ದಾವಣಗೆರೆ; ದಾವಣಗೆರೆಯಲ್ಲಿ ನಡೆದ ಅಖಿಲ ಭಾರತ ವೀರಶೈವ ಮಹಾಸಭಾದ 24ನೇ ಮಹಾ ಅಧಿವೇಶನ ಎರಡು ದಿನ ಅದ್ಧೂರಿಯಾಗಿ ನಡೆಯಿತು. ಈ ಮಹಾ ಅಧಿವೇಶಬದಲ್ಲಿ 8 ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಯಿತು.
ದಾವಣಗೆರೆಯ ಬಾಪೂಜಿ ಎಂಬಿಎ ಕಾಲೇಜು ಆವರಣದಲ್ಲಿ ನಡೆದ 24ನೇ ಮಹಾ ಅಧಿವೇಶನದಲ್ಲಿ ವೀರಶೈವ ಮಹಾಸಭಾ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಅವರು ಎಂಟು ನಿರ್ಣಯ ಮಂಡನೆ ಮಾಡಿದರು. ಎಲ್ಲ ಲಿಂಗಾಯತರು ಧರ್ಮದ ಕಾಲಂನಲ್ಲಿ ವೀರಶೈವ ಎಂದು ಬರೆಸಬೇಕು ಎನ್ನುವ ನಿರ್ಣಯ ಒಳಗೊಂಡಂತೆ ಇನ್ನುಳಿದ ಏಳು ನಿರ್ಣಯಗಳು ಈ ರೀತಿ ಇವೆ.
- ದೇಶದ ಅಖಂಡತೆ, ಏಕತೆ, ಸಮಗ್ರತೆ, ಭದ್ರತೆಯ ರಕ್ಷಣೆಗೆ ಮಹಾಸಭೆ ಹಾಗೂ ನಮ್ಮ ಸಮಾಜ ಸದಾ ಕಟಿಬದ್ಧವಾಗಿದ್ದು, ಅಂತಹ ಯಾವುದೇ ಹೋರಾಟ, ಪ್ರಯತ್ನಗಳಿಗೆ ಈ ಹಿಂದಿನಂತೆಯೇ ಪ್ರೋತ್ಸಾಹ, ಬೆಂಬಲ ನೀಡುತ್ತದೆ ಎಂದು ಈ ಮಹಾಧಿವೇಶನವು ಪುನರುಚ್ಚರಿಸುತ್ತದೆ.
- ಹನ್ನೆರಡನೆ ಶತಮಾನದಲ್ಲೇ ಅನುಭವ ಮಂಟಪದ ಮೂಲಕ ಸಂಸತ್ತಿನ ಮತ್ತು ಸಮ ಸಮಾಜದ ಪರಿಕಲ್ಪನೆಯನ್ನು ಜಗತ್ತಿಗೆ ಕಟ್ಟಿಕೊಟ್ಟ, ಮಹಾನ್ ಮಾನವತಾವಾದಿ, ಸಾಮಾಜಿಕ ಕ್ರಾಂತಿಯ ಹರಿಕಾರ, ಜಗಜ್ಯೋತಿ ಬಸವೇಶ್ವರರ ಚಿಂತನೆ, ಅನುಭಾವ ಸಾರ್ವಕಾಲಿಕವಾಗಿದ್ದು, ಜಗತ್ತಿನ ಎಲ್ಲ ಸಮಸ್ಯೆಗಳಿಗೆ ಬಸವತತ್ವ ಪರಿಪಾಲನೆ ಪರಮಾನ್ನವಾಗಿದೆ. ಈ ಹಿನ್ನೆಲೆಯಲ್ಲಿ ವಿಶ್ವಗುರು ಬಸವಣ್ಣನವರನ್ನು ರಾಜ್ಯದ ಸಾಂಸ್ಕೃತಿಕ ನಾಯಕರೆಂದು ಸರ್ಕಾರ ಅಧಿಕೃತವಾಗಿ ಘೋಷಿಸಬೇಕು ಎಂದು ಮಹಾಧಿವೇಶನ ಒತ್ತಾಯಿಸುತ್ತದೆ.
