ಕಲಬುರಗಿ: ಭೀಕರ ಬರಗಾಲ ಪರಿಸ್ಥಿತಿ ಅಧ್ಯಯನ ನಡೆಸಲು ಕೇಂದ್ರದಿಂದ ಮೂರು ತಂಡಗಳು ಮುಂದಿನ ವಾರ ರಾಜ್ಯಕ್ಕೆ ಆಗಮಿಸುತ್ತಿವೆ ಎಂದು ಕೃಷಿ ಸಚಿವ ಎನ್. ಚೆಲುವರಾಯಸ್ವಾಮಿ ಮಾಹಿತಿ ನೀಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಮುಂಗಾರು ಹಂಗಾಮಿನಲ್ಲಿ ರಾಜ್ಯದ 31 ಜಿಲ್ಲೆಗಳ 236 ತಾಲ್ಲೂಕುಗಳ ಪೈಕಿ ರಾಜ್ಯದಲ್ಲಿ 161 ತೀವ್ರ ಮತ್ತು 34 ಸಾಧಾರಣ ಹೀಗೆ ಒಟ್ಟು 195 ತಾಲೂಕುಗಳನ್ನು ಬರಗಾಲ ಪೀಡಿತ ಎಂದು ಘೋಷಿಸಿ ಈಗಾಗಲೇ ಕೇಂದ್ರ ಸರ್ಕಾರಕ್ಕೆ ವರದಿ ಕಳುಹಿಸಲಾಗಿದೆ. ಬರ ಪರಿಸ್ಥಿತಿ ಅರಿಯಲು ಕೇಂದ್ರ ಸರ್ಕಾರವು ಬರ ಅಧ್ಯಯನ ತಂಡಗಳನ್ನು ಕಳುಹಿಸುವುದಾಗಿ ಮಾಹಿತಿ ನೀಡಿದೆ.ಅಕ್ಟೋಬರ್ 10ರೊಳಗೆ ತಂಡಗಳು ಆಗಮಿಸಲಿವೆ. ಒಂದೆಡೆ ಅತಿವೃಷ್ಟಿ ಮತ್ತೊಂದೆಡೆ ಅನಾವೃಷ್ಟಿ ಪರಿಸ್ಥಿತಿ ಇದೆ. ಹೆಚ್ಚಿನ ಪ್ರಮಾಣದಲ್ಲಿ ಬರಗಾಲವಿದೆ. ಬೆಳೆ ಹಾನಿ ಸಮೀಕ್ಷೆ ನಡೆದಿದ್ದು,ಶೇ.95ರಷ್ಟು ಬೆಳೆ ಹಾನಿ ಸಮೀಕ್ಷೆಯಾಗಿದೆ ಎಂದರು.
ಕೇಂದ್ರದ ತಂಡಗಳು ಆಗಮಿಸುವ ಹೊತ್ತಿಗೆ ಸಮೀಕ್ಷೆ ಪೂರ್ಣಗೊಂಡು ವರದಿ ಅಂತಿಮಗೊಳ್ಳಲಿದೆ. ಪ್ರಾಥಮಿಕ ವರದಿ ಪ್ರಕಾರ ಈಗಾಗಲೇ 40 ಲಕ್ಷ ಹೆಕ್ಟೇರ್ ದಲ್ಲಿ ಸುಮಾರು 28 ಸಾವಿರ ಕೋಟಿ ರೂ. ಹಾನಿಯಾಗಿದೆ ಅಂದಾಜಿಸಲಾಗಿದೆ. 4,000 ಕೋಟಿ ಪರಿಹಾರ ನೀಡುವಂತೆ ಕೇಂದ್ರಕ್ಕೆ ಪತ್ರ ಬರೆಯಲಾಗಿದೆ ಎಂದರು.
ಈ ಬಾರಿಯ ಜೂನ್ ತಿಂಗಳಿನಲ್ಲಿ ಮುಂಗಾರು ದುರ್ಬಲಗೊಂಡು ವಾಡಿಕೆಗಿಂತ ಶೇ. 56 ಮಳೆ ಕೊರತೆ ಉಂಟಾಯಿತು. ಜುಲೈನಲ್ಲಿ ಮುಂಗಾರು ಚುರುಕುಗೊಂಡು ವಾಡಿಕೆಗಿಂತ ಶೇ.29 ಹೆಚ್ಚು ಮಳೆಯಾಗಿತ್ತು. ಆಗಸ್ಟ್ನಲ್ಲಿ ವಾಡಿಕೆಗಿಂತ ಶೇ.73 ಮಳೆ ಕೊರತೆಯಾಗಿದ್ದು, ಕಳೆದ 125 ವರ್ಷಗಳಲ್ಲಿ ಅತಿ ಕಡಿಮೆ ಮಳೆ ದಾಖಲಾಗಿದೆ.
ಕೃಷಿ ಹೊಂಡ ನಿರ್ಮಾಣ ಮಾಡುವ ಕೃಷಿ ಭಾಗ್ಯ ಯೋಜನೆ ಮತ್ತೆ ಜಾರಿಗೆ ತರಲಾಗುತ್ತಿದೆ. ಇದಕ್ಕಾಗಿ ಈ ವರ್ಷ 100 ಕೋಟಿ ರೂ. ಅನುದಾನ ಮೀಸಲಿರಿಸಿದ್ದು, ಮುಂದಿನ ವರ್ಷ ಇನ್ನೂ ಹೆಚ್ಚಿನ ಅನುದಾನ ನೀಡಲಾಗುವುದು ಎಂದು ತಿಳಿಸಿದರು.
ಕೈ ಕೊಟ್ಟ ಮುಂಗಾರು ಮಳೆ: ಸಂಕಷ್ಟದಲ್ಲಿರುವ ರೈತರಿಗೆ ಸಿಹಿ ಸುದ್ದಿ; ಹಿಂಗಾರು ಮಳೆ ಶೇ.50ರಷ್ಟು ಹೆಚ್ಚಳ ಸಾಧ್ಯತೆ..!



