ಡಿವಿಜಿಸುದ್ದಿ, ಬೆಂಗಳೂರು: ಕೊರೊನಾ ವೈರಸ್ ಗೆ ಕಲಬುರಗಿಯಲ್ಲಿ ವ್ಯಕ್ತಿಯೊಬ್ಬರು ಬಲಿಯಾಗಿದ್ದು, ಈ ಬಗ್ಗೆ ಮಾಹಿತಿ ನೀಡಬೇಕಾದ ಆರೋಗ್ಯ ಸಚಿವ ಶ್ರೀರಾಮುಲು ಕಾಣುತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ, ಕಲಬುರಗಿಯಲ್ಲಿ ವೃದ್ಧ ಕೊರೊನಾದಿಂದ ಮೃತಪಟ್ಟಿದ್ದಾರೆ ಎಂದು ವೈದ್ಯರು ಅಧಿಕೃತ ಪಡಿಸಿದ್ಧಾರೆ. ಈ ಬಗ್ಗೆ ಮಾಹಿತಿ ನೀಡಬೇಕಾದ ಆರೋಗ್ಯ ಸಚಿವರು ಎಲ್ಲಿದ್ದಾರೆ ಎಂದು ಪ್ರಶ್ನಿಸಿದ್ದಾರೆ. ಕಲಬುರಗಿ ಶಾಸಕ ಪ್ರಿಯಾಂಕ್ ಖರ್ಗೆ ಜೊತೆ ಮಾತಾಡಿದೆ. ಒಂದು ಸಾವಾಗಿರೋದು ಇಡೀ ರಾಜ್ಯ ದೇಶಕ್ಕೆ ಗೊತ್ತಾಗಿದೆ. ಆದರೆ ಆರೋಗ್ಯ ಸಚಿವರು ಮಾಹಿತಿ ಕೊಡುತ್ತಿಲ್ಲಎಂದರು.
ಇಂತಹ ಪರಿಸ್ಥಿತಿಯಲ್ಲಿ ಪ್ರತಿ ನಿಮಿಷ ಇಲಾಖೆಯ ಅಧಿಕಾರಿಗಳ ನಿತಂತರ ಸಂಪರ್ಕ ಸಾಧಿಸಿ ಕೆಲಸ ಮಾಡಬೇಕು. ಆದರೆ, ಆರೋಗ್ಯ ಸಚಿವರು ಮಾಹಿತಿ ಕೊಡ್ತಿಲ್ಲ. ಈ ಬಗ್ಗೆ ಆರೋಗ್ಯ ಸಚಿವ ಹಾಗೂ ವೈದ್ಯಕೀಯ ಸಚಿವರಿಗೆ ಮಾಹಿತಿ ಇದೆಯೋ ಇಲ್ಲವೋ ಗೊತ್ತಿಲ್ಲ ಎಂದರು.
ಆರೋಗ್ಯ ಸಚಿವರು ಜನರಲ್ಲಿನ ಭಯ ಓಡಿಸುವ ಕೆಲಸ ಮಾಡಬೇಕು. ಮುಂಜಾಗ್ರತಾ ಕ್ರಮಗಳ ಬಗ್ಗೆ ಜಾಗೃತಿ ಮೂಡಿಸಬೇಕು. ಬಸ್ಸು, ರಸ್ತೆ, ವಿಮಾನ ನಿಲ್ದಾಣ ಎಲ್ಲಾ ಕಡೆ ಮುಂಜಾಗೃತಾ ಕ್ರಮದ ಬಗ್ಗೆ ಮಾಹಿತಿ ನೀಡಬೇಕು. ಪರೀಕ್ಷಾ ಕೇಂದ್ರಗಳನ್ನು ಹೆಚ್ಚು ಮಾಡಬೇಕು. ಸದನದಲ್ಲಿ ಈ ಬಗ್ಗೆ ಪ್ರಸ್ತಾಪ ಮಾಡುವುದಾಗಿ ತಿಳಿಸಿದರು.



