ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರ್ನಾಲ್ಕು ದಿನ 10ಕ್ಕೂ ಹೆಚ್ಚು ಜಿಲ್ಲೆಯಲ್ಲಿ ಭಾರಿ ಮಳೆಯಾಗಲಿದೆ. ದಾವಣಗೆರೆ, ಚಿತ್ರದುರ್ಗ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಾಮರಾಜನಗರ, ಹಾಸನ, ಕೊಡಗು,ಮಂಡ್ಯ, ಮೈಸೂರು, ಶಿವಮೊಗ್ಗದಲ್ಲಿ ಹೆಚ್ಚು ಮಳೆಯಾಗಲಿದೆ. ಚಿಕ್ಕಮಗಳೂರು, ತುಮಕೂರಿನಲ್ಲಿ ಜೋರು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇಂದು ದಾವಣಗೆರೆ ಜಿಲ್ಲೆಯ ಹರಿಹರ ಪಟ್ಟಣ, ಮಲೇಬೆನ್ನೂರು ಭಾಗದಲ್ಲಿ ಮಳೆಯಾಗಿದೆ. ಕೊಂಡಜ್ಜಿ ಗ್ರಾಮದ ಸುತ್ತಮುತ್ತ ಒಂದು ಗಂಟೆಗೂ ಹೆಚ್ಚು ಹೊತ್ತು ಜೋರು ಮಳೆಯಾಗಿದೆ. ಒಳ್ಳೆಯ ಹದ ಮಳೆಯಾಗಿದ್ದು, ರೈತರು ಭೂಮಿ ಉಳುಮೆ ಮಾಡಿಕೊಳ್ಳವಂತಹ ಹಸಿ ಮಳೆಯಾಗಿದೆ.
ದಾವಣಗೆರೆ ನಗರದ ಸುತ್ತಮುತ್ತ ಸಾಧಾರಣ ಮಳೆಯಾಗಿದ್ದು, ಇನ್ನೂ ಎರಡ್ಮೂರು ದಿನ ಮಳೆಯಾಗುವ ನಿರೀಕ್ಷೆ ಇದೆ. ಜಗಳೂರು, ಚನ್ನಗಿರಿ, ಹೊನ್ನಾಳಿ, ನ್ಯಾಮತಿ ತಾಲ್ಲೂಕಿನ ಕೆಲ ಗ್ರಾಮ ಗಳಲ್ಲಿ ಮಳೆಯಾಗಿದೆ. ಜಿಲ್ಲೆಯಲ್ಲಿ ಬಿಸಿ ಗಾಳಿ ಅಲೆ ತಗ್ಗಿದ್ದು, ತಣ್ಣನೆಯ ಗಾಳಿ ಬೀಸುತ್ತಿದೆ. ಜಿಲ್ಲೆಯಲ್ಲಿ ಮಳೆ ಕಾಲುರಿದ್ದರಿಂದ ರೈತರು ಹರ್ಷಗೊಂಡಿದ್ದಾರೆ. ಅಡಿಕೆ ಬೆಳೆಗಾರರು ನಿಟ್ಟುಸಿರು ಬಿಟ್ಟಿದ್ದಾರೆ.
10ಕ್ಕೂ ಹೆಚ್ವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮೇ 17ರಂದು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆ ಸುರಿಯಲಿದೆ. ಉಳಿದ ಜಿಲ್ಲೆಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ ಸಾಧಾರಣ ಮಳೆಯಾಗಬಹುದು.
ಮೇ 18ರಂದು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದ್ದು, ಮೇ 19ರಂದು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆ ಬೀಳುವ ನಿರೀಕ್ಷೆ ಇದೆ.



