ಡಿವಿಜಿ ಸುದ್ದಿ, ಬೆಂಗಳೂರು: ಮಾಸಿಕ ಕನಿಷ್ಠ ಗೌರವಧನ 12 ಸಾವಿರ ನಿಗದಿಪಡಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು ನಗರದಲ್ಲಿಂದು ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು.
ವಿವಿಧ ಜಿಲ್ಲೆಗಳಿಂದ ಬಂದಿದ್ದ ಕಾರ್ಯಕರ್ತೆಯರು ರೈಲು ನಿಲ್ದಾಣದಿಂದ ಸ್ವಾತಂತ್ರ್ಯ ಉದ್ಯಾನವನದವರೆಗೆ ಮೆರವಣಿಗೆ ನಡೆಸಿದರು. 15 ತಿಂಗಳುಗಳಿಂದ ಬಾಕಿ ಉಳಿಸಿಕೊಂಡಿರುವ ಪ್ರೋತ್ಸಾಹ ಧನವನ್ನು ಪಾವತಿಸಬೇಕು ಎಂದು ಕಾರ್ಯಕರ್ತೆಯರು ಒತ್ತಾಯಿಸುತ್ತಿದ್ದಾರೆ. ರಾಜ್ಯ ಆಶಾ ಕಾರ್ಯಕರ್ತೆ ಸಂಘಟನೆ ಕಾರ್ಯದರ್ಶಿ ನಾಗಲಕ್ಷ್ಮೀ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದೆ.

ಸ್ವಾತಂತ್ರ್ಯ ಉದ್ಯಾನವನದಲ್ಲಿ ಆಶಾ ಕಾರ್ಯಕರ್ತೆಯರ ಪ್ರತಿಭಟನೆ ಹಿನ್ನೆಲೆಯಲ್ಲಿ ಪಶ್ಚಿಮ ವಿಭಾಗದ ಡಿಸಿಪಿ ರಮೇಶ್ ಬಾನೋತ್ ನೇತೃತ್ವದಲ್ಲಿ ಭದ್ರತೆ ಕೈಗೊಳ್ಳಲಾಗಿದ್ದು, 300ಕ್ಕೂ ಹೆಚ್ಚು ಪೊಲೀಸರನ್ನು ಭದ್ರತೆಗೆ ನಿಯೋಜನೆ ಮಾಡಲಾಗಿದೆ. 5 ಕೆಎಸ್ಆರ್ಪಿ ತುಕಡಿ ಹಾಗೂ 3 ಸಿಎಆರ್ ತುಕಡಿಗಳು ಭದ್ರತೆಗೆ ನಿಯೋಜನೆ ಆಗಿದೆ.
ಆಶಾ ಕಾರ್ಯಕರ್ತೆಯರ ಪ್ರತಿಭಟನೆಯಿಂದಾಗಿ ಮೆಜೆಸ್ಟಿಕ್, ನೃಪತುಂಗ ರಸ್ತೆ, ಮಲ್ಲೇಶ್ವರ, ಅರಮನೆ ರಸ್ತೆ, ಬಳ್ಳಾರಿ ರಸ್ತೆ, ಶೇಷಾದ್ರಿ ರಸ್ತೆಯಲ್ಲಿ ಸಂಚಾರ ಅಸ್ತವ್ಯಸ್ತ ಉಂಟಾಗಿದ್ದು, ವಾಹನ ಸವಾರರು ಪರದಾಡುತ್ತಿದ್ದಾರೆ.



