ಈ ಕುರಿತು ಸ್ಪಷ್ಟ ನಿರ್ಧಾರ ಕೈಗೊಳ್ಳಲು ಸಾಧ್ಯವಿಲ್ಲ. ಹೀಗಾಗಿ ಆಂಧ್ರಪ್ರದೇಶದಲ್ಲಿ ಎನ್ಆರ್ಸಿ ಕಾಯ್ದೆಯನ್ನು ಜಾರಿ ಮಾಡುವುದಿಲ್ಲ ಎಂದಿದ್ದಾರೆ.
ದೇಶದಲ್ಲಿ ಇದುವರೆಗೂ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ಬಿಹಾರ್ ಸಿಎಂ ನಿತಿಶ್ ಕುಮಾರ್, ಒಡಿಶಾ ಸಿಎಂ ನವೀನ್ ಪಟ್ನಾಯಕ್, ಪಂಜಾಬ್ ಸಿಎಂ ಅಮರೀಂದರ್ ಸಿಂಗ್, ಮಧ್ಯ ಪ್ರದೇಶ ಸಿಎಂ ಕಮಲ್ನಾಥ್, ರಾಜಸ್ಥಾನ ಸಿಎಂ ಆಶೋಕ್ ಗೆಹ್ಲೋಟ್, ಕೇರಳ ಸಿಎಂ ಪಿಣರಾಯಿ ವಿಜಯನ್ ಅವರು ಎನ್ಆರ್ಸಿ ಜಾರಿ ಮಾಡುವುದಿಲ್ಲ ಎಂದಿದ್ದಾರೆ.



