ದಾವಣಗೆರೆ: ಕೇಂದ್ರ ಸರ್ಕಾರವು ಕರ್ನಾಟಕ ರಾಜ್ಯ ಸೇರಿದಂತೆ ವಿವಿಧ ರಾಜ್ಯಗಳ ಅಡಿಕೆ ಬೆಳೆಗಾರರ ಹಿತದೃಷ್ಟಿಯಲ್ಲಿಟ್ಟುಕೊಂಡು ಅಡಿಕೆ ಆಮದನ್ನು ಸಂಪೂರ್ಣವಾಗಿ ನಿಷೇಧಿಸಬೇಕು ಎಂದು ಸಂಸದೆ ಪ್ರಭಾ ಮಲ್ಲಿಕಾರ್ಜುನ್ ಆಗ್ರಹಿಸಿದ್ದಾರೆ.
ಲೋಕಸಭೆಯಲ್ಲಿ ಪ್ರಶ್ನೋತ್ತರ ವೇಳೆ ಚುಕ್ಕೆ ಇಲ್ಲದ ಪ್ರಶ್ನೆ ಕೇಳಿದ ಪ್ರಭಾ ಮಲ್ಲಿಕಾರ್ಜುನ್, ಅಡಿಕೆ ಆಮದಿನಿಂದ ದೇಶದ ಅಡಿಕೆ ಬೆಳೆಗಾರರಿಗೆ ಸರಿಯಾದ ಬೆಲೆ ಸಿಗದೇ ತೊಂದರೆ ಆಗುತ್ತಿದೆ. ಅಡಿಕೆ ಆಮದು ನಿಷೇಧದ ಜೊತೆಗೆ ಅಡಿಕೆಯಿಂದ ಮಾಡುವ ಉಪ ಉತ್ಪನ್ನಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಬೇಕೆಂದು ಆಗ್ರಹಿಸಿದರು.
ಅಡಿಕೆ ಬೆಳೆಗಾರರ ಹಿತದೃಷ್ಟಿಯಿಂದ ಕೇಂದ್ರ ಸರ್ಕಾರ ಕೂಡಲೇ ಸೂಕ್ತ ತಿರ್ಮಾನ ತೆಗೆದುಕೊಳ್ಳಬೇಕೆಂದು ಕೇಂದ್ರ ಕೃಷಿ ಮತ್ತು ತೋಟಗಾರಿಕೆ ಸಚಿವರಿಗೆ ಮನವಿ ಮಾಡಿದರು.
ಖೇಲೋ ಇಂಡಿಯಾ ಕ್ರೀಡಾಂಗಣಕ್ಕೆ ಒತ್ತಾಯ: ಕೇಂದ್ರ ಕ್ರೀಡಾ ಸಚಿವರಿಗೆ ಖೆಲೋ ಇಂಡಿಯಾ ಯೋಜನೆಯಡಿ ದಾವಣಗೆರೆಯಲ್ಲಿ ಕ್ರೀಡಾಂಗಣ ಅನುಷ್ಠಾನ ಮತ್ತು ಅಭಿವೃದ್ಧಿಯ ಬಗ್ಗೆ ಗಮನ ಸೆಳೆದರು
ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ಚಾಲನಾ ತರಬೇತಿ ಮತ್ತು ಸಂಶೋಧನಾ ಸಂಸ್ಥೆ ಸ್ಥಾಪನೆ (IDTRs) ಅಥವಾ ಪ್ರಾದೇಶಿಕ ಚಾಲನಾ ತರಬೇತಿ ಕೇಂದ್ರ (RDTCs) ಮತ್ತು ಡ್ರೈವಿಂಗ್ ತರಬೇತಿ ಕೇಂದ್ರಗಳನ್ನು (DTCs) ಸ್ಥಾಪಿಸಲು ಮಂಜೂರಾತಿ ಮತ್ತು ಅನುದಾನ ಬಿಡುಗಡೆ ಹಾಗೂ ದಾವಣಗೆರೆ ಎಸ್ ಎಸ್ ಆಸ್ಪತ್ರೆಯ ಬಳಿಯ NH-48 ಕೆಳಸೇತುವೆ ಅಗಲೀಕರಣ ಮಾಡುವಂತೆ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಭೇಟಿ ಮಾಡಿ ಮನವಿ ಸಲ್ಲಿಸಿದರು.



