ದಾವಣಗೆರೆ: ಜಾಗತಿಕ ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರಗಳಲ್ಲಿ ಭಾರತ ದೇಶದ ಕೊಡುಗೆ ಅಪಾರ ಎಂದು ಐಸಿಎಆರ್ ತರಳಬಾಳು ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ ಹಾಗೂ ಮುಖ್ಯಸ್ಥ ಡಾಕ್ಟರ್ ದೇವರಾಜ ಟಿಎನ್ ತಿಳಿಸಿದರು.
ಐಸಿಎಆರ್ ತರಳಬಾಳು ಕೃಷಿ ವಿಜ್ಞಾನ ಕೇಂದ್ರ, ದಾವಣಗೆರೆ ಹಾಗೂ ಕುವೆಂಪು ವಿದ್ಯಾ ಸಂಸ್ಥೆ, ಶ್ಯಾಗಲೆ ಇವರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಹಾಗೂ ಅಂತರಾಷ್ಟ್ರೀಯ ಸಿರಿ ಧಾನ್ಯಗಳ ವರ್ಷ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ದೇಶದಲ್ಲಿ ಎಲ್ಲಾ ಕ್ಷೇತ್ರಗಳಲ್ಲಿಯೂ ಸಹ ವಿಜ್ಞಾನದ ಕೊಡುಗೆ ಅಪಾರವಾಗಿದ್ದು ಹೊಸ ಸಂಶೋಧನೆಯಿಂದ ಆಧುನಿಕ ತಂತ್ರಜ್ಞಾನಗಳನ್ನು ಅಳವಡಿಸುವ ನಿಟ್ಟಿನಲ್ಲಿ ಯುವಕರ ಪಾತ್ರ ಹೆಚ್ಚಾಗಬೇಕಿದೆ; ಗ್ರಾಮೀಣ ಪ್ರದೇಶದ ಮಕ್ಕಳಲ್ಲಿ ಕಲಿಕೆಗಾಗಿ ಪ್ರಶ್ನಿಸುವ ಅಭಿರುಚಿ ಬೆಳೆಯಬೇಕು; ಇಂಗ್ಲೀಷ್ ಬಗೆಗಿನ ಕಾಠಿಣ್ಯವೆಂಬ ಧೋರಣೆಯನ್ನು ಬದಲಾಯಿಸಲು ಕೆಲ ಸುಲಭ ಸೂತ್ರಗಳನ್ನು ವಿದ್ಯಾರ್ಥಿಗಳೊಂದಿಗೆ ಹಂಚಿಕೊಂಡರು.
ಪ್ರಾಸ್ತಾವಿಕವಾಗಿ ಮಾತನಾಡಿದ ಕೇಂದ್ರದ ತೋಟಗಾರಿಕಾ ವಿಜ್ಞಾನಿ ಬಸವನಗೌಡ ಎಂ ಜಿ, ಇಂದು ಕೃಷಿ ಕ್ಷೇತ್ರದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನಗಳ ಕೊಡುಗೆಯಿಂದಾಗಿ ಆಹಾರದಲ್ಲಿ ನಮ್ಮ ದೇಶ ಸ್ವಾವಲಂಬಿಯಾಗಲು ಸಾಧ್ಯವಾಗಿದೆ. ಇಡೀ ಜಗತ್ತಿಗೆ ಆಹಾರವನ್ನು ಪೂರೈಸುವ ನಿಟ್ಟಿನಲ್ಲಿ ನಾವು ಯಶಸ್ವಿಯಾಗಲು ವಿಜ್ಞಾನದ ಕೊಡುಗೆ ಅಪಾರವಾಗಿದೆ ಎಂದು ಅಭಿಪ್ರಾಯಪಟ್ಟರು. ಇಂದು ಆಹಾರ ಮತ್ತು ಆರೋಗ್ಯದ ಬಗ್ಗೆ ಜನರಲ್ಲಿ ಅತೀವ ಜಾಗೃತಿ ಮೂಡಿದ್ದು ಸಿರಿಧಾನ್ಯಗಳ ಬಳಕೆಯಿಂದಾಗಿ ಉತ್ತಮ ಆರೋಗ್ಯ ಹೊಂದಲು ಸಹಾಯವಾಗುವುದು. ದಿನಕ್ಕೊಂದು ಸಿರಿಧಾನ್ಯ ತಿಂದರೆ ರೋಗ ಮುಕ್ತ ಜೀವನವನ್ನು ನಡೆಸಬಹುದೆಂದು ಅವರು ಕಾರ್ಯಕ್ರಮದಲ್ಲಿ ತಿಳಿಸಿದರು.
