ದಾವಣಗೆರೆ: ಕೌಟುಂಬಿಕ ಕಲಹ ಸೇರಿ ವಿವಿಧ ಕಾರಣದಿಂದ ವಿಚ್ಛೇದನಕ್ಕಾಗಿ ನ್ಯಾಯಾಲಯದ ಮೆಟ್ಟಿಲೇರಿದ್ದ 23 ಜೋಡಿಗಳು ತಮ್ಮೆಲ್ಲಾ ತಪ್ಪು ಗ್ರಹಿಕೆ ಮರೆತು ಲೋಕ್ ಅದಾಲತ್ ನಲ್ಲಿ ನ್ಯಾಯಾಧೀಶರು, ವಕೀಲರ ಸಮಕ್ಷಮ ವೈಮನಸ್ಸು ಮರೆತು ಮತ್ತೆ ಒಂದಾಗಿದ್ದಾರೆ.
ನಗರದ ಜಿಲ್ಲಾ ನ್ಯಾಯಾಲಯ ಆವರಣದಲ್ಲಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಅಧ್ಯಕ್ಷರೂ ಆದ ಕೆ.ಎಲ್.ವೇಲಾ, ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ, ಹಿರಿಯ ಸಿವಿಲ್ ನ್ಯಾಯಾಧೀಶ ಮಹಾವೀರ ಮ. ಕರೆಣ್ಣವರ ಸೇರಿದಂತೆ ವಿವಿಧ ನ್ಯಾಯಾಧೀಶರ ಸಮಕ್ಷಮ 23 ಜೋಡಿ ಮತ್ತೆ ಒಂದಾದರು. ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಶನಿವಾರ ಲೋಕ್ ಅದಾಲತ್ ನಡೆಯಿತು. ದಾವಣಗೆರೆ ಲೋಕ್ ಅದಾಲತ್ನಲ್ಲಿ 23 ಜೋಡಿಗಳು ವಿಚ್ಛೇದನ ಕೈ ಬಿಟ್ಟು, ಪರಸ್ಪರ ಹಾರ ಬದಲಿಸಿಕೊಂಡು ಒಂದಾದರು.
ಜಿಲ್ಲೆಯಲ್ಲಿ ಒಟ್ಟು 225 ಜೋಡಿ ವಿವಿಧ ಕಾರಣಗಳಿಂದ ವಿಚ್ಛೇದನ ಮತ್ತು ಜೀವನಾಂಶಕ್ಕಾಗಿ ಪ್ರಕರಣ ದಾಖಲಿಸಿ ನ್ಯಾಯಾಲಯ ಮೆಟ್ಟಿಲೇರಿದ್ದು, ಅದರಲ್ಲಿ 20 ಪ್ರಕರಣ ದಾವಣಗೆರೆ ಜಿಲ್ಲಾ ಕೌಟುಂಬಿಕ ನ್ಯಾಯಾಲಯ ಹಾಗೂ ಹರಿಹರ, ಚನ್ನಗಿರಿ ಹಾಗೂ ಹೊನ್ನಾಳಿ ತಾಲ್ಲೂಕು ನ್ಯಾಯಾಲಯದಲ್ಲಿ ತಲಾ ಒಂದರಂತೆ ಒಟ್ಟು 23 ಜೋಡಿಗಳು ತಮ್ಮ ವೈಮನಸ್ಸುಗಳನ್ನು ಮರೆತು ಒಂದಾಗಿ ಸಹಬಾಳ್ವೆ ನಡೆಸಲು ಒಪ್ಪಿಕೊಂಡಿದ್ದು ಸುಖಾಂತ್ಯ ಕಂಡಿವೆ. ರಾಷ್ಟ್ರೀಯ ಲೋಕ್ ಅದಾಲತ್ ನಿಂದ ಸಾಕಷ್ಟು ಜನರಿಗೆ ಅನುಕೂಲವಾಗಿದೆ
ಎಷ್ಟು ಪ್ರಕರಣ ಇತ್ಯರ್ಥ..?
ದಾವಣಗೆರೆ ಜಿಲ್ಲೆಯಾದ್ಯಂತ ಎಲ್ಲಾ ನ್ಯಾಯಾಲಯಗಳಲ್ಲಿ ಜುಲೈ 12ರಂದು ರಾಷ್ಟ್ರೀಯ ಲೋಕ್ ಅದಾಲತ್ನ್ನು ಹಮ್ಮಿಕೊಳ್ಳಲಾಗಿತ್ತು. ವಿವಿಧ ಪ್ರಕರಣಗಳ 18024 ಕೈಗೆತ್ತಿಕೊಂಡಿದ್ದು, ಅದರಲ್ಲಿ ಒಟ್ಟು 9,360 ಜಾರಿಯಲ್ಲಿರುವ ಪ್ರಕರಣಗಳು ಮುಕ್ತಾಯಗೊಂಡು, ರೂ.14,33,66,571 ಹಣದ ಪ್ರಕರಣ ಹಾಗೂ ವ್ಯಾಜ್ಯ ಪೂರ್ವ 2,62,712 ಪ್ರಕರಣಗಳು ಮುಕ್ತಾಯಗೊಂಡು ರೂ.72,62,10,788 ಹಣದ ಪರಿಹಾರವಾಗಿ ರಾಜಿ ಸಂಧಾನದ ಮೂಲಕ ಇತ್ಯರ್ಥಗೊಳಿಸಲಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಮಹಾವೀರ ಮ.ಕರೆಣ್ಣವರ ತಿಳಿಸಿದ್ದಾರೆ.
ಇತ್ಯರ್ಥ ಪ್ರಕರಣ ವಿವರ
ಜಿಲ್ಲೆಯ ನ್ಯಾಯಾಲಯಗಳಲ್ಲಿ 77 ಅಪರಾಧಿಕ, 195 ಚೆಕ್ ಅಮಾನ್ಯ, 43 ಬ್ಯಾಂಕ್ ವಸೂಲಾತಿ, 14 ಇತರೆ ಹಣ ವಸೂಲಾತಿ, 74 ಅಪಘಾತ ಪರಿಹಾರ, 144 ವಿದ್ಯುತ್ ಕಳ್ಳತನ, 02 ಅಕ್ರಮ ಮರಳು ಗಣಿಗಾರಿಕೆ, 51 ಪಾಲು ವಿಭಾಗಕ್ಕಾಗಿ ದಾಖಲಿಸಿದ ದಾವೆ, 26 ಭೂ ಪರಿಹಾರ ಜಾರಿ ಅರ್ಜಿ, 132 ಇತರೆ ರಾಜಿ ಅರ್ಜಿ ಹಾಗೂ ಹಲವು ಕಾರಣಕ್ಕಾಗಿ ದಾಖಲಿಸಿದ 88 ದಾವೆಗಳು ಮತ್ತು ಜೀವನಾಂಶ ಕೋರಿ ದಾಖಲಿಸಿದ್ದ 50 ಪ್ರಕರಣಗಳು ಸೇರಿ ಒಟ್ಟು 9360 ಪ್ರಕರಣಗಳನ್ನು ಇತ್ಯರ್ಥಗೊಳಿಸಲಾಗಿದೆ.



