ದಾವಣಗೆರೆ: ಏಡ್ಸ್ ನಿಯಂತ್ರಣಕ್ಕೆ ಸಾರ್ವಜನಿಕರ ಸಹಕಾರ ಅಗತ್ಯ. ಇಂತಹ ಮಾರಕ ರೋಗಗಳ ಬಗ್ಗೆ ಅರಿವು ಮೂಡಿಸಲು ಸಂಘ ಸಂಸ್ಥೆಗಳ ಸಹಕಾರ ಅಗತ್ಯವಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗರಾಜ ಹೇಳಿದರು.
ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಷನ್ ಸೊಸೈಟಿ, ಜಿಲ್ಲಾಡಳಿತ, ಜಿ.ಪಂ., ಜಿಲ್ಲಾ ಆರೋಗ್ಯ ಇಲಾಖೆ, ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಚಿಗಟೇರಿ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಗುರುವಾರ ಏರ್ಪಡಿಸಲಾದ ವಿಶ್ವ ಏಡ್ಸ್ ದಿನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಹೆಚ್ಐವಿ ಸೋಂಕಿತರ ಸಂಖ್ಯೆ ಇಳಿಮುಖವಾಗುತ್ತಿದೆ ಎಂದರು.
ಹೆಚ್ಐವಿ ಸೋಂಕು ಹೊಂದಿರುವವರ ಜೊತೆಯಲ್ಲಿ ಊಟ ತಿಂಡಿ, ಬಟ್ಟೆ ಹಂಚಿಕೊಳ್ಳುವುದರಿಂದ, ಒಂದೇ ಸ್ನಾನದ ಮನೆ, ಅಡುಗೆ ಮನೆ, ಶೌಚಾಲಯ ಬಳಸುವುದರಿಂದ ಸೋಂಕು ಇತರರಿಗೆ ಹರಡುವುದಿಲ್ಲ. ಈ ಬಗ್ಗೆ ಯಾರಿಗೂ ಆತಂಕಬೇಡ. ಆದರೆ ಸೋಂಕಿತರೊಂದಿಗೆ ಅಸುರಕ್ಷಿತ ಲೈಂಗಿಕ ಸಂಪರ್ಕ ಹೊಂದಿದರೆ, ಸೋಂಕಿತರಿಂದ ಪಡೆಯುವ ರಕ್ತದಾನದಿಂದ, ಸಂಸ್ಕರಣೆ ಮಾಡದ ಸೂಜಿ, ಸಿರಿಂಜ್ ಬಳಕೆಯಿಂದ ಹೆಚ್ಐವಿ ಸೋಂಕು ಇತರರಿಗೆ ಹರಡುತ್ತದೆ. ಹೀಗಾಗಿ ಸೋಂಕಿತರನ್ನು ಸಾಮಾಜಿಕವಾಗಿ ದೂರವಿರಿಸುವುದು, ತಿರಸ್ಕರಿಸುವುದು ಸರಿಯಲ್ಲ ಎಂದರು.
‘ಏಡ್ಸ್ ಅಂತ್ಯಗೊಳಿಸಿ ಅಸಮಾನತೆಗಳನ್ನು ಕೊನೆಗಾಣಿಸಲು ಪ್ರತಿಯೊಬ್ಬರ ಆರೋಗ್ಯವನ್ನು ಕಾಪಾಡಲು ಹಾಗೂ ಪ್ರತಿಯೊಬ್ಬರನ್ನು ಖುಷಿಯಾಗಿಡಲು ವಿಶ್ವವು ಒಂದಾಗಬೇಕೆಂಬ’ ಎಂಬ ಘೋಷವಾಕ್ಯದೊಂದಿಗೆ ಈ ವರ್ಷ ವಿಶ್ವ ಏಡ್ಸ್ ದಿನ ಆಚರಿಸಲಾಗುತ್ತಿದೆ. ಹೆಚ್.ಐ.ವಿ.ಸೋಂಕಿತರಿಗೆ ದಾವಣಗೆರೆ ಜಿಲ್ಲೆಯಲ್ಲಿಯೇ ಉತ್ತಮವಾದ ಹಾಗೂ ಉಚಿತವಾಗಿ ಚಿಕಿತ್ಸೆ ನೀಡುವ ಸೌಲಭ್ಯ ಲಭ್ಯವಿದೆ. 2030 ರೊಳಗೆ ದೇಶವನ್ನು ಏಡ್ಸ್ ಮುಕ್ತಗೊಳಿಸುವ ಗುರಿಯಿದ್ದು, ಎಲ್ಲರೂ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡರೆ ದೇಶವನ್ನು ಏಡ್ಸ್ ಮುಕ್ತಗೊಳಿಸುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದರು.
ಹೆಚ್ಐವಿ ಸೋಂಕಿತರೊಂದಿಗೆ ಕುಳಿತು ಊಟ ಮಾಡಿದರೆ ಅಥವಾ ಒಂದೇ ಮನೆಯಲ್ಲಿ ವಾಸವಿದ್ದ ಮಾತ್ರಕ್ಕೆ ಸೋಂಕು ಇತರರಿಗೆ ಹರಡುವುದಿಲ್ಲ. ಹೀಗಾಗಿ ಹೆಚ್ಐವಿ ಸೋಂಕಿತರನ್ನು ಸಾಮಾಜಿಕವಾಗಿ ದೂರವಿರಿಸುವುದು ಸರಿಯಲ್ಲ ಎಂದು ಜಿಲ್ಲಾ ಏಡ್ಸ್ ಪ್ರತಿಬಂಧಕ ಮತ್ತು ನಿಯಂತ್ರಣ ಘಟಕದ ಅಧಿಕಾರಿ ಡಾ. ಕೆ.ಹೆಚ್. ಗಂಗಾಧರ್ ಹೇಳಿದರು.
ಇದಕ್ಕೂ ಮುನ್ನ ಚಿಗಟೇರಿ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಏಡ್ಸ್ ಕುರಿತ ಜಾಗೃತಿ ಜಾಥಾಕ್ಕೆ ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಹಸಿರು ನೀಶಾನೆ ಮೂಲಕ ಚಾಲನೆ ನೀಡಿ, ಪ್ರತಿಜ್ಞಾವಿಧಿ ಬೋಧಿಸಿದರು.
ಏಡ್ಸ್ ನಿಯಂತ್ರಣ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಉತ್ತಮ ಸೇವೆ ಸಲ್ಲಿಸಿದ ಎಸ್.ಎಸ್ ಟ್ರಸ್ಟ್ನ ಡಾ.ಶುಭಾ, ಸ್ವಾಮಿ ವಿವೇಕಾನಂದ ಯೂತ್ ಮೂವ್ ಮೆಂಟ್ ಸಂಸ್ಥೆಯ ಶ್ರೀಮತಿ ಹೀನಾಬಾನು, ಬೆಳಕು ಸ್ವಯಂ ಸೇವಾ ಸಂಸ್ಥೆಯ ಶ್ಯಾಮಲಾಂಗಿ ಇವರಿಗೆ ಪ್ರಶಂಸಾ ಪತ್ರ ನೀಡಲಾಯಿತು.
ಇದೇ ಸಂದರ್ಭದಲ್ಲಿ ಚಿಗಟೇರಿ ಜಿಲ್ಲಾ ಆಸ್ಪತ್ರೆಯ ಡಾ.ಷಣ್ಮುಖಪ್ಪ, ಡಾ ಮುರುಳಿಧರ್, ಡಾ.ರೇಣುಕಾರಾದ್ಯ ಇತರರು ಭಾಗವಹಿಸಿದ್ದರು.



