ದಾವಣಗೆರೆ: ಹಾಸ್ಟೆಲ್ ವಿದ್ಯಾರ್ಥಿಗಳ ಆರೋಗ್ಯ ದೃಷ್ಠಿಯಿಂದ ರಾಜ್ಯದಲ್ಲಿಯೇ ಮೊದಲು ಬಾರಿಗೆ ಜಿಲ್ಲೆಯಲ್ಲಿ ಆರೋಗ್ಯ ಕಾರ್ಡ್ ವಿತರಿಸುವ ವಿನೂತನ ಯೋಜನೆಗೆ ಜನವರಿ ಮೊದಲ ವಾರ ಚಾಲನೆ ದೊರೆಯಲಿದೆ ಎಂದು ಜಿಲ್ಲಾ ಪಂಚಾಯ್ತಿ ಸಿಇಒ ಗಿತ್ತೆ ಮಾಧವ ವಿಠ್ಠಲ್ ರಾವ್ ತಿಳಿಸಿದ್ದಾರೆ.
ತಾಯಿ ಕಾರ್ಡ್ ಮಾದರಿಯಲ್ಲಿ ಆರೋಗ್ಯ ಕಾರ್ಡ್
ನಗರದ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ಜಿಲ್ಲಾ ಮಟ್ಟದ ಅಂಗವಿಕಲ ಪುನರ್ವಸತಿ ಕಾರ್ಯಕರ್ತರ ಕಾರ್ಯಾಗಾರದಲ್ಲಿ ‘ಮಕ್ಕಳ ರಕ್ಷಣೆ ಕುರಿತ ಅರಿವು’ ಮೂಡಿಸಲಾಯಿತು. ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಹಾಗೂ ಮಕ್ಕಳ ರಕ್ಷಣಾ ನಿರ್ದೇಶನಾಲಯದ ವತಿಯಿಂದ ಹಮ್ಮಿಕೊಂಡಿದ್ದ ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳು ಪಾಲ್ಗೊಂಡು ಅವರು ಮಾತನಾಡಿದರು.2026ರ ಜನವರಿ 1ರಿಂದ ಜಿಲ್ಲೆಯ ಹಾಸ್ಟೆಲ್ಗಳಲ್ಲಿರುವ 20 ಸಾವಿರ ವಿದ್ಯಾರ್ಥಿಗಳಿಗೆ ತಾಯಿ ಕಾರ್ಡ್ ಮಾದರಿಯಲ್ಲಿ ಆರೋಗ್ಯ ಕಾರ್ಡ್ ನೀಡಲಾಗುವುದು ಎಂದು ತಿಳಿಸಿದರು.
ವೈದ್ಯರು ಪ್ರತಿ ತಿಂಗಳು ಹಾಸ್ಟೆಲ್ ಭೇಟಿ ಕಡ್ಡಾಯ
ವೈದ್ಯರು ಪ್ರತಿ ತಿಂಗಳು ಕಡ್ಡಾಯವಾಗಿ ಹಾಸ್ಟೆಲ್ಗೆ ಭೇಟಿ ನೀಡಿ ಮಕ್ಕಳ ಆರೋಗ್ಯ ತಪಾಸಣೆ ನಡೆಸಲಿದ್ದಾರೆ. ತಪಾಸಣೆ ನಂತರ ಮಾಹಿತಿಯನ್ನು ಕಾರ್ಡ್ನಲ್ಲಿ ದಾಖಲಿಸಿ ವೈದ್ಯರು ದೃಢೀಕರಿಸಬೇಕು. ವಾರ್ಡನ್ ದೃಢೀಕರಿಸಿ, ವಿದ್ಯಾರ್ಥಿ ಸಹಿ ಮಾಡಬೇಕು ಎಂದು ಹೇಳಿದರು.
ಆರೋಗ್ಯ ಸಮಸ್ಯೆ ಕಂಡುಬಂದಲ್ಲಿ ತಕ್ಷಣವೇ ಮ್ಯಾಪ್ ಮಾಡಲಾದ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುವುದು. ಈ ಬಗ್ಗೆ ಪೋಷಕರಿಗೆ ಮಾಹಿತಿ ನೀಡುವ ಜವಾಬ್ದಾರಿ ವಾರ್ಡನ್ಗಳ ಮೇಲಿರುತ್ತದೆ.
ಯಾದಗಿರಿ, ಕೊಪ್ಪಳ ಸೇರಿದಂತೆ ರಾಜ್ಯದ ವಿವಿಧೆಡೆ ಹಾಸ್ಟೆಲ್ ವಿದ್ಯಾರ್ಥಿನಿಯರ ಮೇಲೆ ನಡೆದ ದೌರ್ಜನ್ಯ ಹಾಗೂ ಗರ್ಭಧಾರಣೆಯಂತಹ ಘಟನೆಗಳು ಮರುಕಳಿಸದಂತೆ ತಡೆಯಲು ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ ಎಂದರು.
