ನವದೆಹಲಿ: ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಭರ್ಜರಿ ಜಯ ಗಳಿಸಿದ ಹರದನಹಳ್ಳಿ ದೇವೇಗೌಡ ಕುಮಾರಸ್ವಾಮಿ ಅವರು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರದಲ್ಲಿ ಸಂಪುಟ ದರ್ಜೆಯ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.
ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಮಾಣ ವಚನ ಬೋಧಿಸಿದರು. ಈ ಬಾರಿ ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರಲು ಮೈತ್ರಿ ಪಕ್ಷವಾಗಿ ಜೆಡಿಎಸ್ ಕೈ ಜೋಡಿಸಿತ್ತು. ಈ ಹಿನ್ನೆಲೆಯಲ್ಲಿ ಹರದನಹಳ್ಳಿ ದೇವೇಗೌಡ ಕುಮಾರಸ್ವಾಮಿ ಸವರಿಗೆ ಸಂಪುಟ ದರ್ಜೆಯ ಸಚಿವ ಸ್ಥಾನ ದಕ್ಕಿದೆ.
ಸಂಸದ ಎಚ್.ಡಿ ಕುಮಾರಸ್ವಾಮಿ ಅವರು ಮೂರನೇ ಬಾರಿಗೆ ಸಂಸತ್ತು ಪ್ರವೇಶಿಸಿದ್ದಾರೆ. ಎಚ್.ಡಿ ಕುಮಾರಸ್ವಾಮಿ ಅವರು ಇದಕ್ಕೂ ಮುನ್ನ ಕನಕಪುರ ಲೋಕಸಭಾ ಕ್ಷೇತ್ರದಿಂದ ಮೊದಲ ಬಾರಿ ಸಂಸದರಾಗಿದ್ದರು. ನಂತರ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಎರಡನೇ ಬಾರಿ ಲೋಕಸಭೆ ಪ್ರವೇಶ ಮಾಡಿದ್ದರು. ಇದೀಗ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಭಾರೀ ಅಂತರದಿಂದ ಗೆದ್ದು ಸಂಸತ್ ಪ್ರವೇಶಿಸಿದ್ದಾರೆ. ಎಚ್.ಡಿ ಕುಮಾರಸ್ವಾಮಿ ಅವರು ಮೊದಲ ಬಾರಿಗೆ ಕೇಂದ್ರದಲ್ಲಿ ಸಚಿವರಾಗುತ್ತಿದ್ದಾರೆ.
ಎನ್ ಡಿ ಎ ಸಮ್ಮಿಶ್ರ ಸರ್ಕಾರದ 72 ಸಚಿವರೊಂದಿಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಅವರಲ್ಲಿ 30 ಕ್ಯಾಬಿನೆಟ್ ಮಂತ್ರಿಗಳು, 5 ಸ್ವತಂತ್ರ ಉಸ್ತುವಾರಿ ಮತ್ತು 36 ರಾಜ್ಯ ಸಚಿವರು ಸೇರಿದ್ದಾರೆ.