- ವೀರಶೈವ -ಲಿಂಗಾಯಿತ ಸಮುದಾಯದಲ್ಲಿ ಲಕ್ಷಾಂತರ ಕಡು ಬಡವರಿದ್ದು, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಮತ್ತು ಆರ್ಥಿಕವಾಗಿಯೂ ಅತ್ಯಂತ ಹಿಂದುಳಿದಿದ್ದಾರೆ. ಹೀಗಾಗಿ ವೀರಶೈವ – ಲಿಂಗಾಯತ ಸಮುದಾಯದ ಎಲ್ಲ ಒಳ ಪಂಗಡಗಳನ್ನೂ ಒಳಗೊಂಡಂತೆ ಕೇಂದ್ರ ಸರ್ಕಾರದ ಇತರ ಹಿಂದುಳಿದ ವರ್ಗಗಳ (ಓ.ಬಿ.ಸಿ.) ಪಟ್ಟಿಗೆ ಸೇರಿಸಲು ರಾಜ್ಯ ಸರ್ಕಾರವು ಭಾರತ ಸರ್ಕಾರಕ್ಕೆ ಶಿಫಾರಸು ಮಾಡಬೇಕು ಮತ್ತು ಕೇಂದ್ರ ಸರ್ಕಾರ ಈ ಶಿಫಾರಸ್ಸನ್ನು ಅಂಗೀಕರಿಸಬೇಕು ಎಂದು ಈ ಮಹಾಧಿವೇಶನ ಒತ್ತಾಯಿಸುತ್ತದೆ.
- ಪ್ರಸ್ತುತ ಚರ್ಚೆಯ ವಸ್ತುವಾಗಿರುವ ಸಾಮಾಜಿಕ, ಶೈಕ್ಷಣಿಕ ಸ್ಥಿತಿಗತಿಯ ಸಮೀಕ್ಷೆ ಅಂದರೆ ಜಾತಿ ಜನಗಣತಿ ಸುಮಾರು 8 ವರ್ಷಗಳಷ್ಟು ಹಳೆಯದಾಗಿದ್ದು, ಅಧಿಕೃತವಾಗಿ ಅಂಗೀಕಾರವಾಗುವ ಮೊದಲೇ ಅದರಲ್ಲಿನ ಅಂಶಗಳು ಸೋರಿಕೆಯಾಗಿವೆ ಎನ್ನಲಾಗಿದೆ. ಈ ನಿಟ್ಟಿನಲ್ಲಿ ಶ್ರೀ ಕಾಂತರಾಜು ಆಯೋಗದ ವರದಿಯನ್ನು ಸರ್ಕಾರ ಒಪ್ಪಿಕೊಳ್ಳದೆ, ವೀರಶೈವ ಲಿಂಗಾಯತ ಸಮುದಾಯದ ಎಲ್ಲ ಒಳಪಂಗಡಗಳನ್ನೂ ಒಳಗೊಂಡಂತೆ ವಾಸ್ತವಿಕತೆಯ ಮತ್ತು ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸ್ಥಿತಿಗತಿಯ ಹಿಂದುಳಿದಿರುವಿಕೆಯ ಆಧಾರದ ಮೇಲೆ ವೈಜ್ಞಾನಿಕವಾಗಿ ಜಾತಿ ಜನಗಣತಿ ಆಗಬೇಕು ಎಂದು ಈ ಮಹಾಧಿವೇಶನ ಒಕ್ಕೊರಲಿನಿಂದ ಒತ್ತಾಯಿಸುತ್ತದೆ.