ಸಮಾಜದಲ್ಲಿ ಬಾಲ್ಯವಿವಾಹ ಪದ್ಧತಿ ಇಂದಿಗೂ ಮಾರಕವಾಗಿದೆ ಎಂದು ಕಳವಳ ವ್ಯಕ್ತಪಡಿಸಿದ ಸಿಇಒ, ಹತ್ತನೇ ತರಗತಿ ನಂತರ ಪೋಷಕರು ಮದುವೆಗೆ ಮುಂದಾಗುತ್ತಿರುವುದು ಹೆಣ್ಣುಮಕ್ಕಳ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ ಎಂದರು.
ಸಮಾಜದಲ್ಲಿ ಪ್ರತಿಯೊಬ್ಬರಿಗೂ ಸಮಾನ ಅವಕಾಶಗಳು ಸಿಗಬೇಕು, ಅದರಲ್ಲೂ ವಿಶೇಷವಾಗಿ ವಿಶೇಷಚೇತನ ಮಕ್ಕಳ ಹಕ್ಕುಗಳನ್ನು ಸಬಲೀಕರಣಗೊಳಿಸುವುದು ಹಾಗೂ ಅವರಿಗೆ ಪ್ರೋತ್ಸಾಹ ನೀಡುವುದು ನಮ್ಮೆಲ್ಲರ ಆದ್ಯ ಕರ್ತವ್ಯ. ಅಧಿಕಾರಿಗಳು ಕೇವಲ ಔಪಚಾರಿಕವಾಗಿ ಕೆಲಸ ಮಾಡದೆ, ಸರ್ಕಾರದ ಸೌಲಭ್ಯಗಳು ನಿಜವಾದ ಫಲಾನುಭವಿಗಳಿಗೆ ತಲುಪುವಂತೆ ನೋಡಿಕೊಳ್ಳಬೇಕು ಎಂದು ಅವರು ಸೂಚಿಸಿದರು.
ವಿಶೇಷಚೇತನರು ಮನಸ್ಸು ಮಾಡಿದರೆ ಏನನ್ನೂ ಸಾಧಿಸಬಹುದು ಎಂಬುದಕ್ಕೆ ತಮ್ಮ ಬ್ಯಾಚ್ಮೇಟ್ ಆಗಿದ್ದ ಜಯಂತ್ ಅವರ ಉದಾಹರಣೆ ನೀಡುತ್ತಾ, `ಅವರಿಗೆ ಎರಡು ಕಣ್ಣುಗಳು ಕಾಣಿಸದಿದ್ದರೂ, ಪ್ರಸ್ತುತ ಗುಜರಾತ್ನಲ್ಲಿ ಐಎಎಸ್ ಅಧಿಕಾರಿಯಾಗಿ ಅತ್ಯುತ್ತಮವಾಗಿ ಸೇವೆ ಸಲ್ಲಿಸುತ್ತಿದ್ದಾರೆ’ ಕಣ್ಣಿದ್ದವರು ಕೂಡ ಮಕ್ಕಳ ರಕ್ಷಣೆ ಮಾಡದೆ ನಿರ್ಲಕ್ಷ್ಯ ವಹಿಸಿದರೆ ಆ ಕಣ್ಣುಗಳಿಂದ ಪ್ರಯೋಜನವಿಲ್ಲ ಎಂದು ಮಾರ್ಮಿಕವಾಗಿ ನುಡಿದರು.
ಜಿಲ್ಲೆಯಲ್ಲಿ ಬಾಲ್ಯವಿವಾಹ ಮುಕ್ತ, ಪೋಕ್ಸೋ ಪ್ರಕರಣ ರಹಿತ ಹಾಗೂ ಬಾಲಕಾರ್ಮಿಕ ಪದ್ಧತಿ ಮುಕ್ತ ವಾತಾವರಣ ನಿರ್ಮಿಸುವುದು ನಮ್ಮ ಮುಖ್ಯ ಉದ್ದೇಶವಾಗಿದೆ ಎಂದು ವಿಠ್ಠಲ್ ರಾವ್ ಹೇಳಿದರು.
ಹಾವೇರಿ ಪೊಲೀಸ್ ಇಲಾಖೆಯ ಮಲ್ಲಪ್ಪ ಆರ್. ಜಾಲಗಾರ್ ಮಕ್ಕಳ ಹಕ್ಕುಗಳ ರಕ್ಷಣೆ ಕುರಿತು ಮಾತನಾಡಿದರು. ಹೆಚ್ಚುವರಿ ಎಸ್ಪಿ ಪರಮೇಶ್ವರ್ ಹೆಗಡೆ, ಡಿಡಿಪಿಐ ಜಿ.ಕೊಟ್ರೇಶ್, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಡಾ.ಕೆ.ಕೆ. ಪ್ರಕಾಶ್, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ಮಂಜುಳಾ, ಜಿಲ್ಲಾ ನಿರೂಪಣಾಧಿಕಾರಿ ಗುರುಪ್ರಸಾದ್ ಇದ್ದರು.



