ಭದ್ರಾ ಜಲಾಶಯ; ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೆಗೆದುಕೊಂಡ ಮಹತ್ವದ ನಿರ್ಣಯಗಳ ಸಂಪೂರ್ಣ ವಿವರ ಇಲ್ಲಿದೆ…

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
3 Min Read

ಶಿವಮೊಗ್ಗ: ಈ ಬಾರಿಯ ಉತ್ತಮ ಮುಂಗಾರು ರೈತರಲ್ಲಿ ಮಂದಹಾಸ ಮೂಡಿಸಿದ್ದು, ಭದ್ರಾ ಜಲಾಶಯ ಭರ್ತಿಯಾಗುವ ಹಂತ ತಲುಪಿದೆ. ಈ ಹಂತದಲ್ಲಿ ರೈತರ ಕೃಷಿ ಚಟುವಟಿಕೆಗಳಿಗೆ ಸಹಕಾರಿಯಾಗುವಂತೆ ಭದ್ರಾ ಎಡದಂಡೆ ಮತ್ತು ಬಲದಂಡೆ ಕಾಲುವೆಗಳ ಮೂಲಕ ನೀರಿನ ಲಭ್ಯತೆ ಹಾಗೂ ಮುಂದಿನ ದಿನಗಳಲ್ಲಿ ಮಳೆ ಬರಬಹುದಾದ ಅಂದಾಜಿನ ಆಧಾರದ ಮೇಲೆ ತಜ್ಞರ ಅಭಿಪ್ರಾಯವನ್ನಾಧರಿಸಿ ನೀರನ್ನು ಹರಿಸಲು ನಿರ್ಣಯ ಕೈಗೊಳ್ಳಲಾಗಿದೆ ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್.ಬಂಗಾರಪ್ಪ ಹೇಳಿದರು.

ಇಂದು ಮಲವಗೊಪ್ಪದ ಕಾಡಾ ಕಚೇರಿಯಲ್ಲಿ ಏರ್ಪಡಿಸಲಾಗಿದ್ದ ಭದ್ರಾ ಜಲಾಶಯದ ನೀರಾವರಿ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಅಚ್ಚುಕಟ್ಟು ಪ್ರದೇಶದ ವ್ಯಾಪ್ತಿಗೊಳಪಡುವ ಒಣಭೂಮಿ ಪ್ರದೇಶಗಳಿಗೂ ನೀರು ಹರಿಸುವುದನ್ನು ಗಮನದಲ್ಲಿಟ್ಟುಕೊಂಡು ಮುಂದಿನ ದಿನಗಳಲ್ಲಿ ಜಲಾಶಯದಲ್ಲಿ ನೀರನ್ನು ಉಳಿಸಿಕೊಳ್ಳುವ, ಸದ್ಬಳಕೆ ಮಾಡಿಕೊಳ್ಳುವ ಹಾಗೂ ಜಿಲ್ಲೆಯಲ್ಲಿ ಕೈಗೊಳ್ಳಬಹುದಾದ ನೀರಾವರಿ ಯೋಜನೆಗಳ ಕುರಿತು ಮುಂದಿನ 15ದಿನಗಳೊಳಗಾಗಿ ರಾಜ್ಯ ನೀರಾವರಿ ಸಚಿವ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಉಪಸ್ಥಿತಿಯಲ್ಲಿ ಶಿವಮೊಗ್ಗ ಜಿಲ್ಲಾ ಕೇಂದ್ರದಲ್ಲಿ ಅಚ್ಚುಕಟ್ಟು ಪ್ರದೇಶದ ವ್ಯಾಪ್ತಿಗೊಳಪಡುವ ಎಲ್ಲಾ ಜನಪ್ರತಿನಿಧಿಗಳು, ಅಧಿಕಾರಿಗಳು, ರೈತ ಮುಖಂಡರುಗಳ ಸಭೆಯನ್ನು ಶೀಘ್ರದಲ್ಲಿ ನಡೆಸಲಾಗುವುದು ಎಂದ ಅವರು ಇದೇ ಸಂದರ್ಭದಲ್ಲಿ ತುಂಗಾ, ಭದ್ರಾ, ಶರಾವತಿ ಸೇರಿರದಂತೆ ಮತ್ತಿತರ ಜಲಾಶಯಗಳ ನೀರಿನ ನಿರ್ವಹಣೆ, ಸಮಸ್ಯೆ-ಸವಾಲು, ಅಭಿವೃದ್ಧಿ ಚಟುವಟಿಕೆಗಳ ಬಗ್ಗೆ ಚರ್ಚಿಸಲು ಉದ್ದೇಶಿಸಲಾಗಿದೆ ಎಂದವರು ನುಡಿದರು.

