ದಾವಣಗೆರೆ: ನೀರಿನ ಮೂಲಗಳಾದ ನದಿ, ತೊರೆ, ಹಳ್ಳ, ಕೆರೆ, ಬಾವಿ ಇವುಗಳ ನೀರು ಮಾಲಿನ್ಯಗೊಳಗಾಗದಂತೆ ಸಂರಕ್ಷಿಸುವ ಉದ್ದೇಶದಿಂದ ಭಾರಲೋಹ ಮಿಶ್ರಿತ ರಾಸಾಯನಿಕಯುಕ್ತ ಬಣ್ಣದಿಂದ ಅಲಂಕೃತ ಮತ್ತು ಪ್ಲಾಸ್ಟರ್ ಆಫ್ ಪ್ಯಾರೀಸ್ (ಪಿಓಪಿ)ನಿಂದ ವಿಗ್ರಹಗಳ ಉತ್ಪಾದನೆ, ಮಾರಾಟ ನೀರಿನ ಮೂಲಗಳಲ್ಲಿ ವಿಸರ್ಜಿಸುವುದನ್ನು ಜಿಲ್ಲೆಯಾದ್ಯಂತ ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ ತಿಳಿಸಿದ್ದಾರೆ.
ಅನುಸರಿಸ ಬೇಕಾದ ವಿಧಾನಗಳು
- ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸಿ
- ಸಾರ್ವಜನಿಕರು ಮಣ್ಣಿನಿಂದ ತಯಾರಿಸಿದ ಹಾಗೂ ನೈಸರ್ಗಿಕ ಬಣ್ಣ ಲೇಪಿತ ಮಣ್ಣಿನ ಗಣೇಶ ಮೂರ್ತಿಗಳೊಂದಿಗೆ ಹಬ್ಬ ಆಚರಿಸಿ
- ಸ್ಥಳೀಯ ಸಂಸ್ಥೆಗಳು ನಿಗದಿಪಡಿಸಿದ ಸಂಚಾರಿ ತೊಟ್ಟಿಗಳಲ್ಲಿ ಅಥವಾ ಕಲ್ಯಾಣಿಗಳಲ್ಲಿಯೇ ಗಣೇಶ ಮೂರ್ತಿಗಳನ್ನು ವಿಸರ್ಜಿಸಬೇಕು
- ಗಣೇಶ ಚತುರ್ದಿ ಹಬ್ಬವನ್ನು ಸರಳ ರೀತಿಯಲ್ಲಿ ಭಕ್ತಿ ಪೂರ್ವಕವಾಗಿ ದೇವಸ್ಥಾನದೊಳಗೆ ಅಥವಾ ತಮ್ಮ ಮನೆಗಳಲ್ಲಿಯೇ ಆಚರಿಸಬೇಕು
- ಮಣ್ಣಿನ ಗಣೇಶ ಮೂರ್ತಿಗಳ ವಿಸರ್ಜನೆ ಸಂದರ್ಭದಲ್ಲಿ ಸಂಚಾರಿ ತೊಟ್ಟಿಗಳಲ್ಲಿ ಅಥವಾ ಕಲ್ಯಾಣಿಗಳ ಪಕ್ಕದಲ್ಲಿ ಹಸಿಕಸ, ಹೂವು, ಹಣ್ಣು, ಬಾಳೆಕಂಬ, ಮಾವಿನ ತೋರಣ ಇತ್ಯಾದಿ ಪ್ರತ್ಯೇಕಿಸಿ ಮೂರ್ತಿಗಳೊಂದಿಗೆ ನೀರಿಗೆ ವಿಸರ್ಜಿಸದೆ ಪ್ರತ್ಯೇಕವಾಗಿ ವಿಲೇವಾರಿ ಮಾಡಬೇಕು.
