ದಾವಣಗೆರೆ: ಕಳೆದ 10 ದಿನದಿಂದ ತಗ್ಗಿದ್ದ ಮಳೆ ಇಂದು ಬೆಳ್ಳಂಬೆಳಗ್ಗೆಯಿಂದ ಜಿಲ್ಲೆಯಲ್ಲಿ ಭಾರೀ ಮಳೆ ಸುರಿದಿದೆ. ಸತತ ಎರಡ್ಮೂರು ಗಂಟೆಗೂ ಹೆಚ್ಚು ಹೊತ್ತು ಗುಡುಗು, ಸಿಡಿಲು ಸಹಿತ ಜೋರು ಮಳೆಯಾಗಿದೆ.
ಒಂದು ವಾರದಿಂದ ಬಿಸಿಲಿನ ತಾಪದಿಂದ ಮೆಕ್ಕೆಜೋಳ ಬೆಳೆ ಒಣಗಲು ಆರಂಭಿಸಿದ್ದವು. ಇಂದು (ಆ.14) ಸುರಿದ ಜೋರು ಮಳೆಯಿಂದ ತಂಪೆರೆದಂತಾಗಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ತಗ್ಗಿದ್ದ, ಮಳೆ ಇಂದಿನಿಂದ ಮತ್ತೆ ಚುರುಕು ಪಡೆದುಕೊಂಡಿದೆ. ದಾವಣಗೆರೆ, ಹರಿಹರ, ಮಲೇಬೆನ್ನೂರು, ಚನ್ನಗಿರಿ, ನ್ಯಾಮತಿ, ಹೊನ್ನಾಳಿ ಸಹಿತ ಎಲ್ಲ ಕಡೆ ಮಳೆಯಾಗಿದೆ.
ಕೇರಳದ ಭಾಗದಲ್ಲಿ ಮತ್ತೆ ಮಳೆ ಚುರುಕು ಪಡೆದಿದ್ದು, ಕರ್ನಾಟಕದ ದಕ್ಷಿಣ ಒಳನಾಡಿನ ಮೇಲೂ ಬೀರಲಿದ್ದು, ಕೆಲಪ್ರದೇಶದಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಕೊಡಗು, ಮೈಸೂರು, ಬೆಂಗಳುರು ಸೇರಿ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿನ ಮಂಡ್ಯ, ರಾಮನಗರ, ಹಾಸನ, ತುಮಕೂರು, ಶಿವಮೊಗ್ಗ, ಚಿಕ್ಕಮಗಳೂರು, ಚಾಮರಾಜನಗರ ಸೇರಿದಂತೆ ಹಲವೆಡೆ ವ್ಯಾಪಕ ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ, ಬೀದರ್, ದಾವಣಗೆರೆ, ಚಿತ್ರದುರ್ಗ, ತುಮಕೂರು, ಕೋಲಾರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆ ಮುನ್ಸೂಚನೆ ಇದೆ.



