ಡಿವಿಜಿ ಸುದ್ದಿ, ಮೈಸೂರು: ಸಾಹಸ ಸಿಂಹ ಡಾ. ವಿಷ್ಣುವರ್ಧನ್ ಅವರ 10ನೇ ಪುಣ್ಯ ಸ್ಮರಣೆ ಅಂಗವಾಗಿ ಮೈಸೂರಿನ ಹೊರವಲಯದ ವಿಷ್ಣು ಸ್ಮಾರಕ ಸ್ಥಳದಲ್ಲಿ ಭಾರತಿ ವಿಷ್ಣುವರ್ಧನ್ ಪೂಜೆ ಸಲ್ಲಿಸಿದರು.
ಅಭಿಮಾನಿಗಳ ಸಮ್ಮುಖದಲ್ಲಿ ಭಾರತಿ ವಿಷ್ಣುವರ್ಧನ್ ಪೂಜೆ ಸಲ್ಲಿಸಿದರು. ಪುಣ್ಯಸ್ಮರಣೆ ಅಂಗವಾಗಿ ರಕ್ತದಾನ, ಆರೋಗ್ಯ ತಪಾಸಣೆ ಕಾರ್ಯಕ್ರಮ ನಡೆಯಿತು. ಈ ವೇಳೆ ಮಾಧ್ಯಮದವರ ಜೊತೆ ಮಾತನಾಡಿದ ಭಾರತಿ ವಿಷ್ಣುವರ್ಧನ್, ಹತ್ತು ವರ್ಷಗಳ ನಂತರ ಒಳ್ಳೆಯ ದಿನಗಳು ಬಂದಿವೆ. ಇನ್ನೊಂದು ವಾರದಲ್ಲಿ ಸ್ಮಾರಕ ಜಾಗದಲ್ಲಿ ಕಟ್ಟಡ ನಿರ್ಮಾಣ ಕಾರ್ಯ ಆರಂಭವಾಗಲಿದೆ ಎಂದರು.
ವಿಷ್ಣುವರ್ಧನ್ ನಿಧನರಾಗಿ ಹತ್ತು ವರ್ಷಗಳಾಗಿದ್ದು, ಅಭಿಮಾನಿಗಳ ಪ್ರೀತಿ, ವಿಶ್ವಾಸ ಇನ್ನು ಕಡಿಮೆಯಾಗಿಲ್ಲ. ಅವರ ಘನತೆಗೆ ಯಾವುದೇ ಧಕ್ಕೆಯಾಗಿಲ್ಲ. ವಿಷ್ಣು ಇನ್ನೂ ನಮ್ಮೊಂದಿಗೆ ಇದ್ದಾರೆ. ಸ್ಮಾರಕ ವಿಷ್ಣು ಅವರ ಕನಸು. ಸ್ಮಾರಕ ಜಾಗದಲ್ಲಿ ಜನಪರ ಕೆಲಸಗಳಾಬೇಕು ಎಂಬುದು ಅವರ ಬಯಕೆಯಾಗಿತ್ತುಎಂದರು.
ಕಟ್ಟಡದ ರೂಪುರೇಷೆ ಬಗ್ಗೆ ಮುಂದಿನ ದಿನಗಳಲ್ಲಿ ಮಾಹಿತಿ ನೀಡಲಾಗುವುದು. ಸಿಎಂ ಯಡಿಯೂರಪ್ಪ ಅವರು ಸ್ಮಾರಕ ಜಾಗದಲ್ಲಿ ಕಟ್ಟಡ ನಿರ್ಮಾಣಕ್ಕೆ ಸಹಾಯ ನೀಡುವ ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.



