ದಾವಣಗೆರೆ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ 24 ನೇ ಮಹಾ ಅಧಿವೇಶನ ಇದೇ ಡಿ. 23 ಮತ್ತು 24ರಂದು ನಗರದ ಬಾಪೂಜಿ ಎಂಬಿಎ ಕಾಲೇಜು ಮೈದಾನದಲ್ಲಿ ನಡೆಯಲಿದೆ. ಮಹಾ ಅಧಿವೇಶನಕ್ಕೆ ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿ ವಿಧ್ಯುಕ್ತವಾಗಿ ಚಾಲನೆ ನೀಡಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಸಿದ್ದಗಂಗಾ, ತರಳಬಾಳು ಶ್ರೀಗಳು ಸೇರಿ ವಿವಿಧ ಮಠಾಧೀಶರು ಭಾಗಿಯಾಗಲಿದ್ದಾರೆ.
ಇಂದು(ಡಿ.18) ಮಹಾಸಭಾದ ಜಿಲ್ಲಾಧ್ಯಕ್ಷ ದೇವರಮನಿ ಶಿವಕುಮಾರ್ ನೇತೃತ್ವಲ್ಲಿ ಅಧ್ಯಕ್ಷತೆ ವಹಿಸುವಂತೆ ಮಹಾಸಭಾದ ರಾಷ್ಟ್ರಾಧ್ಯಕ್ಷ ಶಾಮನೂರು ಶಿವಶಂಕರಪ್ಪ ಅವರಿಗೆ ಆಹ್ವಾನ ನೀಡಲಾಯಿತು. ಆಹ್ವಾನ ಸ್ವೀಕರಿಸಿ ಮಾತನಾಡಿ, ಅಧ್ಯಕ್ಷತೆ ವಹಿಸುವಂತೆ ಆಹ್ವಾನವನ್ನು ಸಂತೋಷದಿಂದ ಒಪ್ಪಿದ್ದೇನೆ ಎಂದು ತಿಳಿಸಿದರು.
ಉದ್ಘಾಟನಾ ಸಮಾರಂಭದ ವೇದಿಕೆಗೆ ಎಸ್. ನಿಜಲಿಂಗಪ್ಪರ ಹೆಸರು ಇಡಲಾಗಿದ್ದು, ಡಿ. 23ರಂದು ಮಧ್ಯಾಹ್ನ 12.30ರಿಂದ 2.30ರವರೆಗೆ ಉದ್ಘಾಟನಾ ಸಮಾರಂಭ ನಡೆಯಲಿದೆ. ಸುತ್ತೂರು ಮಹಾಸಂಸ್ಥಾನ ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿ ಅವರು 24 ನೇ ಮಹಾಧಿವೇಶನ ಉದ್ಘಾಟಿಸಲಿದ್ದಾರೆ. ಸಿರಿಗೆರೆಯ ತರಳಬಾಳು ಮಠದ ಶ್ರೀ ಡಾ. ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿ, ಶ್ರೀಶೈಲ ಪೀಠದ ಡಾ. ಚನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮೀಜಿ, ತುಮಕೂರು ಸಿದ್ದಗಂಗಾ ಮಠದ ಶ್ರೀ ಸಿದ್ಧಲಿಂಗಾ ಮಹಾಸ್ವಾಮೀಜಿ, ಹುಬ್ಬಳ್ಳಿಯ ಮೂರು ಸಾವಿರ ಸಂಸ್ಥಾನ ಮಠದ ಗುರುಸಿದ್ಧ ರಾಜಯೋಗೀಂದ್ರ ಮಹಾಸ್ವಾಮೀಜಿ, ಗದಗ ವೀರೇಶ್ವರ ಪುಣ್ಯಾಶ್ರಮದ ಡಾ. ಕಲ್ಲಯ್ಯಜ್ಜ, ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಶ್ರೀ ವಚನಾನಂದ ಸ್ವಾಮೀಜಿ ಸಾನಿಧ್ಯ ವಹಿಸಲಿದ್ದಾರೆ ಎಂದು ಹೇಳಿದರು.
ಶಾಮನೂರು ಶಿವಶಂಕರಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ. ಮಾಜಿ ಸಚಿವರು ಹಾಗೂ ಮಹಾಸಭಾದ ಗೌರವಾಧ್ಯಕ್ಷ ಡಾ. ಭೀಮಣ್ಣ ಖಂಡ್ರೆ ಅವರಿಗೆ ಗೌರವ ಸಮರ್ಪಣೆ ನಡೆಯಲಿದೆ. ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಶ್ರೀ ಶಿವಕುಮಾರ ಮಹಾಮಂಟಪ, ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಅವರು ಎಸ್. ನಿಜಲಿಂಗಪ್ಪ ವೇದಿಕೆ, ಸಚಿವ ಎಂ. ಬಿ. ಪಾಟೀಲ್ ಅವರು ಜೆ. ಹೆಚ್. ಪಟೇಲ್ ವೇದಿಕೆಯ ಉದ್ಘಾಟನೆ ನೆರವೇರಿಸುವರು. ಸಂಸದ ಡಾ. ಜಿ. ಎಂ. ಸಿದ್ದೇಶ್ವರ ಅವರು ಸ್ಮರಣ ಸಂಚಿಕೆ ಬಿಡುಗಡೆ ಮಾಡುವರು ಎಂದು ತಿಳಿಸಿದರು.
