ಡಿವಿಜಿ ಸುದ್ದಿ, ಶಿವಮೊಗ್ಗ: ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ಅವರನ್ನು ಪಾಕಿಸ್ತಾನ ಏಜೆಂಟ್ ಎಂದು ಕರೆದಿದ್ದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಇಂದು ಮತ್ತೆ ಕಿಡಿಕಾರಿದ್ದು, ಕಾಂಗ್ರೆಸ್ ಮುಖವಾಣಿಯಂತೆ ವರ್ತಿಸುವನ್ನು ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ವೀರ ಸಾವರ್ಕರ್ ಬಗ್ಗೆ ಕೀಳಾಗಿ ಮಾತನಾಡಿರುವ ಕಾಂಗ್ರೆಸ್ ಮೊದಲು ಕ್ಷಮೆ ಕೇಳಲಿ. ಸ್ವಾತಂತ್ರ್ಯ ಹೋರಾಟಗಾರ ವೀರ ಸಾವರ್ಕರ್ ಅವರಷ್ಟು ದೊರೆಸ್ವಾಮಿಯವರು ದೊಡ್ಡ ಹೋರಾಟಗಾರರಾ..? ಕಾಂಗ್ರೆಸ್ನ ಮುಖವಾಣಿಯಂತೆ ದೊರೆಸ್ವಾಮಿಯವರು ವರ್ತಿಸುತ್ತಾರೆ ಸರಿಯಲ್ಲ ಎಂದರು.
ಕಾಂಗ್ರೆಸ್ ನಾಯಕರು ಸಿಎಎ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಪಾಕಿಸ್ತಾನದ ಹಿಂದೂಗಳ ಮೇಲೆ ದೌರ್ಜನ್ಯ ನಡೆಯುತ್ತಿರುವ ಸಂದರ್ಭದಲ್ಲಿ ಭಾರತದಲ್ಲಿ ಅವರಿಗೆ ಪೌರತ್ವ ಕೊಡುವುದರ ಬಗ್ಗೆ ಮಹಾತ್ಮ ಗಾಂಧಿಜೀ ಮಾತನಾಡಿದ್ದರು. ಈ ಬಗ್ಗೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರೂ ಮಾತನಾಡಿದ್ದಾರೆ. ಮೊದಲು ಕಾಂಗ್ರೆಸ್ ಆತ್ಮಾವಲೋಕನ ಮಾಡಿಕೊಳ್ಳಲಿ ಎಂದರು.
ಸ್ವಾತಂತ್ರ್ಯ ಹೋರಾಟಗಾರ ವೀರ ಸಾವರ್ಕರ್ ಅವರನ್ನು ಕೀಳಾಗಿ ಕಾಣುವ ಕಾಂಗ್ರೆಸ್ ಕ್ಷಮೆ ಕೇಳಲಿ. ಆ ನಂತರ ನಾನು ಪ್ರತಿಕ್ರಿಯಿಸುತ್ತೇನೆ. ನಾನು ಯಾರ ಬಳಿಯೂ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ. ದೇಶದಲ್ಲಿ ಅಶಾಂತಿ ತೋರಿಸಲು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಬಂದಾಗ ಪ್ರತಿಭಟನೆ ಮಾಡಿಸುತ್ತಾರೆ. ಇದರಲ್ಲಿ ಪಾಕಿಸ್ತಾನದ ಕೈವಾಡವಿರುವುದು ಸ್ಪಷ್ಟವಾಗಿದೆ ಎಂದರು.
ನಮ್ಮ ದೇಶದ ಆಂತರಿಕ ವಿಚಾರದ ಬಗ್ಗೆ ಮಾತನಾಡಲು ಇಮ್ರಾನ್ ಖಾನ್ ಯಾರು? ನಮ್ಮ ದೇಶದಲ್ಲಿರುವ ಕಾಂಗ್ರೆಸ್ಸಿಗರೆಲ್ಲರೂ ಪಾಕಿಸ್ತಾನದ ಏಜೆಂಟರ್ ಗಳಂತೆ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿದರು.