ಕೇಂದ್ರದ ಬೇಸಾಯ ತಜ್ಞ ಮಲ್ಲಿಕಾರ್ಜುನ ಬಿಒ ಮಾತನಾಡಿ, ಸಿರಿ ಧಾನ್ಯಗಳ ಬೆಳೆಗಳನ್ನು ಪ್ರೋತ್ಸಾಹಿಸಲು ಸರ್ಕಾರ ಪ್ರತಿ ಹೆಕ್ಟರಿಗೆ 10,000 ಗಳ ಪ್ರೋತ್ಸಾಹ ಧನವನ್ನು ನೀಡುತ್ತಿದ್ದು ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ತಿಳಿಸಿದರು.
ಕುವೆಂಪು ವಿದ್ಯಾ ಸಂಸ್ಥೆಯ ಕಾರ್ಯದರ್ಶಿ ಸಿದ್ದಪ್ಪ ಬಿಸಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಇಂದು ರಾಷ್ಟ್ರೀಯ ವಿಜ್ಞಾನ ದಿನಾಚರಣೆಯನ್ನು ವಿಜ್ಞಾನಿಗಳೊಂದಿಗೆ ಆಚರಿಸಿದ್ದು ನಮ್ಮ ಸಂಸ್ಥೆಯ ಅದೃಷ್ಟವೇ ಸರಿ. ಭಾರತ ದೇಶದಲ್ಲಿ ಓದಿದ ಹಲವಾರು ವಿಜ್ಞಾನಿಗಳು ಪ್ರಪಂಚದ ಮೂಲೆ ಮೂಲೆಗಳಲ್ಲಿ ತಮ್ಮ ಕೊಡುಗೆಗಳನ್ನು ನೀಡುತ್ತಿರುವುದು ನಮ್ಮ ತಾಯಿನಾಡಿಗೆ ಸಂದ ಗೌರವ ಎಂದು ಅವರು ತಿಳಿಸಿದರು.
ಅಂತರರಾಷ್ಟ್ರೀಯ ಸಿರಿಧಾನ್ಯ ವರ್ಷದ ಅಂಗವಾಗಿ ಶಾಲೆಯ ವಿದ್ಯಾರ್ಥಿಗಳಿಗೆ ಚಿತ್ರಕಲೆ ಮತ್ತು ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಿ ವಿಜೇತರಾದವರಿಗೆ ಬಹುಮಾನವನ್ನು ವಿತರಿಸಲಾಯಿತು. ಇದೇ ಸಮಯದಲ್ಲಿ ಎಲ್ಲಾ ಶಾಲಾ ವಿದ್ಯಾರ್ಥಿಗಳಿಗೆ ಸಿರಿಧಾನ್ಯದಿಂದ ತಯಾರಿಸಿದ ಬಿಸ್ಕೆಟ್ ಅನ್ನು ನೀಡಿ ಪ್ರೋತ್ಸಾಹಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯೋಪಾಧ್ಯಾಯರಾದ ಶ್ರೀ ಹನುಮಂತಪ್ಪ, ಬಸವರಾಜ್, ಆಕಾಶ್, ಕುವೆಂಪು ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳು ಭಾಗವಹಿಸಿದ್ದರು.



