ದಾವಣಗೆರೆ: ಪ್ರತ್ಯೇಕ ಧರ್ಮಕ್ಕೆ ಶೇ 4.5ರಷ್ಟು ಮೀಸಲಾತಿ ಇದ್ದರೆ, ಒಬಿಸಿಯವರಿಗೆ ಶೇ 22.5ರಷ್ಟು ಮೀಸಲಾತಿ ಇದೆ. ಆದ್ದರಿಂದ ವೀರಶೈವ ಲಿಂಗಾಯತ ಪ್ರತ್ಯೇಕ ಧರ್ಮದ ಮಾನ್ಯತೆಗಿಂತ ಕೇಂದ್ರದ ಹಿಂದುಳಿದ ವರ್ಗಗಳ ಪಟ್ಟಿಯಲ್ಲಿ (ಒಬಿಸಿ) ಸ್ಥಾನ ಪಡೆದುಕೊಳ್ಳುವುದು ಹೆಚ್ಚು ಲಾಭ. ಇದಕ್ಕಾಗಿ ಸಮಾಜದ ಎಲ್ಲ ಪಂಗಡದ ಕೈಜೋಡಿಸಬೇಕು ಎಂದು ಎಂದು ಶ್ರೀಶೈಲ ಜಗದ್ಗುರು ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
ಶ್ರೀಶೈಲ ಮಠದ ಲಿಂಗೈಕ್ಯ ವಾಗೀಶ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿಯ 37ನೇ ವಾರ್ಷಿಕ ಪುಣ್ಯರಾಧನೆ, ಲಿಂಗೈಕ್ಯ ಉಮಾಪತಿ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿಯ 12ನೇ ವರ್ಷದ ಸ್ಮರಣೋತ್ಸವ ಹಾಗೂ ಸಿದ್ಧಲಿಂಗ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರ ದ್ವಾದಶ ಪೀಠಾರೋಹಣ ವರ್ಧಂತಿ ಮಹೋತ್ಸವದ ಜನಜಾಗೃತಿ ಧರ್ಮ ಸಮ್ಮೇಳನದ ಸಾನ್ನಿಧ್ಯ ವಹಿಸಿ ಮಾತನಾಡಿದರು.
ಸನಾತನ ವೀರಶೈವ ಲಿಂಗಾಯತ ಧರ್ಮಕ್ಕೆ ಆದಿ ಗುರುಪರಂಪರೆ ಇದೆ. ಇದರಲ್ಲಿ ಗುರು ಮತ್ತು ವಿರಕ್ತ ಪರಂಪರೆಗಳಿದ್ದು,ಕೆಲವು ಸಣ್ಣಪುಟ್ಟ ವ್ಯತ್ಯಾಸ ಹೊರತುಪಡಿಸಿದ್ರೆ, ಈ ಎರಡೂ ಪರಂಪರೆಗಳ ತತ್ವ, ಸಿದ್ಧಾಂತ, ಆಚರಣೆ ಮತ್ತು ಉದ್ದೇಶಗಳು ಒಂದೇ. ಹೀಗಾಗಿ ಗುರು ಮತ್ತು ವಿರಕ್ತ ಪರಂಪರೆ ವೀರಶೈವ ಧರ್ಮದ ಎರಡು ಕಣ್ಣುಗಳಿದ್ದಂತೆ. ಈ ಎರಡನ್ನೂ ವಿಭಜಿಸಿ ನೋಡುವ ಪ್ರಯತ್ನ ಮಾಡಬಾರದು ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ, ಉಜ್ಜಯಿನಿ ಪೀಠದ ಸಿದ್ಧಲಿಂಗ ರಾಜದೇಶಿಕೇಂದ್ರ ಶಿವಾಚಾರ್ಯ ಸ್ವಾಮೀಜಿ, ಮಾಜಿ ಸಚಿವ ಎಸ್.ಎ. ರವೀಂದ್ರನಾಥ್ , ಆವರಗೊಳ್ಳ ಪುರವರ್ಗ ಮಠದ ಓಂಕಾರ ಶಿವಾಚಾರ್ಯ ಸ್ವಾಮೀಜಿ, ರೇವಣಸಿದ್ಧ ಶಿವಾಚಾರ್ಯ ಸ್ವಾಮೀಜಿ, ರಾಚೋಟಿ ಶಿವಾಚಾರ್ಯ ಸ್ವಾಮೀಜಿ, ಈಶ್ವರ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ, ಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ, ಶ್ರೀಪತಿ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ, ಅಭಿನವ ಸಿದ್ಧಲಿಂಗ ಶಿವಾಚಾರ್ಯ ಸ್ವಾಮೀಜಿ ಉಪಸ್ಥಿತರಿದ್ದರು.



