ಡಿವಿಜಿ ಸುದ್ದಿ, ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ ಅಮೂಲ್ಯ ಲಿಯೋನಾ ಪಾಕಿಸ್ತಾನ ಜಿಂದಾಬಾದ್ ಫೋಷಣೆ ಕೂಗಿದ ಬಳಿಕ ಏನು ಹೇಳುತ್ತಿದ್ದಳು ಅದನ್ನ ಪೂರ್ತಿ ಹೇಳಲು ಅವಕಾಶ ಕೊಡಬೇಕಿತ್ತು ಅಂತ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಅವರು ಹೇಳಿದ್ದಾರೆ.
ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿದ ಡಿಕೆಶಿ, ಅಮೂಲ್ಯ ಭಾಷಣ ನಾನು ನೋಡಿದ್ದೇನೆ. ಅದರಲ್ಲಿ ಆಕೆ ಈಗ ಹೇಳಿದ ಮಾತನ್ನು ಕೇಳಿರಲಿಲ್ಲ. ಅಮೂಲ್ಯಗೆ ಪೂರ್ತಿ ಮಾತನಾಡಲು ಅವಕಾಶ ನೀಡಬೇಕಿತ್ತು. ಆದರೆ ಮಧ್ಯದಲ್ಲಿ ಏನೋ ಸಮಸ್ಯೆಯಾಗಿದೆ. ಇದರ ಬಗ್ಗೆ ಕೆಲವು ಸ್ಪಷ್ಟನೆ ಬೇಕಿದೆ. ಹೀಗಾಗಿ ಈ ಬಗ್ಗೆ ನಾನು ಹೆಚ್ಚಾಗಿ ಕಮೆಂಟ್ ಮಾಡುವುದಿಲ್ಲ ಎಂದು ತಿಳಿಸಿದರು.

ಈ ಪ್ರತಿಭಟನಾ ಕಾರ್ಯಕ್ರಮದಲ್ಲಿ ಸಂಸದ ಆಸಾದುದ್ದೀನ್ ಓವೈಸಿ ಭಾಗವಹಿಸಿದ್ದರು. ಕಾರ್ಯಕ್ರಮದ ವೇದಿಕೆಯಲ್ಲಿ ಚಿಕ್ಕಮಗಳೂರಿನ ಕೊಪ್ಪ ಮೂಲದ ಅಮೂಲ್ಯ ಲಿಯೋನಾ ಪಾಕಿಸ್ತಾನ ಜಿಂದಾಬಾದ್ ಎಂದು ಜೈಕಾರ ಕೂಗಿದ್ದಳು. ಅಮೂಲ್ಯಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ 5ನೇ ಎಸಿಎಂಎಂ ನ್ಯಾಯಧೀಶರು ಆದೇಶಿಸಿದ್ದಾರೆ. ಇಷ್ಟಾದರೂ ಕೂಡ ಅಮೂಲ್ಯಳಿಗೆ ಭಯವಾಗಲಿ, ಪಶ್ಚಾತಾಪವಾಗಿ ಆಗಿಲ್ಲ. ಬದಲಿಗೆ ವಿಕ್ಟರಿ ಸಿಂಬಲ್ ತೋರಿಸಿ ಭಂಡತನ ಮೆರೆದಿದ್ದಾಳೆ. ಉಪ್ಪಾರಪೇಟೆ ಠಾಣೆ ಪೊಲೀಸರು, ಸುಮೋಟೋ ಕೇಸ್ ದಾಖಲಿಸಿ ಎಫ್ಐಆರ್ ದಾಖಲಿಸಿಕೊಂಡರು. ಅಮೂಲ್ಯ ವಿರುದ್ಧ ಐಪಿಸಿ ಸೆಕ್ಷನ್ 124ಎ(ದೇಶದ್ರೋಹ ಆರೋಪ), 153ಎ(ಶತೃತ್ವ ಬಿತ್ತುವುದು), 153ಬಿ(ಭಾವೈಕ್ಯತೆ ಹಾಗೂ ರಾಷ್ಟೀಯ ಏಕೀಕರಣಕ್ಕೆ ಧಕ್ಕೆ ತರುವುದು) ಸೆಕ್ಷನ್ ಅಡಿ ಕೇಸ್ ದಾಖಲಿಸಿದ್ದಾರೆ.



