ಬೆಂಗಳೂರು: ರಾಜ್ಯದಲ್ಲಿ ಮತ್ತೆ ಹಿಂಗಾರು ಚುರುಕುಗೊಳ್ಳಲಿದ್ದು, ನ.23ರಿಂದ ಮೂರು ದಿನ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಮೈಸೂರು,ರಾಮನಗರ ಸೇರಿ ಕರಾವಳಿಯಲ್ಲಿ ಮಳೆಯಾಗಲಿದೆ. ಕಳೆದ ಒಂದು ವಾರದಿಂದ ರಾಜ್ಯದಲ್ಲಿ ಒಣಹವೆ ವಾತಾವರಣ ಕಂಡು ಬಂದಿದೆ. ಇದೀಗ ನ.23 ರಿಂದ ನ.26ರ ವರೆಗೆ ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಗಳು ಹಾಗೂ ಉತ್ತರ ಒಳನಾಡಿನ ಕೆಲವಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಭಾರತೀಯ ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆ ಪ್ರಕಟಣೆಯಲ್ಲಿ ನೀಡಿದ ಮಾಹಿತಿ ಪ್ರಕಾರ ಹಗುರ ಮಳೆ ಎಂದರೆ 2.5 ಮಿ.ಮೀ.ನಿಂದ 64.5 ಮಿ.ಮೀ. ವರೆಗೆ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಕೊಡಗು ಹಾಗೂ ಚಿಕ್ಕಮಗಳೂರಿನಲ್ಲಿ ನ.23 ಹಾಗೂ 24ರಂದು ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಈ ಎರಡು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.



