ದಾವಣಗೆರೆ: ಬಡ, ಮಧ್ಯಮ ವರ್ಗದವರಿಗೆ ದಾವಣಗೆರೆ-ಹರಿಹರ ಅಭಿವೃದ್ಧಿ ಪ್ರಾಧಿಕಾರದಿಂದ (ದೂಡಾ) ಹೊಸ ಬಡಾವಣೆ, ನಿವೇಶನ ಹಾಗೂ ಅಪಾರ್ಟ್ಮೆಂಟ್ ನಿರ್ಮಾಣ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಹೇಳಿದರು.
ದೂಡಾ ಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಈಗಾಗಲೇ ಅಭಿವೃದ್ಧಿ ಪಡಿಸಿದ ಮಾದರಿಯಲ್ಲಿ ದೂಡಾ ಮೂಲಕ ಬಡವರಿಗೆ ಮತ್ತು ಮಧ್ಯಮ ವರ್ಗದವರಿಗೆ ಅಪಾರ್ಟ್ಮೆಂಟ್ ನಿರ್ಮಾಣ ಮಾಡಲಾಗುವುದು ಎಂದರು.
ದಾವಣಗೆರೆ ಮತ್ತು ಹರಿಹರ ನಗರ ನಗರದಲ್ಲಿ ಹೊಸ ಬಡಾವಣೆ, ನಿವೇಶನ ಹಾಗೂ ಅಪಾರ್ಟ್ಮೆಂಟ್ ನಿರ್ಮಾಣಕ್ಕೆ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಬಡಾವಣೆಗಳ ಆಧಾರದ ಮೇರೆಗೆ ದರ ನಿಗದಿಪಡಿಸಲಾಗುವುದು. ಈಗಾಗಲೇ ನಿರ್ಮಾಣವಾಗುವ ಹೊಸ ಬಡಾವಣೆಗಳಿಗೆ ಪಾರದರ್ಶಕತೆ ಕಾಯ್ದುಕೊಳ್ಳಲು ಇ-ಸ್ವತ್ತು ಆನ್ ಲೈನ್ ಸೌಲಭ್ಯ ಕಲ್ಪಿಸಲಾಗಿದೆ ಎಂದರು.
40 ಸಾವಿರ ಅಕ್ರಮ ಸಕ್ರಮ ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ. ವಿನೋಬನಗರ, ಎಲ್ಲಮ್ಮನಗರ, ಜಾಲಿನಗರ ಸೇರಿದಂತೆ ಹತ್ತಾರು ಬಡಾವಣೆಗಳ ಜನರ ಆಸ್ತಿ ಸಕ್ರಮಗೊಂಡಿದೆ.
ದೂಡಾ ಅಧ್ಯಕ್ಷ ದಿನೇಶ್ ಕೆ.ಶೆಟ್ಟಿ, ಮೇಯರ್ ಕೆ.ಚಮನ್ ಸಾಬ್, ಉಪಮೇಯರ್ ಸೋಗಿ ಶಾಂತಕುಮಾರ್, ಜಿಲ್ಲಾಧಿಕಾರಿ ಗಂಗಾಧರಸ್ವಾಮಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್, ದೂಡಾ ಆಯುಕ್ತ ಹುಲ್ಮನಿ ತಿಮ್ಮಣ್ಣ ಇದ್ದರು.



