ದಾವಣಗೆರೆ: ವಿವಿಧ ಸಾರಿಗೆ ನಿಗಮಗಳಿಗೆ ಸುಮಾರು 5800 ಹೊಸ ಬಸ್ಗಳನ್ನು ಖರೀದಿ ಮಾಡಲಾಗುತ್ತಿದ್ದು ಈಗಾಗಲೇ ಅರ್ಧಕ್ಕೂ ಹೆಚ್ಚು ಹೊಸ ಬಸ್ಗಳು ಬಂದಿವೆ. ಉಳಿದ ಅರ್ಧ ಬಸ್ಗಳು ಬರಬೇಕಾಗಿದೆ. 2016 ರಿಂದ ಸಾರಿಗೆ ನಿಗಮದ ಸಿಬ್ಬಂದಿಗಳ ನೇಮಕಾತಿ ನಡೆಯದ ಕಾರಣ ಹೊಸ ಬಸ್ ಖರೀದಿಸಿದರೂ ಸಿಬ್ಬಂದಿ ಕೊರತೆಯಾಗುತ್ತಿತ್ತು. ಇದನ್ನು ಮನಗಂಡು 9 ಸಾವಿರ ನಿಗಮದ ಸಿಬ್ಬಂದಿಗಳನ್ನು ನೇಮಕಾತಿ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.
ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ಸ್ಮಾರ್ಟ್ ಸಿಟಿ ಯೋಜನೆಯಡಿ ನಿರ್ಮಾಣ ಮಾಡಲಾಗಿರುವ ದಾವಣಗೆರೆ ಮುಖ್ಯ ಬಸ್ ನಿಲ್ದಾಣ ಉದ್ಘಾಟಿಸಿ ಮಾತನಾಡಿದರು. ಈಗಾಗಲೇ 1,619 ಸಿಬ್ಬಂದಿಗಳಿಗೆ ಕಲ್ಯಾಣ ಕರ್ನಾಟಕ ವಲಯಕ್ಕೆ ನೇಮಕಾತಿ ಆದೇಶ ನೀಡಲಾಗಿದೆ. ಖಾಲಿ ಇರುವ ಸಿಬ್ಬಂದಿಗಳ ನೇಮಕಾತಿ ಮಾಡಿದ ತಕ್ಷಣವೇ ಕೊರೋನಾ ಸಂದರ್ಭದಲ್ಲಿ ನಿಲ್ಲಿಸಲಾಗಿದ್ದ ಹಳೆ ಮಾರ್ಗ ಮತ್ತು ಪ್ರಯಾಣಿಕರ ದಟ್ಟಣೆ ಇರುವ ಹೊಸ ಮಾರ್ಗಗಳಲ್ಲಿ ಬಸ್ ಓಡಿಸಲಾಗುತ್ತದೆ ಎಂದರು.
ಚುನಾವಣಾ ಪೂರ್ವದಲ್ಲಿ ನೀಡಿದ ಭರವಸೆಯಂತೆ ಸರ್ಕಾರ ಬಂದು 15 ದಿನಗಳಲ್ಲಿ ಮಹಿಳೆಯರು ಉಚಿತ ಪ್ರಯಾಣಿಸುವ ಶಕ್ತಿ ಯೋಜನೆಯನ್ನು ಜಾರಿಗೆ ತರಲಾಯಿತು. ಈ ಯೋಜನೆ ಜಾರಿಯಿಂದ ಮುಂದಿನ ದಿನಗಳಲ್ಲಿ ನಿಗಮದ ಬಸ್ಗಳಿಗೆ ಇಂಧನ ಭರಿಸಲು ಹಣವಿಲ್ಲದಂತಾಗುತ್ತದೆ ಎಂಬ ಭಾವನೆಯನ್ನು ನಿವಾರಣೆ ಮಾಡಿ ನಿಗಮವನ್ನು ಅತ್ಯುತ್ತಮವಾಗಿ ನಡೆಸಿಕೊಂಡು ಹೋಗಲಾಗುತ್ತಿದೆ. ಶಕ್ತಿ ಬಂದಾಗಿನಿಂದ ರಾಜ್ಯದಲ್ಲಿ 160 ಕೋಟಿಗಿಂತಲೂ ಹೆಚ್ಚಿನ ಮಹಿಳೆಯರು ಪ್ರಯಾಣಿಸಿದ್ದು ಇವರಿಗೆ ಆರ್ಥಿಕವಾಗಿ ಶಕ್ತಿ ತುಂಬಲಾಗಿದೆ.



