ಡಿವಿಜಿ ಸುದ್ದಿ, ಮಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಮುಸ್ಲಿಂ ಸೆಂಟ್ರಲ್ ಕಮಿಟಿ ಜ. 4 ಹಾಗೂ ಜ. 10 ಪೌರತ್ವ ಪರ ಬಿಜೆಪಿ ನಡೆಸಲು ಉದ್ದೇಶಿಸಿರುವ ಜನಜಾಗೃತಿ ಸಮಾವೇಶವನ್ನು ಮುಂದೂಡುವಂತೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಮನವಿ ಮಾಡಿದರು.
ಇತ್ತೀಚೆಗೆ ಮಂಗಳೂರಲ್ಲಿ ನಡೆದ ಪ್ರತಿಭಟನೆಯಲ್ಲಿ ಗೋಲಿಬಾರ್ ಘಟನೆಯಿಂದ ಶಾಂತಿ ಸ್ಥಾಪಿಸುವ ಉದ್ದೇಶದಿಂದ ಗೃಹ ಸಚಿವರು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ಆಯೋಜಿಸಿದ್ದ ಉನ್ನತ ಮಟ್ಟದ ಸಭೆಯಲ್ಲಿ ಮಾತನಾಡಿದರು.
ಎರಡು ಸಂಘಟನೆಗಳ ಸಮಾವೇಶವನ್ನು ಹತ್ತು ದಿನಗಳ ಕಾಲ ಮುಂದೂಡುವಂತೆ ಮನವಿ ಮಾಡಿದ್ದೇನೆ. ಎರಡೂ ಕಡೆಯ ಮುಖಂಡರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಜಿಲ್ಲೆಯಲ್ಲಿ ಶಾಂತಿ ಕಾಪಾಡುವುದು ಮುಖ್ಯ. ಈ ಉದ್ದೇಶದಿಂದ ಕೆಲವು ದಿನಗಳ ಕಾಲ ಪ್ರತಿಭಟನೆ ನಡೆಸದೇ ಇರುವುದು ಒಳ್ಳೆಯದು. ಪರಿಸ್ಥಿತಿ ತಿಳಿಯಾದ ಬಳಿಕ ನಡೆಸಿದರೆ ಉತ್ತಮ ಎಂದರು.
ಗೋಲಿಬಾರ್ ಪ್ರಕರಣ ತನಿಖೆ ಸಿಐಡಿಗೆ
ಗೋಲಿಬಾರ್ನಲ್ಲಿ ಮೃತಪಟ್ಟವರ ಕುಟುಂಬಗಳಿಗೆ ನೀಡಿದ್ದ ಪರಿಹಾರವನ್ನು ರದ್ದು ಮಾಡಿಲ್ಲ, ತಡೆ ಹಿಡಿಯಲಾಗಿದೆ. ತನಿಖಾ ವರದಿ ಬಂದ ಬಳಿಕ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು. ಗೋಲಿಬಾರ್ ಕುರಿತು ಮ್ಯಾಜಿಸ್ಟೀರಿಯಲ್ ವಿಚಾರಣೆ ಆರಂಭವಾಗಿದೆ. ಗುಂಡೇಟಿನಿಂದ ಇಬ್ಬರು ಮೃತಪಟ್ಟಿರುವ ಪ್ರಕರಣದ ತನಿಖೆಯನ್ನು ಸಿಐಡಿಗೆ ಹಸ್ತಾಂತರಿಸಲಾಗುವುದು ಎಂದು ತಿಳಿಸಿದರು.
ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕರಾದ ಎಸ್.ಅಂಗಾರ, ಯು.ಟಿ.ಖಾದರ್, ಡಿ.ವೇದವ್ಯಾಸ ಕಾಮತ್, ಡಾ.ವೈ.ಭರತ್ ಶೆಟ್ಟಿ, ಸಂಜೀವ ಮಠಂದೂರು, ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯರಾದ ಕೆ.ಹರೀಶ್ ಕುಮಾರ್, ಐವನ್ ಡಿಸೋಜ, ಮುಸ್ಲಿಂ ಸೆಂಟ್ರಲ್ ಕಮಿಟಿ ಅಧ್ಯಕ್ಷ ಕೆ.ಎಸ್.ಮೊಹಮ್ಮದ್ ಮಸೂದ್, ಮಾಜಿ ಶಾಸಕರಾದ ಬಿ.ಎ.ಮೊಹಿಯುದ್ದೀನ್ ಬಾವಾ, ಜೆ.ಆರ್.ಲೋಬೊ ಭಾಗಿಯಾಗಿದ್ದರು.