ಮುಖ್ಯ ಅತಿಥಿಗಳಾಗಿ ಶಾಸಕರಾದ ಡಿ. ಜಿ. ಶಾಂತನಗೌಡ, ಬಿ. ಪಿ. ಹರೀಶ್, ಬಿ. ಕೆ. ಸಂಗಮೇಶ್ವರ, ಬಸವರಾಜು ವಿ. ಶಿವಗಂಗಾ, ಅಥಣಿ ವೀರಣ್ಣ, ಅಣಬೇರು ರಾಜಣ್ಣ, ಎಸ್. ಎಸ್. ಗಣೇಶ್ ಆಗಮಿಸುವರು.ಮಧ್ಯಾಹ್ನ 3 ಗಂಟೆಯಿಂದ ಸಂಜೆ 5.30ರವರೆಗೆ ಎಸ್. ನಿಜಲಿಂಗಪ್ಪ ವೇದಿಕೆಯಲ್ಲಿ ಕೃಷಿ ಮತ್ತು ಕೈಗಾರಿಕಾ ಅಧಿವೇಶನ, ಜೆ. ಹೆಚ್. ಪಟೇಲ್ ವೇದಿಕೆಯಲ್ಲಿ ಮಧ್ಯಾಹ್ನ 3. 30ರಿಂದ ಸಂಜೆ 5. 30ರವರೆಗೆ ಶೈಕ್ಷಣಿಕ ಅಧಿವೇಶನ ನಡೆಯಲಿದೆ. ಡಿ. 24ರಂದು ಬೆಳಿಗ್ಗೆ 9.30ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಎಸ್. ನಿಜಲಿಂಗಪ್ಪ ವೇದಿಕೆಯಲ್ಲಿ ಧಾರ್ಮಿಕ ಅಧಿವೇಶನ, ಜೆ. ಹೆಚ್. ಪಟೇಲ್ ವೇದಿಕೆಯಲ್ಲಿ ಬೆಳಿಗ್ಗೆ 9.30ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಮಹಿಳಾ ಮತ್ತು ಯುವ ಅಧಿವೇಶನ, ಮಧ್ಯಾಹ್ನ 12.15ರಿಂದ 2ಗಂಟೆಯವರೆಗೆ ನಿಜಲಿಂಗಪ್ಪ ವೇದಿಕೆಯಲ್ಲಿ ನೌಕರರ ಅಧಿವೇಶನ, ಜೆ. ಹೆಚ್. ಪಟೇಲ್ ವೇದಿಕೆಯಲ್ಲಿ ಮಧ್ಯಾಹ್ನ 12. 15ರಿಂದ 2 ಗಂಟೆಯವರೆಗೆ ಸಾಹಿತಿಗಳ ಅಧಿವೇಶನ ನಡೆಯಲಿದೆ ಎಂದು ಮಾಹಿತಿ ನೀಡಿದರು.
ಸಮಾರೋಪ ಸಮಾರಂಭವು ಡಿ. 24ರಂದು ಮಧ್ಯಾಹ್ನ 3. 30ಕ್ಕೆ ಎಸ್. ನಿಜಲಿಂಗಪ್ಪ ವೇದಿಕೆಯಲ್ಲಿ ನಡೆಯಲಿದ್ದು, ದಿವ್ಯ ಸಾನಿಧ್ಯವನ್ನು ಉಜ್ಜಯಿನಿ ಪೀಠದ ಸಿದ್ಧಲಿಂಗ ರಾಜದೇಶಿ ಕೇಂದ್ರದ ಶಿವಾಚಾರ್ಯ ಭಗವತ್ಪಾದ ಸ್ವಾಮೀಜಿ, ಸಾಣೇಹಳ್ಳಿ ಶ್ರೀಮಠದ ಡಾ. ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮೀಜಿ ಆಗಮಿಸಲಿದ್ದಾರೆ. ಮಾಜಿ ಸಿಎಂ ಬಿ. ಎಸ್. ಯಡಿಯೂರಪ್ಪ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು. ಕರ್ನಾಟಕ ರಾಜ್ಯ ಘಟಕದ ಮಹಾಸಭೆಯ ಹಿರಿಯ ಉಪಾಧ್ಯಕ್ಷ ಡಾ. ಎನ್. ತಿಪ್ಪಣ್ಣ ಅವರಿಗೆ ಗೌರವ ಸಮರ್ಪಣೆ ಮಾಡಲಾಗುವುದು. ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಗೌರವಾಧ್ಯಕ್ಷ ಡಾ. ಗೊ. ರು. ಚನ್ನಬಸಪ್ಪ ಅವರು ಸಮಾರೋಪ ಭಾಷಣ ಮಾಡಲಿದ್ದಾರೆ ಎಂದರು.