ಬೆಳಗಾವಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರಾಧ್ಯಕ್ಷ ಶಾಮನೂರು ಶಿವಶಂಕರಪ್ಪ ನೇತೃತ್ವದ ನಿಯೋಗ ವೈಜ್ಞಾನಿಕ ಮತ್ತು ವಾಸ್ತವಾಂಶ ಆಧಾರಿತವಾಗಿ ಹೊಸದಾಗಿ ಜಾತಿ ಜನಗಣತಿ ಮಾಡುವಂತೆ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು. ಈ ವೇಳೆ ಸಚಿವರಾದ ಎಂ. ಬಿ. ಪಾಟೀಲ್, ಈಶ್ವರ್ ಖಂಡ್ರೆ, ಸಮಾಜದ ಮುಖಂಡ ಅಥಣಿ ವೀರಣ್ಣ, ಅಣಬೇರು ರಾಜಣ್ಣ ಸೇರಿದಂತೆ ವೀರಶೈವ ಲಿಂಗಾಯತ ಸಮುದಾಯದ ಮುಖಂಡರು ಹಾಜರಿದ್ದರು.
ನಾವು ಜಾತಿ ಜನಗಣತಿಯ ವಿರೋಧಿಗಳಲ್ಲ ಎಂಬುದನ್ನು ಈ ಸಂದರ್ಭದಲ್ಲಿ ಸ್ಪಷ್ಟಪಡಿಸಲು ಇಚ್ಛಿಸುತ್ತೇವೆ. ಆದರೆ, ಕಳೆದ 8 ವರ್ಷಗಳ ಹಿಂದ ನಡೆಸಲಾದ ಈ ಸಾಮಾಜಿಕ ಆರ್ಥಿಕ ಸಮೀಕ್ಷೆ ಹಲವು ವೈರುಧ್ಯ ಮತ್ತು ಲೋಪಗಳಿಂದ ಕೂಡಿದೆ. ಇದನ್ನು ಸರಿಪಡಿಸುವ ಅಗತ್ಯವಿದೆ. ಹೊಸದಾಗಿ ವೈಜ್ಞಾನಿಕವಾಗಿ ಸಮೀಕ್ಷೆ ನಡೆಸಬೇಕು. ಮಹಾಸಭಾದ ಅನೇಕ ತಾಲೂಕು ಮತ್ತು ಜಿಲ್ಲಾ ಮಟ್ಟದ ಸಭೆಗಳಲ್ಲಿ ಈ ಸಮೀಕ್ಷೆಯ ಬಗ್ಗೆ ಪ್ರಸ್ತಾಪಿಸಿದಾಗ ಅನೇಕರು ತಮ್ಮ ಮನೆಗೆ ಸರ್ಕಾರಿ ಅಧಿಕಾರಿಗಳು ಬಂದಿಲ್ಲ. ತಮ್ಮ ಕುಟುಂಬದ ಯಾವುದೇ ಮಾಹಿತಿ ಪಡೆದಿಲ್ಲ. ಕಚೇರಿಯಲ್ಲಿಯೇ ಕುಳಿತು ಈ ಸಮೀಕ್ಷಾ ವರದಿ ಸಿದ್ಧಪಡಿಸಿ ಕಳುಹಿಸಿದ್ದಾರೆ ಎಂದು ಆರೋಪ ಮಾಡುತ್ತಿದ್ದಾರೆ.
ಆರ್ಥಿಕ, ಸಾಮಾಜಿಕ ಸಮೀಕ್ಷೆ ನಡೆದಾಗ ನಮ್ಮ ವೀರಶೈವ ಲಿಂಗಾಯತ ಸಮುದಾಯದ ಬಹುಪಾಲು ಜನರು ತಮಗೆ ಲಭಿಸುವ ಮೀಸಲಾತಿಯಲ್ಲಿ ಅನಾಯವಾಗುತ್ತದೆ ಎಂಬ ಭಯದಿಂದ ವೀರಶೈವ ಅಥವಾ ಲಿಂಗಾಯತ ಎಂದು ಬರೆಸದ ತಮ್ಮ ಒಳಪಂಗಡಗಳನ್ನು ನಮೂದಿಸಿದ್ದಾರೆ. ಅಂತೆಯೇ ಕರ್ನಾಟಕದಲ್ಲಿರುವ ಹಲವರು ತಮ್ಮ ಜಾತಿಯ ಕುರಿತಂತೆ ಸ್ವಯಂ ಘೋಷಣೆ ಮಾಡಿಕೊಂಡಿದ್ದಾರೆ. ಆದರೆ , ನಿಜವಾಗಿಯೂ ಅವರು ಆ ಜಾತಿ, ಸಮುದಾಯಕ್ಕೆ ಸೇರಿದವರೇ ಎಂಬ ಸತ್ಯಾಸತ್ಯತೆ ಅರಿಯಲು ಯಾವುದೇ ಪರಿಶೀಲನೆ ಅಥವಾ ಪರಾಮರ್ಶೆ ಆಗಿಲ್ಲ.ಹೀಗಾಗಿ ಈ ಸಮೀಕ್ಷೆಯಲ್ಲಿ ಸಂಗ್ರಹಿಸಿರುವ ಮಾಹಿತಿಯಲ್ಲೇ ದೋಷವಿದೆ ಎಂಬುದು ನಮ್ಮ ಸಭಾದ ಒಟ್ಟು ಅಭಿಪ್ರಾಯವಾಗಿದೆ.
ಪತಿ 10 ವರ್ಷಗಳಿಗೆ ಒಮ್ಮೆ ಜನಗಣತಿ ನಡೆಸುವುದು ಹಿಂದಿನಿಂದಲೂ ನಡೆದುಕೊಂಡು ಬಂದಿರುವ ಸಂಪ್ರದಾಯ. ಈಗಾಗಲೇ ರಾಜ್ಯದಲ್ಲಿ ನಡೆದಿರುವ ಸಾಮಾಜಿಕ, ಆರ್ಥಿಕ ಸ್ಥಿತಿಗತಿಯ ಸಮೀಕ್ಷೆ 8 ವರ್ಷದಷ್ಟು ಹಳೆಯದಾಗಿದೆ. ಇದನ್ನು ಯಥಾವತ್ ಅಂಗೀಕರಿಸುವುದು ಸೂಕ್ತ ಅಲ್ಲ. ಈ ನಿಟ್ಟಿನಲ್ಲಿ ವೀರಶೈವ ಲಿಂಗಾಯತ ಸಮುದಾಯದ ಎಲ್ಲ ಒಳಪಂಗಡಗಳನ್ನೂ ಸೇರಿಸಿ ಸಂಪೂರ್ಣ ವೈಜಾನಿಕವಾಗಿ ಹೊಸದಾಗಿ ಜಾತಿ ಜನಗಣತಿ ನಡೆಸಿ ವಾಸ್ತವಾಂಶ ಆಧಾರಿತವಾಗಿ ಅಂಕಿ – ಅಂಶಗಳನ್ನು ದಾಖಲಿಸಿದರೆ ಅರ್ಹರಿಗೆ ಸೌಲಭ್ಯ ಕಲ್ಪಿಸಲು ಅನುಕೂಲವಾಗುತ್ತದೆ ಎಂದು ತಿಳಿಸಲಾಗಿದೆ.