ಡಿವಿಜಿ ಸುದ್ದಿ, ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿ ಪ್ರತಿಭಟನೆಯಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ ಅಮೂಲ್ಯ ಲಿಯೋನಾಗೆ 5ನೇ ಎಸಿಎಂಎಂ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.
ಈ ದೇಶ ದ್ರೋಹ ಕೃತ್ಯಕ್ಕೆ ರಾಜ್ಯದಾದ್ಯಂತ ಅಮೂಲ್ಯ ಲಿಯೋನ್ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದೆ. ಭಜರಂಗದಳ, ಎಬಿವಿಪಿ, ಶ್ರೀರಾಮ ಸೇನೆ ಕಾರ್ಯಕರ್ತರು ಕಾರ್ಯಕರ್ತರು ರಾಜ್ಯದ ನಾನಾ ಭಾಗದಲ್ಲಿ ಪ್ರತಿಭಟನೆ ನಡೆಸಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಮೂಲ್ಯ ಅವರನ್ನು ಪರಪ್ಪನ ಅಗ್ರಹಾರದ ಜೈಲಿಗೆ ಕಳುಹಿಸಲಾಗಿದೆ. ಅಮೂಲ್ಯ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಾಗಿದ್ದು, ಆಕೆ ನೀಡಿದ ಹೇಳಿಕೆ ಆಧಾರದ ಮೇಲೆ ಬಂಧಿಸಿರುವ ಉಪ್ಪಾರಪೇಟೆ ಠಾಣೆ ಪೊಲೀಸರು, ಸ್ವಯಂಪ್ರೇರಿತ ಪ್ರಕರಣ ದಾಖಲಿಸಿ ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.
ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ಆಯೋಜಿಸಿದ ಕಾರ್ಪೊರೇಟರ್ ಇಮ್ರಾನ್ ಪಾಷಾ ಸೇರಿದಂತೆ ಹಲವರನ್ನು ವಿಚಾರಣೆ ನಡೆಸಲು ಪೊಲೀಸರು ಮುಂದಾಗಿದ್ದಾರೆ. ಅಮೂಲ್ಯಗೆ ನಾವ್ಯಾರು ಆಹ್ವಾನ ಕೊಟ್ಟಿಲ್ಲ. ಡಿಸಿಪಿ ಬಳಿ ನಾನೇ ಸ್ವತಃ ದೂರು ನೀಡಿದ್ದೇನೆ ಎಂದು ಇಮ್ರಾನ್ ಹೇಳಿದ್ದಾರೆ. ಅಮೂಲ್ಯಳನ್ನು 5ನೇ ಎಸಿಎಂಎಂ ನ್ಯಾಯಾಧೀಶ ಶಿರಿನ್ ಜೆ. ಅನ್ಸಾರಿ ನಿವಾಸಕ್ಕೆ ವಿಚಾರಣೆ ನಡೆಸಲಾಯಿತು. ವಿಚಾರಣೆ ನಂತರ 14 ದಿನ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪಶ್ಚಿಮ ವಿಭಾಗ ಡಿಸಿಪಿ ರಮೇಶ್ ಬಾನೋತ್, ವಿಚಾರಣೆ ನಡೆಸಿದಾಗ ಉದ್ದೇಶ ಪೂರ್ವಕವಾಗಿಯೇ ಈ ಕೃತ್ಯ ಮಾಡಿದ್ದಾರೆ ಎಂದರು.



