ದಾವಣಗೆರೆ: ಜಿಲ್ಲೆಯ ನ್ಯಾಮತಿ ತಾಲ್ಲೂಕು ತಹಶೀಲ್ದಾರ್ ಎಚ್.ಬಿ.ಗೋವಿಂದಪ್ಪ ಅವರಿಗೆ ಲೋಕಾಯುಕ್ತ ಹೆಸರಿನಲ್ಲಿ ಕರೆ ಮಾಡಿ ಬೆದರಿಕೆ ಹಾಕಿದ್ದ ಆರೋಪಿಯನ್ನು ಬಂಧಿಸುವಲ್ಲಿ ನ್ಯಾಮತಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬೆಳಗಾವಿ ಜಿಲ್ಲೆ ಚಿಕ್ಕೋಡಿಯ ಮುರುಗೇಶ ಕುಂಬಾರ ಬಂಧಿತ ಆರೋಪಿಯಾಗಿದ್ದಾನೆ. ಮಹಾರಾಷ್ಟ್ರ ರಾಜ್ಯದ ಸಾಂಗ್ಲಿ ಜಿಲ್ಲೆ ಮೀರಜ್ನಲ್ಲಿ ಆರೋಪಿ ವಶಕ್ಕೆ ಪಡೆಯಲಾಗಿದೆ.
ಆರೋಪಿ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ಚ್ಯುತಿ ಆರೋಪದಡಿ 2002ರಲ್ಲಿ ಸೇವೆಯಿಂದ ಅಮಾನತುಗೊಳಿಸಲಾಗಿತ್ತು. ಆರರೋಪಿ ಅಧಿಕಾರಿಗಳಿಗೆ ಕರೆ ಮಾಡಿ, ಬೆದರಿಕೆ ಹಾಕುವುದನ್ನು ಕರಗತ ಮಾಡಿಕೊಂಡಿದ್ದನು. ಇದೇ ರೀತಿ ವಿವಿಧ ಜಿಲ್ಲೆಗಳ ಪೊಲೀಸ್ ಠಾಣೆಗಳಲ್ಲಿ ಸುಮಾರು 25ಕ್ಕೂ ಹೆಚ್ಚು ಪ್ರಕರಣ ದಾಖಲಾಗಿವೆ. ಆರೋಪಿ ವಿಚಾರಣೆಗೆ ಒಳಪಡಿಸಲಾಗಿದೆ.
ನ್ಯಾಮತಿ ಪೊಲೀಸ್ ಇನ್ಸ್ಪೆಕ್ಟರ್ ಎನ್.ಎಸ್.ರವಿ ಅವರ ಮಾರ್ಗದರ್ಶನದಲ್ಲಿ ಸಬ್ಇನ್ಸ್ಪೆಕ್ಟರ್ ಬಿ.ಎಲ್.ಜಯಪ್ಪನಾಯ್ಕ, ಸಿಬ್ಬಂದಿ ಆನಂದ ಅವರು ಆರೋಪಿಯ ಮೊಬೈಲ್ ಕರೆಯ ಆಧಾರದ ಮೇಲೆ ಆರೋಪಿಯನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ. ತಾನು ಲೋಕಾಯುಕ್ತ ಡಿವೈಎಸ್ಪಿ ಎಂದು ಪರಿಚಯಿಸಿಕೊಂಡು, ನಿಮ್ಮ ವಿರುದ್ಧ ಬೆಂಗಳೂರಿನ ಲೋಕಾಯುಕ್ತ ಕಚೇರಿಯಲ್ಲಿ ಎಫ್ಐಆರ್ ದಾಖಲಾಗಿದೆ. ಲೋಕಾಯುಕ್ತ ಎಸ್ಪಿ ಮತ್ತು ಅವರ ಸಿಬ್ಬಂದಿ ಈಗಾಗಲೇ ನೀವು ಕೆಲಸ ಮಾಡುತ್ತಿರುವ ಸ್ಥಳ ಮತ್ತು ವಾಸವಿರುವ ಮನೆಯ ಮೇಲೆ ದಾಳಿ ಮಾಡಲು ತಯಾರಿ ಮಾಡಿಕೊಂಡಿದ್ದಾರೆ ಎಂದು ಫೋನಿನಲ್ಲಿ ಹೇಳಿದ್ದಾರೆ.
ನಿಮ್ಮ ಬಗ್ಗೆ ಚೆನ್ನಾಗಿ ವಿಚಾರಿಸಿದ್ದೇನೆ, ನೀವು ಒಳ್ಳೆ ಅಧಿಕಾರಿ. ನಾನೂ ಈ ಲೋಕಾಯುಕ್ತ ದಾಳಿ ಆಗದಂತೆ ನೋಡಿಕೊಳ್ಳುತ್ತೇನೆ. ದಾಳಿ ಆಗದಂತೆ ತಡೆಯಲು ಅನ್ ಲೈನ್ ನಲ್ಲಿ 2 ಲಕ್ಷ ಹಣ ಹಾಕುವಂತೆ ಬೇಡಿಕೆ ಇಟ್ಟಿದ್ದಾನೆ. ಹಣ ಹಾಕದಿದ್ದಾಗ ಜೀವ ಬೆದರಿಕೆ ಹಾಕಿ, ನಿನಗೆ ಏನು ಮಾಡಬೇಕು ಅಂತಾ ನಮಗೆ ಗೊತ್ತಿದೆ ಎಂದು ಬೆದರಿಕೆ ಹಾಕಿದ್ದಾನೆ. ಪ್ರಾಣ ಬೆದರಿಕೆ ಮತ್ತು ಮಾನಸಿಕ ಕಿರುಕುಳ ನೀಡಿರುವ ವ್ಯಕ್ತಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ತಹಶಿಲ್ದಾರ್ ಎಚ್.ಬಿ. ಗೋವಿಂದಪ್ಪ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.