ಈ ಪ್ರದೇಶದಲ್ಲಿ ಬೆಳೆ ಮಾದರಿ ಬದಲಾವಣೆಗಳಾಗಿದ್ದು, ಅಗತ್ಯಗಳಿಗೆ ತಕ್ಕಂತೆ ನೀರನ್ನು ಹರಿಸುವ ಬಗ್ಗೆ ಗಮನಹರಿಸುವ ಅಗತ್ಯವಿದೆ. ಅನಧಿಕೃತ ಪಂಪ್‌ಸೆಟ್ ನಿಯಂತ್ರಣಕ್ಕೆ ಹಾಗೂ ಅಗತ್ಯ ಕಠಿಣ ಕ್ರಮಗಳನ್ನು ಅನುಸರಿಸಲು ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.

ಕರ್ನಾಟಕ ನೀರಾವರಿ ನಿಗಮದಿಂದ ಸಮುದಾಯ ಭವನ, ದೇವಸ್ತಾನಗಳ ಅಭಿವೃದ್ಧಿ ಮತ್ತಿತರ ಚಟುವಟಿಕೆಗಳಿಗೆ ನೀಡಲಾಗುತ್ತಿದ್ದ ಅನುದಾನವನ್ನು ನಿಯಂತ್ರಿಸಿ, ನೀರಾವರಿ ಯೋಜನೆಯ ಅಭಿವೃದ್ಧಿ ಉದ್ದೇಶಗಳಿಗಾಗಿಯೇ ಬಳಸಿಕೊಳ್ಳಲು ಕಳೆದ ವಾರ ಬೆಂಗಳೂರಿನಲ್ಲಿ ನೀರಾವರಿ ಸಚಿವರ ಸಭೆಯಲ್ಲಿ ಈ ರೀತಿಯ ನಿರ್ಣಯ ಕೈಗೊಳ್ಳಲಾಗಿದೆ ಎಂದರು.

ರೈತರ ಹಿತಕಾಯುವ ನಿಟ್ಟಿನಲ್ಲಿ ಕಾಡಾ ಕಾರ್ಯನಿರ್ವಹಿಸಲಿದೆ. ಎಲ್ಲಾ ಸಂದರ್ಭಗಳಲ್ಲಿಯೂ ರೈತರು ಸಾರ್ವಜನಿಕರು ಸಹಕರಿಸಬೇಕು ಎಂದು ಕಾಡಾ ಅಧ್ಯಕ್ಷ ಅಂಶುಮತ್‌ಗೌಡ ಎಂದರು.

ನೀರಿನ ಸಮರ್ಪಕ ನಿರ್ವಹಣೆಗೆ ಅಧಿಕಾರಿಗಳ ಕೊರತೆ ಪ್ರಧಾನವಾಗಿದೆ. ನಾಲಾದಲ್ಲಿ ಗಿಡಗಂಟೆಗಳು ಬೆಳೆದು ಸುಗಮ ನೀರು ಸರಬರಾಜಿಗೆ ತೀವ್ರ ತರಹದ ಅಡಚಣೆ ಉಂಟಾಗಿದೆ. ಉದ್ಯೋಗಖಾತ್ರಿ ಯೋಜನೆಯಡಿ ನಾಲಾ ದುರಸ್ತಿ ಕಾರ್ಯ ಕೈಗೆತ್ತಿಕೊಳ್ಳಬೇಕು. ದೊಡ್ಡ ಪ್ರಮಾಣದಲ್ಲಿ ದುರಸ್ತಿಕಾರ್ಯ ಕೈಗೆತ್ತಿಕೊಳ್ಳುವಂತಹ ಸಂದರ್ಭಗಳಲ್ಲಿ ಭಾರೀ ಯಂತ್ರಗಳನ್ನು ಬಳಸಿಕೊಳ್ಳಬೇಕು. ಅಗತ್ಯವಿದ್ದಲ್ಲಿ ಸರ್ಕಾರದ ಆರ್ಥಿಕ ನೆರವು ಪಡೆದುಕೊಳ್ಳಬೇಕು. ಸೌಡಿಗರಿಗೆ ಸಕಾಲದಲ್ಲಿ ವೇತನ ನೀಡಬೇಕು. ಹೊರಗುತ್ತಿಗೆ ಆಧಾರದ ಮೇಲೆ ಹೆಚ್ಚಿನ ಸಿಬ್ಬಂಧಿಗಳನ್ನು ನೇಮಿಸಿಕೊಳ್ಳಬೇಕು. ಇದರಿಂದಾಗಿ ಅಚ್ಚುಕಟ್ಟು ವ್ಯಾಪ್ತಿಯ ಕೊನೆಯ ಪ್ರದೇಶಗಳಿಗೆ ನೀರು ತಲುಪಿಸಲು ಸಾಧ್ಯವಾಗಲಿದೆ ಎಂದು ರೈತ ಮುಖಂಡ ಬಸವರಾಜಪ್ಪ ಹೇಳಿದರು.

