ದಾವಣಗೆರೆ: ಜಿಲ್ಲೆಯ ಚನ್ನಗಿರಿ ತಾಲೂಕಿನ ಹಿರೇಮಳಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿನ ಶೌಚಾಲಯ ಮತ್ತು ಕುಡಿಯುವ ನೀರಿನ ಸಮಸ್ಯೆಗೆ ಸಂಬಂಧಿಸಿದ ವಿಡಿಯೋವನ್ನು ʼಎಕ್ಸ್ʼ ಬಳಕೆದಾರರೊಬ್ಬರು ಹಂಚಿಕೊಂಡಿದ್ದು ಮುಖ್ಯಮಂತ್ರಿಗಳ ಕಚೇರಿಯ ಕುಂದುಕೊರತೆ ವಿಭಾಗದ ವಿಶೇಷ ಕರ್ತವ್ಯಾಧಿಕಾರಿಗಳನ್ನು ಟ್ಯಾಗ್ ಮಾಡಿದ್ದರು. ಇದನ್ನು ಗಮನಿಸಿದ ಅಧಿಕಾರಿಗಳು ಚನ್ನಗಿರಿ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದರು.
ಅದರಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ಖುದ್ದಾಗಿ ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದರಿ ಶಾಲೆಗೆ ಉದ್ಯೋಗಖಾತ್ರಿ ಯೋಜನೆಯಡಿಯಲ್ಲಿ ಶೌಚಾಲಯ ಮಂಜೂರಾಗಿದ್ದು ಕಾಮಗಾರಿಯು ಪೂರ್ಣಗೊಂಡಿರುತ್ತದೆ. ಆದರೆ ಶೌಚಾಲಯಕ್ಕೆ ಬಾಗಿಲುಗಳನ್ನು ಮತ್ತು ಸಿಂಟೆಕ್ಸ್ಗೆ ನೀರಿನ ಸಂಪರ್ಕವನ್ನು ಕಲ್ಪಿಸಿರಲಿಲ್ಲ. ಕೂಡಲೇ ಹಿರೇಮಳಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯನ್ನು ಭೇಟಿ ಮಾಡಿ ಶೌಚಾಲಯಕ್ಕೆ ಡೋರ್ಗಳನ್ನು ಅಳವಡಿಸಿ, ನೀರಿನ ಸಂಪರ್ಕವನ್ನು ಕಲ್ಪಿಸಲಾಗಿದ್ದು, ವಿದ್ಯಾರ್ಥಿಗಳು ಬಳಸುವಂತೆ ಮಾಡಲಾಗಿದೆ.
ವಿದ್ಯಾರ್ಥಿಗಳಿಗೆ ಕುಡಿಯುವ ನೀರನ್ನು ಅಕ್ಷರದಾಸೋಹ ಕೊಠಡಿಯಿಂದ ವ್ಯವಸ್ಥೆ ಮಾಡಲಾಗಿರುತ್ತದೆ. ಮಕ್ಕಳು ಕೈತೊಳೆಯಲು ಉಪಯೋಗಿಸುತ್ತಿದ್ದ ನೀರಿನ ತೊಟ್ಟಿಯನ್ನು ಸ್ವಚ್ಛಗೊಳಿಸಿ ಸುಣ್ಣ ಬಳಿಸಿ ಸ್ವಚ್ಛವಾಗಿಡಲಾಗಿದೆ. ಶಾಲೆಯ ಆಟದ ಮೈದಾನವನ್ನು ಸ್ವಚ್ಛಗೊಳಿಸಿ ಶಾಲೆಯ ಸಮಸ್ಯೆಗಳನ್ನು ಬಗೆಹರಿಸಲಾಗಿದೆ. ಈ ಸಂಬಂಧ ಶಾಲೆಯ ಮುಖ್ಯಶಿಕ್ಷಕರಿಗೆ ಕಾರಣ ಕೇಳಿ ನೋಟಿಸ್ ನೀಡಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳು ತಿಳಿಸಿದ್ದಾರೆ.



