ದಾವಣಗೆರೆ: ವಿವಿಧ ಕಳ್ಳತನ ಪ್ರಕರಣದಲ್ಲಿ ವಶಪಡಿಸಿಕೊಂಡ 5.18 ಕೋಟಿ ಮೌಲ್ಯದ ಚಿನ್ನ, ಬೆಳ್ಳಿ, ವಾಹನಗಳನ್ನು ಮೂಲ ವಾರಸುದಾರರಿಗೆ ಜಿಲ್ಲಾ ಪೊಲೀಸರು ಹಿಂತಿರುಗಿಸಿದ್ದಾರೆ. ಜಿಲ್ಲೆಯಲ್ಲಿ ಕಳೆದ ಒಂದು ವರ್ಷಗಳ ಅವಧಿಯಲ್ಲಿ ದಾಖಲಾದ ವಿವಿಧ ಪ್ರಕರಣಗಳಿಗೆ ಸಂಬಂಧಪಟ್ಟಂತೆ 5. 18 ಕೋಟಿ ರೂ. ಮೌಲ್ಯದ ಚಿನ್ನ, ಬೆಳ್ಳಿ ಮತ್ತು ನಾಲ್ಕು ಚಕ್ರದ ವಾಹನಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಅವರು ಕಳೆದುಕೊಂಡ ವಸ್ತುಗಳನ್ನು ವಾರಸುದಾರರಿಗೆ ಎಸ್ಪಿ ಉಮಾ ಪ್ರಶಾಂತ್ ವಿತರಣೆ ಮಾಡಲಾಯಿತು.
ನಗರದ ಪೊಲೀಸ್ ಕವಾಯತು ಮೈದಾನದಲ್ಲಿನ ಡಿ ಎ ಆರ್ ಕಛೇರಿ ಆವರಣದಲ್ಲಿ ಆಯೋಜಿಸಲಾಗಿದ್ದ ಸ್ವತ್ತು ಕಳವು ಪ್ರಕರಣಗಳಲ್ಲಿ ವಶಪಡಿಸಿಕೊಂಡ ಸ್ವತ್ತುಗಳನ್ನು ವಾರಸುದಾರರಿಗೆ ಹಿಂದಿರುಗಿಸುವ ಪ್ರಾಪರ್ಟಿ ರಿಟನ್ ಪೆರೇಡ್ ಕಾರ್ಯಕ್ರಮ ನಡೆಯಿತು. ಈ ವೇಳೆ ಮಾತನಾಡಿದ ಎಸ್ಪಿ ಉಮಾ ಪ್ರಶಾಂತ್, ಪ್ರತಿ ವರ್ಷ ಡಿಸೆಂಬರ್ ತಿಂಗಳಲ್ಲಿ ಪೊಲೀಸ್ ಇಲಾಖೆಯಿಂದ ಅಪರಾಧ ತಡೆ ಮಾಸಾಚಾರಣೆ ನಡೆಸಲಾಗುತ್ತಿದ್ದು, ಈ ವೇಳೆ ಕಳವುಪ್ರಕರಣಗಳಲ್ಲಿ ವಶಪಡಿಸಿಕೊಳ್ಳಲಾದ ಸತ್ತುಗಳನ್ನು ವಾಪಸ್ಸು ಕೊಡಲಾಗುವುದು. ಕಳವು ಪ್ರಕರಣ ತನಿಖೆ ನಡೆಸಿ ಪತ್ತೆ ಮಾಡಿದ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗೆ ಪ್ರಶಂಸೆ ಪತ್ರದ ಜೊತೆಗೆ ನಗದು ಬಹುಮಾನ ನೀಡಲಾಗುವುದು ಎಂದರು.
ಈ ವರ್ಷ ಜಿಲ್ಲೆಯಲ್ಲಿ 2,24,65,000 ಮೌಲ್ಯದ 4,493 ಗ್ರಾಂ ಚಿನ್ನ, 35,56,000 ಮೌಲ್ಯದ 50 ಕೆಜಿ 800 ಗ್ರಾಂ ಬೆಳ್ಳಿ, 175 ದ್ವಿಚಕ್ರ ವಾಹನಗಳ ಕಳವು ಪ್ರಕರಣಗಳಲ್ಲಿ ತನಿಖೆ ನಡೆಸಿದಾಗ, 356 ದ್ವಿಚಕ್ರ ವಾಹನಗಳು ಪತ್ತೆಯಾಗಿವೆ. ಇದರ ಒಟ್ಟು ಮೌಲ್ಯ 84,78,000 ಆಗಿದೆ. ಇನ್ನೂ ನಾಲ್ಕು ಚಕ್ರದ ವಾಹನಗಳ ಪ್ರಕರಣದಲ್ಲಿ 21 ವಾಹನಗಳನ್ನು ಪತ್ತೆ ಮಾಡಲಾಗಿದ್ದು, 65,35,000 ರೂಪಾಯಿ ಮೌಲ್ಯ ಆಗಿದೆ ಎಂದರು. ಈ ಸಂದರ್ಭದಲ್ಲಿ ಎಎಸ್ಪಿ ವಿಜಯ್ ಕುಮಾರ್, ಡಿ ವೈಎಸ್ಪಿ ಮಲ್ಲೇಶ್ ದೊಡ್ಡಮನಿ ಸೇರಿದಂತೆ ಪೊಲೀಸ್ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಇದ್ದರು.