ಕಳೆದ ಮತ್ತು ಪ್ರಸಕ್ತ ಸಾಲಿನಲ್ಲಿ ನಿಯಮ ಉಲ್ಲಂಘಿಸಿ ಜಲಾಶಯದಿಂದ ನೀರು ಬಿಡುಗಡೆ ಮಾಡಿರುವುದು ಸರಿಯಲ್ಲ. ಬೆಳೆ ಆಧಾರಿತವಾಗಿ ಕಾಲಕಾಲಕ್ಕೆ ನೀರು ಬಿಡುವುದನ್ನು ಅನುಸರಿಸಬೇಕು. ನೀರನ್ನು ತಡೆದು-ಬಿಡುವ ಪದ್ದತಿಯಲ್ಲಿ ಬದಲಾವಣೆ ಅಗತ್ಯವಿದೆ. ಕೆರೆ-ಕಟ್ಟೆ ಕಾಲುವೆಗಳಲ್ಲಿ ಸತತವಾಗಿ ನೀರನ್ನು ಹರಿಸಿ, ಅಂತರ್ಜಲ ಹೆಚ್ಚಿಸುವ ಅಗತ್ಯವಿದೆ. ವಿಶೇಷವಾಗಿ ಸಮರ್ಪಕ ನೀರಿನ ನಿರ್ವಹಣೆ ಬಗ್ಗೆ ಗಮನಹರಿಸಬೇಕು. ಜಲಾಶಯದ ರಕ್ಷಣೆ ಬಗ್ಗೆ ತಜ್ಞರ ಸಮಿತಿ ರಚಿಸಿ ನಿರ್ವಹಣೆ ಬಗ್ಗೆ ಗಮನಹರಿಸಬೇಕು. ಅದರ ನಿರ್ಲಕ್ಷ್ಯ ಸಹಿಸಲಾಗದು ರೈತ ಮುಖಂಡ ಕೆ.ಟಿ.ಗಂಗಾಧರಪ್ಪ ಅಭಿಪ್ರಾಯಪಟ್ಟರು.

ಇಂದಿನಿಂದಲೇ ಜಲಾಶಯದಿಂದ ನೀರನ್ನು ಹರಿಸಲು ನಿರ್ಣಯ ಕೈಗೊಳ್ಳಬೇಕು. ಕೊನೆ ಪ್ರದೇಶದಲ್ಲಿನ ಕೃಷಿ ಚಟುವಟಿಕೆಗಳಿಗೆ ನೀರನ್ನು ತಲುಪುತ್ತಿಲ್ಲ. ಪ್ರಮುಖವಾಗಿ ಕಾಲುವೆಗಳ ನಿರ್ವಹಣೆಗೆ ಕ್ರಮ ಕೈಗೊಳ್ಳಬೇಕು. ಭದ್ರಾ ನಾಲೆಯ ಆಧುನೀಕರಣದಿಂದಾಗಿ ಹೆಚ್ಚಿನ ಪ್ರಮಾಣದ ನೀರನ್ನು ಹರಿಸಲು ಸಾಧ್ಯವಾಗಿದೆ. ಅಕ್ರಮ ಪಂಪ್‌ಸೆಟ್‌ಗಳ ಹಾವಳಿ ನಿಯಂತ್ರಿಸುವುದು ಅನಿವಾರ್ಯವಾಗಿದೆ. ಅವಶ್ಯಕ ಕಾಮಗಾರಿಗಳಿಗೆ ಸರ್ಕಾರದ ನೆರವು ಅಗತ್ಯವಿದೆ ಎಂದು ಬಿ.ಪಿ.ಹರೀಶ್ ಹೇಳಿದರು.

ಸಭೆಯಲ್ಲಿ ಕಾಡಾ ಅಧ್ಯಕ್ಷ ಅಂಶುಮತ್‌ಗೌಡ, ಹೊನ್ನಾಳಿ ಶಾಸಕ ಬಿ.ಜಿ.ಶಾಂತನಗೌಡರ್, ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್, ಹರಿಹರ ಶಾಸಕ ಬಿ.ಪಿ.ಹರೀಶ್, ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ, ಹರಪನಹಳ್ಳಿ ಶಾಸಕಿ ಶ್ರೀಮತಿ ಲತಾ, ಚನ್ನಗಿರಿ ಶಾಸಕ ಶಿವಗಂಗೆ ಬಸವರಾಜ್, ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಶಾಸಕಿ ಶ್ರೀಮತಿ ಶಾರದಾ ಪೂರ್ಯಾನಾಯ್ಕ್, ಎಂ.ಎ.ಡಿ.ಬಿ.ಅಧ್ಯಕ್ಷ ಆರ್.ಎಂ.ಮಂಜುನಾಥಗೌಡ, ವಿಧಾನಪರಿಷತ್ ಸದಸ್ಯೆ ಶ್ರೀಮತಿ ಬಲ್ಕಿಷ್‌ಬಾನು, ಜಿಲ್ಲಾಧಿಕಾರಿ ಗುರುದತ್ತಹೆಗಡೆ, ದಾವಣಗೆರೆ ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಸೇರಿದಂತೆ ಅನೇಕ ರೈತಮುಖಂಡರು, ಅಧಿಕಾರಿಗಳು ಹಾಗೂ ನೀರಾವರಿ ಇಲಾಖಾ ಅಧಿಕಾರಿ-ಸಿಬ್ಬಂಧಿಗಳು ಉಪಸ್ಥಿತರಿದ್ದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *