ದಾವಣಗೆರೆ: ಕಡ್ಡಾಯವಾಗಿ ಹೆಲ್ಮೆಟ್ ಧರಿಸುವಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಎಸ್ಪಿ ಉಮಾ ಪ್ರಶಾಂತ್ ನೇತೃತ್ವದಲ್ಲಿ ಬೈಕ್ ಜಾಥಾ ಆಯೋಜಿಸಲಾಗಿತ್ತು.
ಜಿಲ್ಲಾ ಪೊಲೀಸ್ ವತಿಯಿಂದ ಜಗಳೂರು ಪೊಲೀಸ್ ಠಾಣೆಯಲ್ಲಿ ಜನ ಸಂಪರ್ಕ ಸಭೆ ಹಾಗೂ ಸಂಚಾರ ನಿಯಮಗಳ ಪಾಲನೆ ಬಗ್ಗೆ ಜಾಗೃತಿ ಕಾರ್ಯಕ್ರಮ ಹಾಗೂ ಕಡ್ಡಾಯವಾಗಿ ಹೆಲ್ಮೆಟ್ ಧರಿಸುವಂತೆ ಬೈಕ್ ಜಾಥಾ ಆಯೋಜಿಸಲಾಗಿತ್ತು. ಇದೇ ವೇಳೆ ಜಗಳೂರು ಪೊಲೀಸ್ ಠಾಣೆ ಅಧಿಕಾರಿ, ಸಿಬ್ಬಂದಿಗಳಿಗೆ ಹೆಲ್ಮೆಟ್ ವಿತರಣೆ ಮಾಡಲಾಯಿತು.
ರೇಡಿಯನ್ಸ್ ಸೋಲಾರ್ ಪ್ರೈ. ಲಿಮಿಟೆಡ್ ಸಿಎಸ್ಆರ್ ಸ್ಕೀಂ ಅಡಿಯಲ್ಲಿ ನೀಡಿದ ಮಹಿಳಾ ಸಿಬ್ಬಂದಿಗಳಿಗೆ ಪಿಂಕ್ ಹೆಲ್ಮೆಟ್ , ಪುರುಷ ಸಿಬ್ಬಂದಿಗಳಿಗೆ ವೈಟ್ ಹೆಲ್ಮೆಟ್ಗಳನ್ನು ಎಸ್ಪಿ ವಿತರಣೆ ಮಾಡಿದರು. ಈ ವೇಳೆಯಲ್ಲಿ ಜಗಳೂರು ಶಾಸಕ ಬಿ.ದೇವೇಂದ್ರಪ್ಪ ಮತ್ತು ದಾವಣಗೆರೆ ಗ್ರಾಮಾಂತರ ಉಪ ವಿಭಾಗದ ಬಿ.ಎಸ್.ಬಸವರಾಜ್ ಉಪಸ್ಥಿತರಿದ್ದರು. ಕಡ್ಡಾಯವಾಗಿ ಹೆಲ್ಮೆಟ್ ಧರಿಸುವಂತೆ ಬೈಕ್ ಜಾಥಾ ಮೂಲಕ ಸಾರ್ವಜನಿಕರಲ್ಲಿ ಸಂಚಾರಿ ನಿಯಮ ಕುರಿತು ಜಾಗೃತಿ ಮೂಡಿಸಲಾಯಿತು.
ಸಭೆಯಲ್ಲಿ ಮಾತನಾಡಿದ ಎಸ್ಪಿ, ಸಾರ್ವಜನಿಕರು ಈಗ ವ್ಯಕ್ತಪಡಿಸಿರುವ ಸಮಸ್ಯೆಗಳನ್ನು ಸರಿಪಡಿಸಲು ಕ್ರಮ ಕೈಗೊಳ್ಳುತ್ತೇವೆ. ಕಾನೂನು ಬಾಹಿರ ಚಟುವಟಿಕೆ, ಅಕ್ರಮ ಮದ್ಯ ಮಾರಾಟ, ಮನೆಗೆ ಬೀಗ ಹಾಕಿಕೊಂಡು ಬೇರೆ ಊರಿಗೆ ಹೋದ ಸಮಯದಲ್ಲಿ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡುವಂತೆ ಸಾರ್ವಜನಿರಿಗೆ ಸೂಚನೆ ನೀಡಿದರು.
ಪ್ರತಿ ಮನೆಯಲ್ಲಿ ಸಿಸಿ ಟಿವಿ ಅಳವಡಿಸಿಕೊಳ್ಳುವ ಬಗ್ಗೆ ಸಾರ್ವಜನಿಕರಿಗೆ ಮನವರಿಕೆ ಮಾಡಿಕೊಟ್ಟರು. ಇದರಿಂದ ಅಪರಾಧಗಳನ್ನು ತಡೆಗಟ್ಟಲು ಹಾಗು ಆರೋಪಿಗಳನ್ನು ಪತ್ತೆ ಹಚ್ಚಲು ಸಹಕಾರಿಯಾಗುತ್ತದೆ ಎಂದು ತಿಳಿಸಿದರು. ಸೈಬರ್ ಅಪರಾಧ, ವೆಬ್ ಸೈಟ್, 112 ಇಆರ್ಎಸ್ ಬಗ್ಗೆ ಸಾರ್ವಜನಿಕರಿಗೆ ಮನವರಿಕೆ ಮಾಡಿಕೊಟ್ಟರು. ಸಾಮಾಜಿಕ ಜಾಲತಾಣಗಳ ಬಳಕೆ ಬಗ್ಗೆ ಎಚ್ಚರಿಕೆ ವಹಿಸಲು ತಿಳಿಸಿದರು.



