ದಾವಣಗೆರೆ: ಕಾರ್ಮಿಕ ಇಲಾಖೆ ವತಿಯಿಂದ ಕರ್ನಾಟಕ ರಾಜ್ಯ ಖಾಸಗಿ ವಾಣಿಜ್ಯ ಸಾರಿಗೆ ವಾಹನ ಕಾರ್ಮಿಕರ ಅಪಘಾತ ಪರಿಹಾರ ಯೋಜನೆಯಡಿ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆಯನ್ನು ಒದಗಿಸುವ ಸಲುವಾಗಿ ಖಾಸಗಿ ವಾಣಿಜ್ಯ ಸಾರಿಗೆ ಕಾರ್ಮಿಕರಾದ ಚಾಲಕರು, ನಿರ್ವಾಹಕರು ಮತ್ತು ಕ್ಲೀನರ್ಗಳಿಂದ ನೋಂದಣಿಗೆ ಅರ್ಜಿ ಆಹ್ವಾನಿಸಲಾಗಿದೆ.
ಸೌಲಭ್ಯಗಳು: ಯೋಜನೆಯಡಿ, ಅಪಘಾತದಿಂದ ಮರಣ ಹೊಂದಿದ್ದಲ್ಲಿ ರೂ. 5 ಲಕ್ಷ, ಅಪಘಾತದಲ್ಲಿ ಶಾಶ್ವತ ದುರ್ಬಲತೆ ಹೊಂದಿದಾಗ ಫಲಾನುಭವಿಗೆ ದುರ್ಬಲತೆಯ ಪ್ರಮಾಣಕ್ಕನುಗುಣವಾಗಿ ರೂ. 2 ಲಕ್ಷವರೆಗೆ , ಅಪಘಾತಕ್ಕೊಳಗಾಗಿ ತಾತ್ಕಾಲಿಕ ದುರ್ಬಲತೆ ಮತ್ತು ಆಸ್ಪತ್ರೆಯಲ್ಲಿ 15 ದಿನಗಳಿಗಿಂತ ಕಡಿಮೆ ಅವಧಿಗೆ ಒಳರೋಗಿಯಾಗಿ ಚಿಕಿತ್ಸೆ ಪಡೆದಿದ್ದಲ್ಲಿ ರೂ. 50 ಸಾವಿರ ಮತ್ತು 15 ದಿನಗಳಿಗಿಂತ ಹೆಚ್ಚು ದಿನ ಚಿಕಿತ್ಸೆ ಪಡೆದಿದ್ದಲ್ಲಿ ನಿಖರ ಆಸ್ಪತ್ರೆ ವೆಚ್ಚ ಇವುಗಳಲ್ಲಿ ಯಾವುದು ಕಡಿಮೆಯೋ ಅದನ್ನು ಪಾವತಿಸಲಾಗುವುದು.
ಕರ್ನಾಟಕ ಸಾರಿಗೆ ಇಲಾಖೆಯಿಂದ ಚಾಲನಾ ಪರವಾನಗಿ ಪಡೆದುಕೊಂಡಿದ್ದು, 20 ರಿಂದ 70 ವರ್ಷ ವಯೋಮಿತಿಯವರಾಗಿರಬೇಕು. ಅರ್ಹ ಫಲಾನುಭವಿಗಳು ಜಿಲ್ಲಾ ಕಾರ್ಮಿಕ ಅಧಿಕಾರಿಗಳ ಕಚೇರಿಗೆ ಭೇಟಿ ನೀಡಿ ನೋಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂ.ಸಂ.08192-237332 ಗೆ ಸಂಪರ್ಕಿಸಲು ಜಿಲ್ಲಾ ಕಾರ್ಮಿಕ ಅಧಿಕಾರಿ ಜಿ.ಇಬ್ರಾಹಿಂ ಸಾಬ್ ತಿಳಿಸಿದ್ದಾರೆ.



