ಶಿವಮೊಗ್ಗ: ರಾಜ್ಯದಲ್ಲಿ 40 ಸಾವಿರ ಶಿಕ್ಷಕರ ಹುದ್ದೆ ಖಾಲಿ ಇದ್ದು, ಮುಂದಿನ ವರ್ಷದೊಳಗೆ 20 ಸಾವಿರ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
3 ವರ್ಷದಲ್ಲಿ 3 ಸಾವಿರ ಕೆಪಿಎಸ್ ಶಾಲೆ ಆರಂಭ ಮಾಡಲಾಗುವುದು. ಪ್ರಸ್ತುತ 13 ಸಾವಿರ ಶಿಕ್ಷಕರ ನೇಮಕ ಸಂಬಂಧಿಸಿದಂತೆ ಕೆಲ ಜಿಲ್ಲೆಗಳಲ್ಲಿ ಕೋರ್ಟ್ನಲ್ಲಿ ಕೇಸ್ ಇದೆ. ಈ ಜಿಲ್ಲೆಯಲ್ಲಿ ನೇಮಕ ಪ್ರಕ್ರಿಯೆ ನಡೆಸಿಲ್ಲ. ಉಳಿದಂತೆ ಎಲ್ಲ ಜಿಲ್ಲೆಗಳಲ್ಲಿ ಶನಿವಾರವೇ ಅಭ್ಯರ್ಥಿಗಳಿಗೆ ನೇಮಕ ಪತ್ರ ನೀಡಲಾಗಿದೆ ಎಂದರು.
ಶಿಕ್ಷಕರಿಗೆ ಇನ್ಫೋಸಿಸ್, ವಿಪ್ರೋ, ದೇಶಪಾಂಡೆ ಫೌಂಡೇಶನ್ ಸೇರಿದಂತೆ ಖಾಸಗಿ ಸಂಸ್ಥೆಗಳ ನುರಿತ ತಜ್ಞರಿಂದ ತರಬೇತಿ ಕೊಡಿಸಲಾಗುತ್ತಿದೆ. ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವುದು ಸರ್ಕಾರದ ಕರ್ತವ್ಯ. ಈ ನಿಟ್ಟಿನಲ್ಲಿ ಶಾಲೆಗಳ ಅಭಿವೃದ್ಧಿ, ಕೆಪಿಎಸ್ ಶಾಲೆ ಆರಂಭಕ್ಕೆ ಕ್ರಮ ಕೈಗೊಳ್ಳಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಾರ್ಗದರ್ಶನದಲ್ಲಿ ಶಿಕ್ಷಣ ಇಲಾಖೆಯಲ್ಲಿ ಹಲವು ಸುಧಾರಣೆ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.



