ದಾವಣಗೆರೆ; ಖಾಸಗಿ ಬಸ್ -ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ದಾವಣಗೆರೆಯ ಹಿರಿಯ ಲೆಕ್ಕ ಪರಿಶೋಧಕ ಹಾಗೂ ವಕೀಲರೂ ಆದ ವಿ.ಎಸ್. ಅರುಣಾಚಲ ಶೆಟ್ಟಿ (72) ಅವರು ಸಾವನ್ನಪ್ಪಿದ್ದಾರೆ. ತೀವ್ರವಾಗಿ ಗಾಯಗೊಂಡ ಮೂವರ ಸ್ಥಿತಿ ಗಂಭೀರವಾಗಿದೆ.
ಜಗಳೂರು ತಾಲ್ಲೂಕಿನ ಬಿಳಿಚೋಡು ಹೋಬಳಿಯ ನರೇನಹಳ್ಳಿ ಬಳಿ ಈ ಘಟನೆ ನಡೆದಿದೆ. ಅರುಣಾಚಲಶೆಟ್ಟಿ ಅವರು ತಮ್ಮ ಕುಟುಂಬದೊಂದಿಗೆ ಉಜ್ಜಯಿನಿಯ ದೇವಸ್ಥಾನಕ್ಕೆ ತೆರಳಿ, ಪೂಜೆ ಸಲ್ಲಿಸಿ ವಾಪಸ್ ಬರುವಾಗ ಖಾಸಗಿ ಬಸ್ ಮತ್ತು ಕಾರು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಈ ದುರಂತ ನಡೆದಿದೆ.
ಗಾಯಗೊಂಡಿರುವ ಮೂವರನ್ನು ದಾವಣಗೆರೆ ಮತ್ತು ಜಗಳೂರು ಪಟ್ಟಣದ ಆಸ್ಪತ್ರೆಗಳಿಗೆ ಹೆಚ್ಚಿನ ಚಿಕಿತ್ಸೆಗೆ ದಾಖಲಿಸಲಾಗಿದೆ. ಬಸ್ನಲ್ಲಿದ್ದ ಒಬ್ಬ ಪ್ರಯಾಣಿಕನಿಗೂ ಗಾಯವಾಗಿದೆ. ಬಿಳಿಚೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