- ಸಮಾಜದ ಒಳಿತಿಗಾಗಿ ಮತ್ತು ನಮ್ಮ ಸಮುದಾಯದ ನಿಖರ ಜನಸಂಖ್ಯೆಯ ಬಗ್ಗೆ ಜಗತ್ತಿಗೆ ತಿಳಿಸಲು, ಸರ್ಕಾರ ಮುಂದಿನ ದಿನಗಳಲ್ಲಿ ನಡೆಸುವ ಜನ ಗಣತಿಯ ವೇಳೆ ನಮ್ಮ ಸಮಾಜದ ಬಾಂಧವರು ಹಿಂದು ಮತ್ತು ತಮ್ಮ ಉಪ ಜಾತಿಯ ಹೆಸರುಗಳನ್ನು ಬರೆಸದೆ, ಧರ್ಮದ ಕಾಲಂನಲ್ಲಿ ವೀರಶೈವ ಅಥವಾ ಲಿಂಗಾಯತ ಎಂದೇ ಬರೆಸುವಂತೆ ಈ ಮಹಾಧಿವೇಶನ ಮನವಿ ಮಾಡಲು ನಿರ್ಣಯ ಮಾಡಿರುತ್ತದೆ.
- ಎಲ್ಲ ರೈತರಿಗೆ ಅನುಕೂಲ ಆಗುವಂತೆ ರಾಜ್ಯದ ಎಲ್ಲ ನೀರಾವರಿ ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸಲು ಈ ಮಹಾಧಿವೇಶನವು ಸರ್ಕಾರವನ್ನು ಒತ್ತಾಯಿಸುತ್ತದೆ.
- ನಮ್ಮ ಸಮುದಾಯದಿಂದ ಪ್ರಥಮ ಮುಖ್ಯಮಂತ್ರಿ ಲಿಂಗೈಕ್ಯ ಶ್ರೀ ನಿಜಲಿಂಗಪ್ಪನವರು ನಮ್ಮ ಸಮುದಾಯದ ಹೆಮ್ಮೆ. ಮಹಾಸಭಾ ಸಾಂಕೇತಿಕವಾಗಿ ಈ ಮಹಾ ಅಧಿವೇಶನದ ಮುಖ್ಯ ವೇದಿಕೆಗೆ ಅವರ ಹೆಸರಿಟ್ಟು ಗೌರವ ಸಲ್ಲಿಸಿದೆ. ಶ್ರೀ ನಿಜಲಿಂಗಪ್ಪನವರು ವಾಸವಿದ್ದ ಚಿತ್ರದುರ್ಗದ ಅವರ ನಿವಾಸವನ್ನು ಸರ್ಕಾರ ಖರೀದಿಸಿ, ಸಂರಕ್ಷಿಸಿ, ಅಭಿವೃದ್ಧಿಪಡಿಸಿ ಶ್ರೀ ನಿಜಲಿಂಗಪ್ಪನವರ ಸರಳತೆ, ಉದಾತ್ತ ಚಿಂತನೆ, ದಕ್ಷ ಆಡಳಿತದ ಸಮ್ಯಕ್ ಚಿತ್ರಣವನ್ನು ನಾಡಿನ ಜನತೆಗೆ ಕಟ್ಟಿಕೊಡುವಂತೆ ಅರ್ಥಪೂರ್ಣವಾಗಿ ಶಾಶ್ವತ ಸ್ಮಾರಕ ನಿರ್ಮಾಣ ಮಾಡಲು, ಆ ಮನೆಯನ್ನು ಖರೀದಿಸಿ ಕಾರ್ಯಪ್ರವೃತ್ತವಾಗಿ ಶ್ರೀ ನಿಜಲಿಂಗಪ್ಪನವರ ಪುಣ್ಯ ಸ್ಮರಣೆಯ ದಿನದೊಳಗೆ ಪೂರ್ಣಗೊಳಿಸಬೇಕು.
- 2024ರೊಳಗೆ ಸ್ಮಾರಕ ನಿರ್ಮಾಣಕ್ಕೆ ಕ್ರಮವಹಿಸಬೇಕು ಎಂದು ಈ ಮಹಾಧಿವೇಶನ ಒತ್ತಾಯಿಸುತ್ತದೆ.



