ಬೆಂಗಳೂರು: ಜುಲೈ ತಿಂಗಳಿನಲ್ಲಿ ಅಬ್ಬರಿಸಿದ್ದ ಮಳೆ, ಆಗಸ್ಟ್ ತಿಂಗಳ ಆರಂಭದಿಂದ ಸದ್ದಡಗಿತ್ತು. ಇದೀಗ ಇಂದಿನಿಂದ ಮತ್ತೆ ಮುಂಗಾರು ಮಳೆ ಎಂಟ್ರಿ ಕೊಟ್ಟಿದೆ. ಬೆಳಗ್ಗೆಯಿಂದಲೇ ಮೋಡ ಕವಿದ ವಾತಾವರಣವಿದ್ದು, ಕೆಲವು ಕಡೆ ಇಂದು ಮಳೆಯಾಗಿದೆ. ಇಂದು ಆಗಸ್ಟ್ 20ರಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಆಗಸ್ಟ್ 20 ನಂತರ ಮುಂಗಾರು ಮತ್ತೆ ಚುರುಕು ಪಡೆಯಲಿದ್ದು, ವಿವಿಧ ಜಿಲ್ಲೆಗಳಲ್ಲಿ ಮುಂಗಾರು ಮಳೆ ಅಬ್ಬರಿಸಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ರಾಜ್ಯದ ಕರಾವಳಿ, ದಕ್ಷಿಣ ಒಳನಾಡು, ಉತ್ತರ ಒಳನಾಡಿನ ಬಹುತೇಕ ಕಡೆಗಳಲ್ಲಿ ಭಾರೀ ಮಳೆ ಸುರಿಯಲಿದೆ.
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಕಳೆದ 20 ದಿನದಿಂದ ಮಳೆ ಇಲ್ಲದೆ ಬಿಸಿಲಿನ ತಾಪಮಾನಕ್ಕೆ ಜನ ಬೇಸತ್ತು ಹೋಗುದ್ದರು. ಮುಂಗಾರು ಮಳೆ ನಂಬಿಕೊಂಡು ಬಿತ್ತಿದ್ದ ಬೆಳೆಗಳೆಲ್ಲ ಒಣಗುತ್ತಿವೆ. ಈಗಾಗಲೇ ಕರಾವಳಿ ಜಿಲ್ಲೆಗಳಲ್ಲಿ ಮಳೆ ಅಬ್ಬರ ಜೋರಾಗಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಜಿಲ್ಲೆಗಳಲ್ಲಿ ಆಗಸ್ಟ್ 20ರ ಬಳಿಕ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ,ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಲ್ಲಿ ಮಳೆಯಾಗಲಿದೆ.



