ದಾವಣಗೆರೆ: ರಾಜ್ಯದಲ್ಲಿ ಆಪರೇಷನ್ ಹಸ್ತ ಬಗ್ಗೆ ಚರ್ಚೆ ನಡೆಯುತ್ತಿರುವ ವೇಳೆ ಮಾಜಿ ಸಚಿವ ಹಾಗೂ ಬಿಜೆಪಿ ನಾಯಕ ಎಂ.ಪಿ.ರೇಣುಕಾಚಾರ್ಯ ಅವರು, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ ಭೇಟಿ ಬಳಿಕ ಈಗ ಜಿಲ್ಲಾ ಉಸ್ತುವಾರಿ ಸಚಿವ ಎಸ್ ಎಸ್ ಮಲ್ಲಿಕಾರ್ಜುನ್ ರನ್ನು ಭೇಟಿ ಮಾಡಿ ಮಾತುಕತೆ ನಡೆಸಿರುವುದು ಕುತೂಹಲ ಮೂಡಿಸಿದೆ.
ಈ ಬಾರಿ ಲೋಕಾಸಭಾ ಚುನಾವಣೆಗೆ ಸ್ಪರ್ಧಿಸಲು ಸಿದ್ಧತೆ ನಡೆಸಿರುವ ರೇಣುಕಾಚಾರ್ಯ ಅವರು, ಜಿಲ್ಲೆಯಿಂದ ಬಿಜೆಪಿಯಿಂದ ಟಿಕೆಟ್ ಕೇಳಿದ್ದರು.ಇದಕ್ಕೆ ಹಾಲಿ ಸಂಸದ ಡಾ.ಜಿ.ಎಂ.ಸಿದ್ದೇಶ್ವರ ಟಕ್ಕರ್ ನೀಡಿದ್ದರು. ಈ ಬಾರಿಯೂ ಬಿಜೆಪಿ ಹಾಲಿ ಸಂಸದರಿಗೆ ಟಿಕೆಟ್ ಘೋಷಣೆಯಾಗುವುದು ಖಚಿತವಾಗುತ್ತಿದ್ದಂತೆ ರೇಣುಕಾರ್ಯ ಕಾಂಗ್ರೆಸ್ ಪರ ಒಲವು ಹೊಂದಿರುವ ಎನ್ನುವ ಮಾತುಗಳು ಕೇಳಿ ಬಂದಿದ್ದವು. ಇದೀಗ ರೇಣುಕಾಚಾರ್ಯ ಜಿಲ್ಲಾ ಉಸ್ತುವಾರಿ ಸಚಿವರನ್ನು ಭೇಟಿ ಮಾಡಿರುವುದು ಇನ್ನುಷ್ಟು ಅನುಮಾನ ಹುಟ್ಟಿಸಿದೆ.
ದಾವಣಗೆರೆಯ ಕಲ್ಲೇಶ್ವರ ರೈಸ್ ಮಿಲ್ ನಲ್ಲಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಅವರನ್ನು ರೇಣುಕಾಚಾರ್ಯ ಭೇಟಿಯಾಗಿ ಚರ್ಚೆ ನಡೆಸಿರುವುದು ಕಾಂಗ್ರೆಸ್ ಗೆ ಸೇರ್ಪಡೆ ಆಗುತ್ತಾರೆಯೇ ಎನ್ನುವ ಚರ್ಚೆ ಸಾರ್ವಜನಿಕ ವಲಯದಲ್ಲಿ ಹುಟ್ಟು ಹಾಕಿದೆ. ದಾವಣಗೆರೆ ಉಸ್ತುವಾರಿ ಸಚಿವ ಎಸ್ ಎಸ್ ಮಲ್ಲಿಕಾರ್ಜುನ್ ರನ್ನು ಭೇಟಿ ಮಾಡಿರುವ ಫೋಟೋಗಳು ವೈರಲ್ ಆಗಿವೆ.
ನಾನು ಯಾವುದೇ ಕಾರಣಕ್ಕೂ ಕಾಂಗ್ರೆಸ್ ಸೇರುವುದಿಲ್ಲ, ನನ್ನನ್ನು ಅವರು ಕರೆದೂ ಇಲ್ಲ, ನಾನು ಅಲ್ಲಿಗೆ ಹೋಗುತ್ತೇನೆ ಎಂದು ಹೇಳಿಲ್ಲ ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಸ್ಪಷ್ಟನೆ ನೀಡಿದ್ದಾರೆ.
ಹೊನ್ನಾಳಿಯಲ್ಲಿ ರೈತರ ಜಮೀನುಗಳಿಗೆ ಭೇಟಿ ನೀಡಿ ಬರ ಪರಿಶೀಲನೆ ನಡೆಸಿದ ಬಳಿಕ ಮಾತನಾಡಿದ ಅವರು, ಹೊನ್ನಾಳಿ ಹಾಗೂ ನ್ಯಾಮತಿ ಅವಳಿ ತಾಲೂಕನ್ನು ಬರಪಟ್ಟಿಗೆ ಸೇರಿಸುವಂತೆ ಸಿಎಂ ಹಾಗೂ ಡಿಸಿಎಂ ಅವರನ್ನು ಭೇಟಿ ಮಾಡಿದ್ದೇನೆ.ಇದಕ್ಕೆ ವಿಶೇಷ ಅರ್ಥ ಕಲ್ಪಿಸುವುದು ಬೇಡ ಎಂದು ತಿಳಿಸಿದರು.
ಮಾಜಿ ಶಾಸಕನಾಗಿ ನನ್ನ ಕರ್ತವ್ಯವನ್ನು ಮಾಡಿದ್ದೇನೆ. ಯಾವುದೇ ಕಾರಣಕ್ಕೂ ನಾನು ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರುವ ಪ್ರಮೇಯವೇ ಉದ್ಭವಿಸುವುದಿಲ್ಲ. ಈಗಾಗಲೇ ದಾವಣಗೆರೆ ಲೋಕಸಭಾ ಕ್ಷೇತ್ರದ ಪ್ರಬಲ ಆಕ್ಷಾಂಕ್ಷಿ ಎಂದು ನಾನು ತಿಳಿಸಿದ್ದೇನೆ, ನನಗೆ ಲೋಕಸಭಾ ಟಿಕೆಟ್ ಸಿಗುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕಾಂಗ್ರೆಸ್ನಲ್ಲೇ 135 ಶಾಸಕರಿದ್ದಾರೆ, ಅವರಿಗೆ ನಮ್ಮ ಶಾಸಕರ ಅವಶ್ಯಕತೆ ಇಲ್ಲ, ರಾಜಕಾರಣನೇ ಬೇರೆ ಸ್ನೇಹವೇ ಬೇರೆಯಾಗಿರುತ್ತದೆ. ಇದರಲ್ಲಿ ರಾಜಕಾರಣ ಬೆರೆಸುವುದು ಬೇಡ ಎಂದರು.



