ದಾವಣಗೆರೆ; ಶಾಲಾ ಶಿಕ್ಷಣ ಇಲಾಖೆ ಮಾರ್ಗಸೂಚಿಯನ್ವಯ ಮೇ.29 ರಂದು ಶಾಲಾ ಮುಖ್ಯ ಶಿಕ್ಷಕರು ಹಾಗೂ ಸಹ ಶಿಕ್ಷಕರು ಶಾಲೆಗಳಿಗೆ ಹಾಜರಾಗಿ ಶಾಲಾ ಪ್ರಾರಂಭೋತ್ಸವವನ್ನು ಕೈಗೊಳ್ಳಲು ಅಗತ್ಯ ಪೂರ್ವ ಸಿದ್ಧತೆಗಳನ್ನು ಮಾಡಿಕೊಂಡು ಸೂಚಿಸಕಾಗಿದೆ. ಮೇ.30 ರಿಂದ ಶಾಲಾ ಮಕ್ಕಳ ಪ್ರವೇಶ, ದಾಖಲಾತಿ ಪ್ರಕ್ರಿಯೆ ಹಾಗೂ ಪ್ರಾರಂಭೋತ್ಸವವನ್ನು ಕೈಗೊಳ್ಳಬೇಕೆಂದು ಡಿಡಿಪಿಐ ಕೊಟ್ರೇಶ್ ತಿಳಿಸಿದ್ದಾರೆ.
5ನೇ ಹಣಕಾಸು ಆಯೋಗದ ಸಭೆ
ದಾವಣಗೆರೆ: ಜೂನ್ 2 ರಂದು ಬೆಳಿಗ್ಗೆ 10 ಗಂಟೆಗೆ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿರುವ ಎಸ್.ಎಸ್ ಮಲ್ಲಿಕಾರ್ಜುನ್ ಸಭಾಂಗಣದಲ್ಲಿ 5ನೇ ರಾಜ್ಯ ಹಣಕಾಸು ಆಯೋಗದ ಸಭೆಯನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಸುರೇಶ್.ಬಿ.ಇಟ್ನಾಳ್ ತಿಳಿಸಿದ್ದಾರೆ.
ಮೇ.31ರಂದುವಿದ್ಯಾರ್ಥಿಗಳಿಗೆ ವಿವಿಧ ವೃತ್ತಿಪರ ಕೋರ್ಸ್ ಪ್ರವೇಶ ಪರೀಕ್ಷೆ
ದಾವಣಗೆರೆ: ಜಿಲ್ಲೆಯ 8 ಕೇಂದ್ರಗಳಲ್ಲಿ ಮೇ.31 ರಂದು ವಿವಿಧ ವೃತ್ತಿಪರ ಕೋರ್ಸ್ಗಳ ಲ್ಯಾಟರಲ್ ಎಂಟ್ರಿ, ಎಂ.ಇ, ಎಂಟೆಕ್, ನಾಗರಿಕ ಸೇವಾ ಪರೀಕ್ಷೆ ತರಬೇತಿ ಪ್ರವೇಶಕ್ಕೆ ಪ್ರವೇಶ ಪರೀಕ್ಷೆ ನಡೆಯಲಿದ್ದು ಯಾವುದೇ ಆಕ್ಷೇಪಣೆಗಳಿಗೆ ಅವಕಾಶ ನೀಡದಂತೆ ಅಧಿಕಾರಿಗಳು ಪರೀಕ್ಷಾ ಕಾರ್ಯವನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ನಡೆಸಲಾಗುವ ವಿವಿಧ ರೀತಿಯ ಪ್ರವೇಶ ಪರೀಕ್ಷೆ ಕುರಿತು ಬುಧವಾರ ನಡೆದ ಪೂರ್ವ ಸಿದ್ದತಾ ಸಭೆಯಲ್ಲಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಈಗಾಗಲೇ ಹಲವು ಪರೀಕ್ಷೆಗಳನ್ನು ಯಾವುದೇ ಆಕ್ಷೇಪಣೆಗಳಿಗೆ ಅವಕಾಶ ನೀಡದೆ ಸುಗಮವಾಗಿ ಪರೀಕ್ಷೆ ನಡೆಸಲಾಗಿದೆ. ಅದರಂತೆ ಮೇ 31 ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ನಡೆಸಲಾಗುವ ವಿವಿಧ ರೀತಿಯ ಪ್ರವೇಶ ಪರೀಕ್ಷೆಗಳನ್ನು ಸಹ ಅಧಿಕಾರಿಗಳು ಸಮನ್ವಯತೆಯಿಂದ ಹಾಗೂ ಜವಾಬ್ದಾರಿಯತವಾಗಿ ಕೆಲಸ ಮಾಡಬೇಕು. ಪರೀಕ್ಷೆ ನಡೆಯುವ ಸಂದರ್ಭದಲ್ಲಿ ಯಾವುದೇ ರೀತಿಯ ತೊಡಕುಗಳುಂಟಾದಲ್ಲಿ, ಇನ್ನಿತರೆ ಲೋಪದೋಷಗಳು ಕಂಡುಬಂದಲ್ಲಿ ಮೇಲಾಧಿಕಾರಿಗಳಿಗೆ ಸಂಪರ್ಕಿಸಿ ಪರಿಹಾರ ಕಂಡುಕೊಳ್ಳಬೇಕು. ನೋಡಲ್ ಅಧಿಕಾರಿಗಳು ಪರೀಕ್ಷಾ ಮಾರ್ಗಸೂಚಿಗಳನ್ನು ಎಚ್ಚರಿಕೆಯಿಂದ ಕಟ್ಟುನಿಟ್ಟಾಗಿ ಪಾಲಿಸಬೇಕು. ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸುವುದರ ಜೊತೆಗೆ ಪರೀಕ್ಷಾ ಕೇಂದ್ರಕ್ಕೆ ಪೆÇಲೀಸ್ ಸಿಬ್ಬಂದಿ ಮತ್ತು ಆರೋಗ್ಯ ಇಲಾಖೆ ಸಿಬ್ಬಂದಿ ನಿಯೋಜಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಕರಿಸಿದ್ದಪ್ಪ ಮಾತನಾಡಿ, ಜಿಲ್ಲೆಯಲ್ಲಿ ಮೇ.31ರ ಮಧ್ಯಾಹ್ನ 2 ರಿಂದ 5 ಗಂಟೆಯವರೆಗೆ ಪ್ರತ್ಯೇಕ ಒಟ್ಟು 8 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 3952 ವಿದ್ಯಾರ್ಥಿಗಳು 3 ಹಂತಗಗಳಲ್ಲಿ ಪರೀಕ್ಷೆ ಎದುರಿಸಲಿದ್ದಾರೆ.
ಮಧ್ಯಾಹ್ನ 2 ರಿಂದ ಸಂಜೆ 5 ರವರೆಗೆ ಪ್ರಸಕ್ತ ಸಾಲಿನ ಇಂಜಿನಿಯರಿಂಗ್ ಕೋರ್ಸುಗಳಿಗೆ ಡಿಪ್ಲೊಮಾದಿಂದ ಲ್ಯಾಟರಲ್ ಎಂಟ್ರಿ ಪರೀಕ್ಷೆ ಮತ್ತು ಎಂ.ಇ ಅಥವಾ ಎಂ.ಟೆಕ್ ಕೋರ್ಸುಗಳ ಪ್ರವೇಶಕ್ಕಾಗಿ ಪರೀಕ್ಷೆ ನಡೆಸಲಾಗುವುದು. ಅದೇ ದಿನ ಮಧ್ಯಾಹ್ನ 2.30 ರಿಂದ ಸಂಜೆ 4.30ರವರೆಗೆ ಐಎಎಸ್, ಕೆಎಎಸ್ ಪೂರ್ವಭಾವಿ ತರಬೇತಿಗೆ ಪರೀಕ್ಷೆ ನಡೆಯಲಿದೆ ಎಂದು ಮಾಹಿತಿ ನೀಡಿದರು.
ಈ ವೇಳೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಜಿ.ಮಂಜುನಾಥ್, ಜಿಲ್ಲೆಯ ಎಲ್ಲಾ ಪರೀಕ್ಷಾ ಕೇಂದ್ರದ ಪ್ರಾಂಶುಪಾಲರು, ನೋಡಲ್ ಅಧಿಕಾರಿಗಳು ಸೇರಿದಂತೆ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಇದ್ದರು.