ದಾವಣಗೆರೆ: ನಗರದ ಶಾಮನೂರು ರಸ್ತೆಯ ಬಿಂದಾಸ್ ಬಾರ್ ಬಳಿ ಯುವಕನೊರ್ವನ ಭೀಕರ ಹತ್ಯೆ ನಡೆದಿದೆ. ಕತ್ತು ಕೊಯ್ದು, ತಲೆಗೆ ಕಲ್ಲು ಎತ್ತಿ ಹಾಕಿ ಗುರುತೇ ಸಿಗದಂತೆ ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ಹತ್ಯೆಯಾದ ಯುವಕನ ಗುರುತು ಪತ್ತೆಯಾಗಿಲ್ಲ. ವಯಸ್ಸು ಸುಮಾರು 25 ರಿಂದ 30 ವರ್ಷ ಇರಬಹುದು ಎಂದು ಅಂದಾಜಿಸಲಾಗಿದೆ.ಯುವಕನ ಮುಖದ ಮೇಲೆ ಕಲ್ಲು ಎತ್ತಿ ಹಾಕಿದ್ದರಿಂದ ಗುರುತು ಪತ್ತೆಯಾಗುತ್ತಿಲ್ಲ.
ಸದ್ಯ ಮೃತನ ಪ್ಯಾಂಟ್ ಜೇಬಿನಲ್ಲಿ ಬೆಂಗಳೂರಿನಿಂದ ದಾವಣಗೆರೆಗೆ ಬಂದಿರುವ ರೈಲ್ವೆ ಟಿಕೆಟ್ ಪತ್ತೆ ಆಗಿದೆ. ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ಯುವಕನ ಮೃತದೇಹವನ್ನು ರವಾನೆ ಮಾಡಲಾಗಿದೆ. ಕೊಲೆ ಆರೋಪಿಗಳ ಪತ್ತೆಗಾಗಿ ಶಾಮನೂರು ರಸ್ತೆಯ ಸಿಸಿ ಕ್ಯಾಮೆರಾಗಳ ಪರಿಶೀಲನೆ ನಡೆಯುತ್ತಿದೆ. ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



