ದಾವಣಗೆರೆ: ಮುಡಾ ಪ್ರಕರಣದಲ್ಲಿ ಸಿಲುಕಿರುವ ಸಿಎಂ ಸಿದ್ದರಾಮಯ್ಯ ಯಾವುದೇ ಕ್ಷಣದಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಇದೆ ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದಲ್ಲಿ ಒಂದು ವೇಳೆ ಕ್ಷೀಪ್ರ ರಾಜಕೀಯ ಬೆಳವಣಿಗೆಗಳು ನಡೆದರೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ತಮ್ಮ ಮೇಲೆ ಯಾವುದೇ ಕಳಂಕ ಇರಬಾರದೆಂಬ ಮುನ್ನೆಚ್ಚರಿಕೆ ಹಿನ್ನೆಲೆಯಲ್ಲಿ ಕೆಐಎಡಿಬಿಯಿಂದ ಕಾನೂನು ಬಾಹಿರವಾಗಿ ಪಡೆದಿದ್ದ ಜಮೀನನ್ನು ವಾಪಸ್ ಕೊಟ್ಟಿದ್ದಾರೆ. ಈ ವಿಚಾರವಾಗಿ ದೊಡ್ಡದಾಗಿ ಮಾತನಾಡುವ ಪ್ರಿಯಾಂಕ ಖರ್ಗೆ ತಮ್ಮ ಇಲಾಖೆ ಕಡೆ ಗಮನಹರಿಸಲಿ ಎಂದರು.
ರಾಜ್ಯ ಸರ್ಕಾರದ ವೈಫಲ್ಯಗಳನ್ನು ಮುಚ್ಚಿಹಾಕಿಕೊಳ್ಳಲು ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ವಿರುದ್ಧ ಆರೋಪ ಮಾಡುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಕರ್ನಾಟಕಕ್ಕೆ ಯುಪಿಎ ಸರ್ಕಾರಕ್ಕಿಂತಲೂ ಮೂರು ಪಟ್ಟು ಹೆಚ್ಚು ತೆರಿಗೆ ಮತ್ತು ಹಂಚಿಕೆಯಲ್ಲಿ ಪಾಲು ನೀಡಿದೆ. ಸಿದ್ದರಾಮಯ್ಯ ಸ್ವಯಂಘೋಷಿತ ಹಣಕಾಸು ತಜ್ಞರಿಗೆ, ನಿರ್ದಿಷ್ಟ ಯೋಜನೆಗಳಿಗೆ ಬಿಡುಗಡೆಯಾದ ಹಣದ ಮೊತ್ತವನ್ನು ತಿಳಿದುಕೊಳ್ಳುವುದು ಕಷ್ಟವೇನಲ್ಲ. ಎಲ್ಲದಕ್ಕೂ ಕೇಂದ್ರ ಸರಕಾರನ್ನು ಏಕೆ ದೂರುತ್ತೀರಿ? ಎಂದರು.
ರಾಜ್ಯ ಸರ್ಕಾರ ಕೇಂದ್ರ ವಿರುದ್ಧ ಸಂಘರ್ಷ ಸರಿಯಲ್ಲ. ರಾಜ್ಯದ ಸಂಸದರ ಮೇಲೆ ಏಕೆ ಆರೋಪಗಳನ್ನು ಮಾಡುತ್ತೀರಿ? ಸಂಘರ್ಷದಿಂದಲೇ ಸಮಸ್ಯೆ ಬಗೆಹರಿಯುತ್ತದೆ ಎಂದು ಭಾವಿಸುವುದು ಸರಿಯಲ್ಲ ರಾಜ್ಯ ಸರಕಾರದಿಂದಲೇ ಕನ್ನಡಿಗರಿಗೆ ಅನ್ಯಾಯವಾಗುತ್ತಿದೆ. ತನ್ನ ರಾಜಕೀಯ ಪ್ರತಿಷ್ಠೆ ಹಾಗೂ ಸ್ವಾರ್ಥಕ್ಕಾಗಿ ಕಾಂಗ್ರೆಸ್ ಸರಕಾರ ರಾಜಕೀಯ ಹಿತಾಸಕ್ತಿ ಚೆಲ್ಲಾಟ ಆಡುತ್ತಿದೆ ಎಂದರು.
ಈ ಸಂದರ್ಭದಲ್ಲಿ ಲೋಕಿಕೆರೆ ನಾಗರಾಜ್, ಅಜಯ್ ಕುಮಾರ್, ಮಾಡಾಳ್ ಮಲ್ಲಿಕಾರ್ಜುನ ಸೇರಿ ಮತ್ತಿತರರು ಉಪಸ್ಥಿತರಿದ್ದರು.



