ಡಿವಿಜಿ ಸುದ್ದಿ, ಬೀದರ್: ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ನಿರ್ಮಾಣವಾಗಿದ್ದು, ಕಾನೂನು ದುರ್ಬಳಕೆ ಮಾಡಿಕೊಂಡು ವಾಕ್ ಸ್ವಾತಂತ್ರ್ಯ ಹತ್ತಿಕ್ಕುವ ಪ್ರಯತ್ನ ನಡೆಯುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದರು.
ದೇಶ ದ್ರೋಹ ಆರೋಪ ಎದುರಿಸುತ್ತಿರುವ ಶಾಹೀನ್ ಶಾಲೆ ಭೇಟಿ ನೀಡಿದ ನಂತರ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ತುರ್ತು ಪರಿಸ್ಥಿತಿ ವಾತಾವರಣ ನಿರ್ಮಾಣವಾಗಿದ್ದು, ಬ್ರಿಟಿಷರ ಕಾಲದ ಕೆಲ ಕಾನೂನುಗಳ ಪುನರ್ ಪರಿಶೀಲನೆ ಮಾಡುವ ಅಗತ್ಯವಿದೆ ಎಂದರು.
ಸ್ವಾತಂತ್ರ್ಯ ಪೂರ್ವದಲ್ಲಿ ಬ್ರಿಟಿಷರು ಜನರ ಹೋರಾಟವನ್ನು ಹತ್ತಿಕ್ಕಲು ದೇಶ ದ್ರೋಹದ ಕಾನೂನು ಜಾರಿಗೆ ತಂದಿದ್ದರು. ಅದು ಈಗಲೂ ಮುಂದುವರಿದಿದೆ. ಶಾಹೀನ್ ಶಾಲೆಯ ಮುಖ್ಯ ಶಿಕ್ಷಕಿ ಹಾಗೂ ಬಾಲಕಿಯ ತಾಯಿಯ ವಿರುದ್ಧ ಐಪಿಎಸ್ 124(ಎ) ಅಡಿ ಪ್ರಕರಣ ದಾಖಲು ಮಾಡಲಾಗಿದೆ. ನಾಟಕ ಮಾಡುವುದು ದೇಶ ದ್ರೋಹ ಅಲ್ಲಎಂದರು.
ಕಲ್ಲಡಕ ಪ್ರಭಾಕರ ಅವರ ಶಾಲೆಯಲ್ಲಿ ಬಾಬರಿ ಮಸೀದಿ ಕೆಡವಿದ ನಾಟಕ ಮಾಡಲಾಗಿತ್ತು. ಬಾಬರಿ ಮಸೀದಿ ಕೆಡವಿದ್ದು ಕಾನೂನು ಬಾಹಿರ ಎಂದು ಸುಪ್ರೀಂ ಕೋರ್ಟ್ ಹೇಳಿದರೂ ನಾಟಕ ಪ್ರದರ್ಶಿಸಲಾಗಿದೆ. ಆದರೆ, ಅವರ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಿಲ್ಲ. ಇದು ರಾಜ್ಯ ಸರ್ಕಾರದ ವಿಭಿನ್ನ ನಿಲುವನ್ನು ತೋರಿಸುತ್ತದೆ. ನಾನು ಶಾಹೀನ್ ಶಿಕ್ಷಣ ಸಂಸ್ಥೆಗೆ ಬೆಂಬಲಿಸಲು ಬಂದಿಲ್ಲ. ಅನ್ಯಾಯಕ್ಕೆ ೊಳಗಾದವರಿಗೆ ಧೈರ್ಯ ತುಂಬಲು ಬಂದಿದ್ದೇನೆ. ಸದನದಲ್ಲಿ ಈ ವಿಚಾರ ಪ್ರಸ್ತಾಪಿಸಲಾಗುವುದು ಎಂದು ತಿಳಿಸಿದರು.



