ದಾವಣಗೆರೆ: ಚನ್ನಗಿರಿ ಶಾಸಕ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಕಚೇರಿ ಹಾಗೂ ಮನೆಯಲ್ಲಿ ಕೋಟ್ಯಂತರ ಹಣ ಪತ್ತೆ ಹಿನ್ನಲೆ ಕಾಂಗ್ರೆಸ್ ಪಕ್ಷದಿಂದ ಚನ್ನಗಿರಿ, ದಾವಣಗೆರೆ ಬೃಹತ್ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯಲ್ಲಿ ಮಾಡಾಳ್ ವಿರೂಪಾಕ್ಷಪ್ಪ ಭಾವಚಿತ್ರ ಬೆಂಕಿ ಇಟ್ಟು ಆಕ್ರೋಶ ವ್ಯಕ್ತಪಡಿಸಿದರು.
ಬಿಜೆಪಿಯೆಂದರೆ ಭ್ರಷ್ಟಾಚಾರ, 40 ಪರ್ಸಂಟೇಸ್ ಸರ್ಕಾರ. ಭ್ರಷ್ಟ ಸರ್ಕಾರ ಎನ್ನುವುದಕ್ಕೆ ಇದಕ್ಕಿಂತ ಸಾಕ್ಷಿ ಬೇಕಿಲ್ಲ. ಶಾಸಕ ಸ್ಥಾನಕ್ಕೆ ಮಾಡಾಳ್ ವಿರೂಪಾಕ್ಷಪ್ಪ ಕೂಡಲೇ ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್ ನಾಯಕರು ಆಗ್ರಹಿಸಿದರು.
ಲೋಕಾಯುಕ್ತ ದಾಳಿ ವೇಳೆ 40 ಲಕ್ಷ ಲಂಚ ಸ್ಪೀಕರಿಸುವಾಗ ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪರ ಪುತ್ರ ಪ್ರಶಾಂತ್ ಸಿಕ್ಕಿಹಾಕಿಕೊಂಡಿದ್ದಾರೆ. ಈ ವೇಳೆ ಕಚೇರಿಯಲ್ಲಿ 1.62 ಕೋಟಿ ರೂ., ಮನೆಯಲ್ಲಿ ಸುಮಾರು 6 ಕೋಟಿ ರೂ. ಸಿಕ್ಕಿದೆ. ಆದರೂ ಈ ಪ್ರಕರಣದಲ್ಲಿ ಶಾಸಕರನ್ನು ಬಂಧಿಸದೇ ಮೀನಾಮೇಷ ಎಣಿಸಲಾಗುತ್ತಿದೆ. ಇದು ಸರಿಯಲ್ಲ. ಎಲ್ಲೇ ಆಸ್ತಿ ಮಾಡಿದ್ದರೂ ಜಫ್ತಿ ಮಾಡಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕ ಗಡಿಗುಡಾಳ್ ಮಂಜುನಾಥ್, ಪಾಲಿಕೆ ಸದಸ್ಯರಾದ ಪಾಮೇನಹಳ್ಳಿ ನಾಗರಾಜ್, ಕಲ್ಲಹಳ್ಳಿ ನಾಗರಾಜ್, ಎ. ನಾಗರಾಜ್, ಉತ್ತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ. ಜಿ. ಶಿವಕುಮಾರ್, ಮೊಹಮ್ಮದ್ ಜಿಕ್ರಿಯಾ, ಮೊಯಿನುದ್ದೀನ್, ಮನು, ಭರತ್ ಮೈಲಾರಿ ಸೇರಿದಂತೆ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಪಾಲ್ಗೊಂಡಿದ್ದರು.
ಇನ್ನು ಮಾಡಾಳ್ ವಿರೂಪಾಕ್ಷಪ್ಪರ ಪುತ್ರ ಪ್ರಶಾಂತ್ ಮಾಡಾಳ್ ಲಂಚಬಾಕತನದ ವಿರುದ್ಧ ಚನ್ನಗಿರಿ ಕಾಂಗ್ರೆಸ್ ಘಟಕ ಪ್ರತಿಭಟನೆ ನಡೆಸಿತು. ಮಾಜಿ ಶಾಸಕ ವಡ್ನಾಳ್ ರಾಜಣ್ಣರ ನೇತೃತ್ವದಲ್ಲಿ ಚನ್ನಗಿರಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪ್ರತಿಭಟನೆನಡೆಸಲಾಯಿತು.
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮಾಡಾಳ್ ವಿರೂಪಾಕ್ಷಪ್ಪ ಹಾಗೂ ಕುಟುಂಬದವರಿಗೆ ಜನರು ತಕ್ಕ ಪಾಠ ಕಲಿಸಲಿದ್ದಾರೆ. ಇಂತಹವರಿಂದ ಉತ್ತಮ ಆಡಳಿತ ಸಾಧ್ಯವೇ? ಕೂಡಲೇ ಮಾಡಾಳ್ ವಿರೂಪಾಕ್ಷಪ್ಪರು ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು. ಲೋಕಾಯುಕ್ತ ಪೊಲೀಸರು ಬಂಧಿಸಬೇಕು ಎಂದು ಆಗ್ರಹಿಸಿದರು.



