ಬೆಂಗಳೂರು: ಖಾಸಗಿ ಜಮೀನಲ್ಲಿ ಮನೆ ನಿರ್ಮಿಸಿಕೊಂಡವರಿಗೆ ವರ್ಷಾಂತ್ಯಕ್ಕೆ 2 ಲಕ್ಷ ಕುಟುಂಬಗಳಿಗೆ ಹಕ್ಕುಪತ್ರ ನೀಡುವ ಗುರಿಯನ್ನು ಸರ್ಕಾರ ಹೊಂದಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.
ಸರ್ಕಾರಕ್ಕೆ 2 ವರ್ಷ ಸಂಭ್ರಮ
ಮುಂದಿನ ತಿಂಗಳು 20ಕ್ಕೆ ರಾಜ್ಯದ ಕಾಂಗ್ರೆಸ್ ಸರ್ಕಾರಕ್ಕೆ 2 ವರ್ಷಗಳು ತುಂಬಲಿವೆ. ಅದೇ ದಿನದಂದು ರಾಜ್ಯದ ಹಟ್ಟಿ, ತಾಂಡಾದಂತಹ ಖಾಸಗಿ ಜಮೀನು ಗಳಲ್ಲಿರುವ ದಾಖಲೆರಹಿತ ಜನವಸತಿ ಪ್ರದೇಶಗಳ 1 ಲಕ್ಷ ಕುಟುಂಬಗಳಿಗೆ ಶಾಶ್ವತ ಹಕ್ಕುಪತ್ರ ನೀಡಲಾಗುವುದು ಎಂದು ವಿಕಾಸಸೌಧದಲ್ಲಿ ಜಿಲ್ಲಾಧಿಕಾರಿಗಳ ಮಾಸಿಕ ಪ್ರಗತಿ ಪರಿಶೀಲನೆ ಸಭೆಯಲ್ಲಿ ತಿಳಿಸಿದರು.
ಡಿಜಿಟಲ್ ಹಕ್ಕುಪತ್ರ
ಸಾಮಾನ್ಯವಾಗಿ ಈ ಮೊದಲು ಇಂತಹ ಕುಟುಂಬಗಳಿಗೆ ಕಾಗದ ರೂಪದಲ್ಲಿ ಹಕ್ಕುಪತ್ರಗಳನ್ನು ನೀಡಲಾಗುತ್ತಿತ್ತು. ಆದರೆ ಈ ಬಾರಿ ಡಿಜಿಟಲ್ ರೂಪದ ಹಕ್ಕುಪತ್ರಗಳನ್ನು ವಿತರಿಸಲು ಉದ್ದೇಶಿಸಲಾಗಿದೆ. ಇದರಿಂದ ನಕಲು ಅಥವಾ ಒಂದೇ ನಿವೇಶನಕ್ಕೆ ಇಬ್ಬರಿಗೆ ಹಕ್ಕುಪತ್ರದಂತಹ ಅಕ್ರಮಗಳಿಗೂ ಅವಕಾಶ ಇರುವುದಿಲ್ಲ ಎಂದು
ರಾಜ್ಯದಲ್ಲಿ ಖಾಸಗಿ ಜಮೀನಿನಲ್ಲಿ ವಾಸವಿರುವ 3,616 ವಸತಿ ಪ್ರದೇಶಗಳ ಪೈಕಿ 3,221 ಜನವಸತಿ ಪ್ರದೇಶಗಳನ್ನು ಗುರುತಿಸಿ, ಪ್ರಾಥಮಿಕ ಅಧಿಸೂಚನೆ ಹೊರಡಿಸಲಾಗಿದೆ. ಇದರಲ್ಲಿ ಒಂದು ಲಕ್ಷ ಕುಟುಂಬಗಳಿಗೆ ಹಕ್ಕುಪತ್ರ ವಿತರಿಸಲು ನಿರ್ಧರಿಸಲಾಗಿದೆ ಎಂದರು.
ಮೇ 20ಕ್ಕೆ 1 ಲಕ್ಷ ಕುಟುಂಬಗಳಿಗೆ ಹಕ್ಕುಪತ್ರ
ಹಿಂದಿನ ಸರಕಾರ 5 ವರ್ಷಗಳಲ್ಲಿ 1 ಲಕ್ಷ ಕುಟುಂಬಗಳಿಗೆ ಹಕ್ಕುಪತ್ರ ನೀಡಿದೆ. ಆದರೆ ಪ್ರಸ್ತುತ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಮೇಲೆ ಈ ಕೆಲಸಕ್ಕೆ ಹೆಚ್ಚಿನ ಆದ್ಯತೆ ನೀಡಿದ್ದು, ಒಂದೂವರೆ ವರ್ಷದಲ್ಲಿ 3,221 ಜನ ವಸತಿ ಪ್ರದೇಶಗಳಿಗೆ ಪ್ರಾಥಮಿಕ ಅಧಿಸೂಚನೆ ಹೊರಡಿಸಿದೆ. ಅದರಂತೆ 1.30 ಕುಟುಂಬಗಳಿಗೆ ಕರ್ನಾಟಕ ಭೂ ಕಂದಾಯ ಕಾನೂನು “94 ಡಿ’ ಅಡಿಯಲ್ಲಿ ಹಕ್ಕುಪತ್ರ ನೀಡಲು ತಯಾರಾಗಿದೆ. ಮೇ 20ಕ್ಕೆ 1 ಲಕ್ಷ ಕುಟುಂಬಗಳಿಗೆ ಹಾಗೂ ವರ್ಷಾಂತ್ಯಕ್ಕೆ ಒಟ್ಟಾರೆ 2 ಲಕ್ಷ ಕುಟುಂಬಗಳಿಗೆ ಹಕ್ಕುಪತ್ರ ನೀಡುವ ಗುರಿ ಹೊಂದಿದಲಾಗಿದೆ ಎಂದರು.
ಸರಕಾರದಿಂದಲೇ ನೋಂದಣಿ
ಡಿಜಿಟಲ್ ಹಕ್ಕುಪತ್ರದಿಂದ ಮುಂದಿನ ದಿನಗಳಲ್ಲಿ ಮೂಲ ದಾಖಲೆ ಕಳೆದುಹೋಗುವ ಅಥವಾ ದಾಖಲೆಗಳನ್ನು ತಿದ್ದುವ ಪ್ರಶ್ನೆಯೇ ಇರುವುದಿಲ್ಲ. ಜತೆಗೆ ಸರಕಾರದಿಂದಲೇ ಕ್ರಯಪತ್ರದ ಮೂಲಕ ನೋಂದಣಿ ಮಾಡಿಸಿ ಸ್ಥಳೀಯ ಸಂಸ್ಥೆಯಿಂದ ಖಾತೆಯೂ ಮಾಡಿಕೊಡಲಾಗುವುದು. ಹೀಗಾಗಿ ಫಲಾನುಭವಿಗಳು ಮತ್ತೆ ಸರಕಾರಿ ಕಚೇರಿಗಳಿಗೆ ಅಲೆಯಬೇಕಾಗಿಲ್ಲ ಎಂದರು.
ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ, ಕಂದಾಯ ಆಯುಕ್ತ ಪೊಮ್ಮಲ ಸುನೀಲ್ ಕುಮಾರ್, ಭೂ ಮಾಪನ ಇಲಾಖೆ ಆಯುಕ್ತ ಮಂಜುನಾಥ್ ಉಪಸ್ಥಿತರಿದ್ದರು.