ದಾವಣಗೆರೆ: ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬದಲಿಸಲು ಮಾಜಿ ಸಚಿವರಾದ ಎಸ್.ಎ ರವೀಂದ್ರನಾಥ್, ಎಂ.ಪಿ. ರೇಣುಕಾಚಾರ್ಯ ಟೀಂ ಬಿಗಿ ಪಟ್ಟು ಹಿಡಿದಿದ್ದಾರೆ. ಒಂದು ವೇಳೆ ಅಭ್ಯರ್ಥಿ ಬದಲಿಸದಿದ್ರೆ ಬಂಡಾಯ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಬಗ್ಗೆ ಇಂದಿನ (ಮಾ.17) ಸಭೆಯಲ್ಲಿ ಚಿಂತನೆ ನಡೆಸಿದೆ. ಇದಲ್ಲದೆ, ಶಿವಮೊಗ್ಗದಲ್ಲಿ ಸೋಮವಾರ (ಮಾ.18) ನಡೆಯಲಿರುವ ಪ್ರಧಾನಿ ನರೇಂದ್ರ ಮೋದಿ ಅವರ ಬಿಜೆಪಿ ಪ್ರಚಾರ ಸಮಾವೇಶದಿಂದ ದೂರ ಉಳಿಯಲು ತೀರ್ಮಾನಿಸಿದ್ದಾರೆ
ಗಾಯತ್ರಿ ಸಿದ್ದೇಶ್ವರಗೆ ಟಿಕೆಟ್ ಘೋಷಣೆಯಾದ ಬಳಿಕ ಇಂದು ಮತ್ತೊಂದು ಸುತ್ತಿನ ಸಭೆ ನಡೆಸಿದ ಬಂಡಾಯ ನಾಯಕ ಮಾಜಿ ಸಚಿವ ಎಸ್.ಎ. ರವೀಂದ್ರನಾಥ್, ವಿಧಾನಸಭೆ ಚುನಾವಣೆಯಲ್ಲಿ ಸೋತಿದ್ದ ಎಂ.ಪಿ. ರೇಣುಕಾಚಾರ್ಯ, ಜಿ.ಕರುಣಾಕರ ರೆಡ್ಡಿ, ಬಿ.ಜಿ. ಅಜಯ್ಕುಮಾರ್, ಲೋಕಿಕೆರೆ ನಾಗರಾಜ್, ಮಾಡಾಳ್ ಮಲ್ಲಿಕಾರ್ಜುನ, ಮಾಜಿ ಶಾಸಕ ಬಸವರಾಜ ನಾಯ್ಕ, ಡಾ.ಟಿ.ಜಿ. ರವಿಕುಮಾರ್ ಸಭೆಯಲ್ಲಿ ಭಾಗಿದ್ದರು.
ಮೋದಿ ಮತ್ತೆ ಪ್ರಧಾನಿಯಾಗಲು ಒಮ್ಮತ ನಿರ್ಧಾರವಿದೆ. ಆದರೆ, ದಾವಣಗೆರೆಯಿಂದ ಈ ಬಾರಿ ಸಂಸದ ಜಿ.ಎಂ. ಸಿದ್ದೇಶ್ವರ ಕುಟುಂಬಕ್ಕೆ ಟಿಕೆಟ್ ಕೊಟ್ಟಿದ್ದಕ್ಕೆ ಪಕ್ಷಕ್ಕೆ ಹಿನ್ನಡೆಯಾಗಲಿದೆ. ಹೀಗಾಗಿ ಅಭ್ಯರ್ಥಿ ಬದಲಾವಣೆ ಮಾಡಿ ಎಂದು ಒತ್ತಾಯಿಸಿದರು.
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಸೋಲಿಗೆ ಸಂಸದ ಜಿ.ಎಂ. ಸಿದ್ದೇಶ್ವರ ಕಾರಣ. ನಾವು ಅವರಿಗೆ ಬೆಂಬಲಿಸಲ್ಲ. ಬಂಡಾಯ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಬಗ್ಗೆ ಮೂರು ದಿನಗಳ ಬಳಿಕ ಸಭೆ ಸೇರಿ ನಿರ್ಧರಿಸಲಾಗುವುದು ಎಂದರು.