- ಮತ್ತು ಗಣೇಶಮೂರ್ತಿ ಪ್ರತಿಷ್ಟಾಪನೆ ವೇಳೆ ರಾತ್ರಿ 10 ರಿಂದ ಬೆಳಗ್ಗೆ 6 ಗಂಟೆ ಅವಧಿಯಲ್ಲಿ ಯಾವುದೇ ರೀತಿಯ ಧ್ವನಿವರ್ಧಕಗಳನ್ನು ಅಥವಾ ಧ್ವನಿಯನ್ನುಂಟು ಮಾಡುವ ಡೋಲು, ತಮ್ಮಟೆ, ಜಾಗಟೆ ಇತ್ಯಾದಿ ಇವುಗಳನ್ನು ತುರ್ತು ಸಮಯವನ್ನು ಹೊರತುಪಡಿಸಿ ಉಳಿದ ಸಂದರ್ಭಗಳಲ್ಲಿ ನಿಷೇಧ
- ಗೌರಿಗಣೇಶ ಹಬ್ಬದ ಸಂದರ್ಭದಲ್ಲಿ ಹಸಿರು ಪಟಾಕಿಗಳನ್ನು ನಿಗಧಿತ ಸಮಯದಲ್ಲಿ ಮಾತ್ರ ಸಿಡಿಸಬೇಕು
- ಗಣೇಶ ಹಬ್ಬದಲ್ಲಿ ರಸ್ತೆ ಮತ್ತು ಚರಂಡಿಗಳಲ್ಲಿ, ಲೋಟ, ಎಲೆ ಎಸೆಯಬೇಡಿ, ಮನೆಯ ಹತ್ತಿರ ಬರುವ ಸ್ಥಳೀಯ ಸಂಸ್ಥೆಗಳ ಕಸದ ವಾಹನಗಳಿಗೆ ಹಾಕಿ
- ಗೌರಿಗಣೇಶ ಹಬ್ಬದ ಸಂದರ್ಭದಲ್ಲಿ ಅಲಂಕಾರಕ್ಕಾಗಿ ನಿಷೇಧಿತ ಏಕ ಬಳಕೆ ಪ್ಲಾಸ್ಟಿಕ್ ವಸ್ತುಗಳನ್ನು ಬಳಸದೆ ಪರಿಸರ ಸ್ನೇಹಿಯಾಗಿ ಆಚರಿಸಬೇಕು
- ಪ್ಲಾಸ್ಟರ್ ಆಫ್ ಪ್ಯಾರೀಸ್ ಮೂರ್ತಿಗಳ ವಿಸರ್ಜನೆಯಿಂದಾಗಿ ಜಲಮೂಲಗಳು ಕಲುಷಿತವಾಗುತ್ತಿದ್ದು, ಅದರಂತೆ ಯಾವುದೇ ರಾಸಾಯನಿಕ ಬಣ್ಣ ಸಹಿತ ಪ್ಲಾಸ್ಟರ್ ಆಫ್ ಪ್ಯಾರೀಸ್ ವಿಗ್ರಹಗಳನ್ನು ಯಾವುದೇ ನೀರಿನ ಮೂಲಗಳಲ್ಲಿ ವಿಸರ್ಜಿಸುವುದನ್ನು ನಿಷೇಧಿಸಲಾಗಿರುತ್ತದೆ
- ತಯಾರಿಕೆ, ಸಾಗಾಣಿಕೆ, ಮಾರಾಟ ಸಹ ಮಾಡಬಾರದು. ತಪ್ಪಿದ್ದಲ್ಲಿ, ಜಲಮಾಲಿನ್ಯ ಕಾಯ್ದೆಯನ್ವಯ ಸೂಕ್ತ ಕ್ರಮ ಜರುಗಿಸಲಾಗುವುದು
ಸಾರ್ವಜನಿಕರು ಪ್ಲಾಸ್ಟರ್ ಆಫ್ ಪ್ಯಾರೀಸ್ನಿಂದ ತಯಾರಿಸಿದ ಗಣೇಶ ಮೂರ್ತಿಗಳನ್ನು ಖರೀದಿಸದೆ, ಮಣ್ಣಿನಿಂದ ತಯಾರಿಸಿದ ಗಣೇಶ ಮೂರ್ತಿಗಳನ್ನು ಹಾಗೂ ನೈಸರ್ಗಿಕ ಬಣ್ಣ ಲೇಪಿತ ಮೂರ್ತಿಗಳನ್ನು ಖರೀದಿಸಿ ಪರಿಸರಯುಕ್ತ ಗೌರಿ ಮತ್ತು ಗಣೇಶ ಹಬ್ಬವನ್ನು ಆಚರಿಸಬೇಕೆಂದು ಅವರು ತಿಳಿಸಿದ್ದಾರೆ.



